
ಎನ್.ಮಹೇಶ್, ರಾಜ್ಯ ಬಿಜೆಪಿ ಉಪಾಧ್ಯಕ್ಷ
ಚಾಮರಾಜನಗರ: ರಾಜ್ಯ ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಆಡಳಿತ ಶೂನ್ಯ ಸಾಧನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಟೀಕಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನು ಪೂರೈಸಿದ್ದು ಈ ಅವಧಿಯಲ್ಲಿ ಅಭಿವೃದ್ಧಿಯಾಗಲಿ, ಸಾಧನೆಯಾಗಲಿ ಆಗಿಲ್ಲ; ಬದಲಾಗಿ, ಸಾವಿರಾರು ಸಮಸ್ಯೆಗಳನ್ನು ಸೃಷ್ಟಿಯಾಗಿವೆ ಎಂದು ವ್ಯಂಗ್ಯವಾಡಿದರು.
ಸಾವಿರ ದಿನಗಳಲ್ಲಿ 1.37 ಲಕ್ಷ ಕುಟುಂಬಗಳಿಗೆ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ 1.13 ಲಕ್ಷ ಕೋಟಿ ಹಣವನ್ನು ತಲುಪಿಸಿರುವುದಾಗಿ, ರಾಜ್ಯದ ತಲಾ ಆದಾಯ ಹೆಚ್ಚಿಸಿರುವುದಾಗಿ, ಅಭಿವೃದ್ಧಿ ಯೋಜನೆಗಳಿಗೆ 1 ಲಕ್ಷ ಕೋಟಿ ಬಳಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಬೆನ್ನು ತಟ್ಟಿಕೊಂಡಿದ್ದಾರೆ.
ಮಹಿಳೆಗೆ ₹ 2000 ಕೊಟ್ಟು ಪತಿಯ ಜೇಬಿನಿಂದ 10 ಸಾವಿರ ಕಿತ್ತುಕೊಂಡಿರುವ ಕಾಂಗ್ರೆಸ್ ಸರ್ಕಾರ ಕೆಟ್ಟ ಆರ್ಥಿಕ ವ್ಯವಸ್ಥೆ ಅನುಷ್ಠಾನಗೊಳಿಸಿದೆ. ಆಸ್ಪತ್ರೆಯಲ್ಲಿ ಚೀಟಿ ಶುಲ್ಕ ಹೆಚ್ಚಳದಿಂದ ಹಿಡಿದು ಆರ್ಟಿಸಿವರೆಗೆ ದರ ಹೆಚ್ಚಿಸಲಾಗಿದೆ. ಮದ್ಯದ ದರವನ್ನು ಶೇ 20ರಷ್ಟು ಏರಿಕೆ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಜನರ ಮೇಲೆ ಆರ್ಥಿಕ ಹೊರೆ ಹೊರಿಸಲಾಗಿದೆ ಎಂದು ಆರೋಪಿಸದಿರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಹಗರಣಗಳು ಹೆಚ್ಚಾಗಿವೆ. ಮೈಸೂರು, ಬೆಂಗಳೂರಿನಲ್ಲಿ ಡ್ರಗ್ಸ್ ತಯಾರಿಕಾ ಜಾಲವನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಹಚ್ಚಿರುವುದು ಗೃಹ ಇಲಾಖೆಯ ವೈಫಲ್ಯಕ್ಕೆ ನಿದರ್ಶನ. ಮೂಡಾ ಹಗರಣದಲ್ಲಿ 30,500 ಕೋಟಿ ಅವ್ಯವಹಾರ ನಡೆದಿದೆ. ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಯ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿ ದಲಿತರಿಗೆ ಅನ್ಯಾಯ ಮಾಡಲಾಗಿದೆ. ವಾಲ್ಮೀಕಿ ನಿಗಮ, ಭೋವಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ದೂರಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡ ಎಸ್.ಬಾಲರಾಜು, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಎನ್.ಬಾಲರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹಾದೇವಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.