
ಪ್ರಜಾವಾಣಿ ವಾರ್ತೆ
ಹನೂರು: ತಾಲ್ಲೂಕಿನ ಗಂಗನದೊಡ್ಡಿ ದೊಡ್ಡಿ ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗುರುವಾರ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿನೀಡಿ ಸಭೆ ನಡೆಸಿತು.
ಮಲೆ ಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿರಾಜ್, ವಲಯ ಅರಣ್ಯಾಧಿಕಾರಿ ಕೆ.ಎಂ.ನಾಗರಾಜು ಹಾಗೂ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಅವರನ್ನೊಳಗೊಂಡ ತಂಡ ಗ್ರಾಮಕ್ಕೆ ಭೇಟಿನೀಡಿ ಚಿರತೆ ಹಾವಳಿ ತಡೆಯುವ ನಿಟ್ಟಿನಲ್ಲಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು.
ಈಚೆಗೆ ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗಿದ್ದು ತಡೆಯುವ ನಿಟ್ಟಿನಲ್ಲಿ ಶಾಶ್ವತ ಪರಿಹಾರ ರೂಪಿಸಬೇಕು. ಪ್ರಾಣಿಗಳು ಹೊರಬರುವ ಜಾಗಗಳಲ್ಲಿ ರೈಲ್ವೆ ಕಂಬಿಗಳನ್ನು ತುರ್ತು ನಿರ್ಮಿಸಬೇಕು. ಕಾಡು ಪ್ರಾಣಿಗಳ ಹಾವಳಿಯಿಂದ ಫಸಲು ನಾಶವಾಗುತ್ತಿದ್ದು ಜೀವಭಯ ಕಾಡುತ್ತಿದೆ. ಜೊತೆಗೆ ಕಾಡು ಹಂದಿಗಳ ಹಾವಳಿ ಹೆಚ್ಚಾಗಿದ್ದು ನಿಯಂತ್ರಿಸಲು ತುರ್ತು ಕ್ರಮ ಕೈಗೊಳ್ಳಬೇಕು, ಬೆಳೆ ನಷ್ಟಕ್ಕೊಳಗಾದ ರೈತರಿಗೆ ಶೀಘ್ರ ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿದರು.
‘ಡಿಸಿಎಫ್ ಭಾಸ್ಕರ್ ಗಂಗನ ದೊಡ್ಡಿ ಗ್ರಾಮದ ಸುತ್ತಮುತ್ತ ಚಿರತೆ ಹಾವಳಿ ಇರುವ ಪ್ರದೇಶಕ್ಕೆ ಭೇಟಿನೀಡಿ ಮಾತನಾಡಿ, ಚಿರತೆಗಳ ಚಲನವಲನವನ್ನು ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಉಪಟಳ ನೀಡುತ್ತಿರುವ ಚಿರತೆ ಸೆರೆ ಹಿಡಿಯಲು ಮೈಸೂರಿನಿಂದ ಚಿರತೆ ಕಾರ್ಯಪಡೆಯನ್ನು ಕರೆಸಿಕೊಳ್ಳಲಾಗುವುದು’ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಿಬ್ಬಂದಿ ನಂದೀಶ್, ಚಿನ್ನಸ್ವಾಮಿ, ವಿನಾಯಕ್, ಅಶೋಕ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.