ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಶಾಸಕ ಸಿ.ಪುಟ್ಟರಂಗಶೆಟ್ಟಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಗೃಹ ಆರೋಗ್ಯ ಯೋಜನೆಗೆ ಚಾಲನೆ ನೀಡಿದರು
ಚಾಮರಾಜನಗರ: ಮನೆ ಬಾಗಿಲಿಗೆ ಬಂದು ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ ಔಷಧ ವಿತರಿಸುವ ಗೃಹ ಆರೋಗ್ಯ ಯೋಜನೆಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಗುರುವಾರ ಚಾಲನೆ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಸ್ವತಃ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಮೋನಾ ರೋತ್ ಸ್ವಗೃಹದಲ್ಲಿ ಆರೋಗ್ಯ ತಪಾಸಣೆಗೆ ಒಳಗಾಗುವ ಮೂಲಕ ಗೃಹ ಆರೋಗ್ಯ ಯೋಜನೆಗೆ ಚಾಲನೆ ನೀಡಿದರು.
ಶಾಸಕ ಪುಟ್ಟರಂಗಶೆಟ್ಟಿ ಮಾತನಾಡಿ, ‘ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತರು ಮನೆಗೆ ಬಂದಾಗ ಸಾರ್ವಜನಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡು, ಸಮಸ್ಯೆಗಳು ಕಂಡುಬಂದರೆ ಸೂಕ್ತ ಚಿಕಿತ್ಸೆ ಪಡೆಯಬೇಕು. ವೈದ್ಯರ ಸಲಹೆ ಪಡೆದುಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಮಾತನಾಡಿ, ‘ಗೃಹ ಆರೋಗ್ಯ ಯೋಜನೆಯಡಿ ಜನರ ಮನೆಗಳಿಗೆ ಭೇಟಿ ನೀಡಿ ಆರೋಗ್ಯ ಪರೀಕ್ಷೆ ನಡೆಸಲಾಗುತ್ತದೆ. ನಾಗರಿಕರು ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್, ಆರೋಗ್ಯಾಧಿಕಾರಿಗಳು, ಪ್ರಯೋಗಾಲಯದ ತಂತ್ರಜ್ಞರು, ಮುಖಂಡರು ಭಾಗವಹಿಸಿದ್ದರು.
‘ತಜ್ಞ ಚಿಕಿತ್ಸೆಗೆ ಸಲಹೆ’
ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಸುಂದರೇಶ್ ಮಾತನಾಡಿ ‘ಗೃಹ ಆರೋಗ್ಯ ಸಿಬ್ಬಂದಿ ಆರೋಗ್ಯ ಸಮಸ್ಯೆ ಇರುವವರನ್ನು ಗುರುತಿಸಿ ತಜ್ಞ ವೈದ್ಯರಲ್ಲಿ ಸಲಹೆ ಮತ್ತು ಚಿಕಿತ್ಸೆ ಪಡೆಯಲು ಸಲಹೆ ನೀಡಲಿದ್ದಾರೆ. ಅಧಿಕ ರಕ್ತದೊತ್ತಡ ಮಧುಮೇಹ ಡಯಾಬಿಟಿಕ್ ಫೂಟ್ ಡಯಾಬಿಟಿಕ್ ರೆಟಿನೋಪತಿ ಬಾಯಿ ಹಾಗೂ ಸ್ತನ ಗರ್ಭಕಂಠದ ಕ್ಯಾನ್ಸರ್ ದೀರ್ಘಕಾಲದ ಮೂತ್ರಪಿಂಡ(ಕಿಡ್ನಿ) ಕಾಯಿಲೆ ಲಿವರ್ ತೊಂದರೆ ರಕ್ತ ಹೀನತೆ ಮಾನಸಿಕ ಆರೋಗ್ಯ ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ ನರ ರೋಗದಂತಹ 14 ಅಸಂಕ್ರಾಮಿಕ ರೋಗಗಳ ಪತ್ತೆಗೆ ತಪಾಸಣೆ ನಡೆಸಿ ಸಮಾಲೋಚನೆ ನಡೆಸಿ ಚಿಕಿತ್ಸೆ ನೀಡಲಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.