ADVERTISEMENT

ಗ್ಯಾರಂಟಿ ಯೋಜನೆ: ಅರ್ಹರಿಗೆ ತೊಂದರೆಯಾಗದಿರಲಿ

ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಚ್.ವಿ.ಚಂದ್ರು ಸೂಚನೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2026, 6:45 IST
Last Updated 1 ಫೆಬ್ರುವರಿ 2026, 6:45 IST
ಚಾಮರಾಜನಗರದ ಹಳೆಯ ಕೆ.ಡಿ.ಪಿ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು
ಚಾಮರಾಜನಗರದ ಹಳೆಯ ಕೆ.ಡಿ.ಪಿ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು   

ಚಾಮರಾಜನಗರ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಅರ್ಹರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಬೇಕು, ತಾಂತ್ರಿಕ ಸಮಸ್ಯೆ ಪರಿಹರಿಸಿ ಯೋಜನೆಗಳ ಲಾಭ ದೊರೆಯುವಂತೆ ಮಾಡಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಚ್.ವಿ.ಚಂದ್ರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಹಳೆಯ ಕೆ.ಡಿ.ಪಿ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಡವರು ಹಾಗೂ ಮಹಿಳೆಯರ ಅರ್ಥಿಕ ಸ್ವಾವಲಂಬನೆಗೆ ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಸಮರ್ಪಕವಾಗಿ ಅನುಷ್ಠಾನಗೊಳಿಸುಬೇಕಾಗಿರುವುದು ಜಿಲ್ಲಾಮಟ್ಟದ ಅಧಿಕಾರಿಗಳ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ.

ಹೋಬಳಿ, ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ಸಭೆಗಳನ್ನು ನಿಯಮಿತವಾಗಿ ನಡೆಸುತ್ತಿರುವ ಪರಿಣಾಮ ತಳಮಟ್ಟದಲ್ಲಿ ಸಮಸ್ಯೆಗಳು  ಅರಿವಿಗೆ ಬರುತ್ತಿದೆ. ಯೋಜನೆಗಳ ಅನುಷ್ಟಾನದಲ್ಲಿ ಎದುರಾಗುವ ಸಮಸ್ಯೆಗಳ್ನು ಅಧಿಕಾರಿಗಳು ತಕ್ಷಣ ಬಗೆಹರಿಸಬೇಕು. ಗೊಂದಲಕ್ಕೆ ಒಳಗಾಗದಂತೆ ಪರಿಣಾಮಕಾರಿಯಾಗಿ ಯೋಜನೆಗಳನ್ನು ತಲುಪಿಸಬೇಕು ಎಂದರು.

ADVERTISEMENT

ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ದೊರೆಯಬೇಕು. ಕಳೆದ ಸಭೆಯ ಅನುಪಾಲನಾ ವರದಿಯನ್ನು ಕಡ್ಡಾಯವಾಗಿ ಅಧಿಕಾರಿಗಳು ಸಭೆಗೆ ಸಲ್ಲಿಸಬೇಕು. ಗ್ರಾಮ ಪಂಚಾಯಿತಿ ಮತ್ತು ಹೋಬಳಿಮಟ್ಟದಲ್ಲಿ ನಡೆಯುವ ಗ್ಯಾರಂಟಿ ಯೋಜನೆಗಳ ಸಭೆಗಳ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಬೇಕಾಗಿರುವುದರಿಂದ ಪ್ರತಿ ತಿಂಗಳು 5ರೊಳಗೆ ವರದಿ ಸಲ್ಲಿಸಬೇಕು.

ಜಿಲ್ಲೆಯಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿ ಹಾಗೂ ಸರ್ಕಾರದ ಕಾರ್ಯಕ್ರಮಗಳಿಗೆ ಗ್ಯಾರಂಟಿ ಯೋಜನೆಗಳ ‌ಸಮಿತಿ ಸದಸ್ಯರನ್ನು ಆಹ್ವಾನಿಸಬೇಕು. ಯೋಜನೆಗಳ ಜಾರಿ ಸಂಬಂಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧ್ಯಕ್ಷ ಚಂದ್ರು ನಿರ್ದೇಶನ ನೀಡಿದರು.

ಗೃಹಲಕ್ಷ್ಮೀ ಯೋಜನೆಯಡಿ ಆದಾಯ ತೆರಿಗೆ ಪಾವತಿಸುವ ಫಲಾನುಭವಿಗಳ ಪಟ್ಟಿಗೆ ಚಿಂದಿ ಹಾಯುವವರು, ಹಂದಿಜೋಗಿಗಳನ್ನು ಸೇರಿಸಿರುವುದು ಕಂಡುಬಂದಿದೆ. ಕೆಲವು ಫಲಾನುಭವಿಗಳಿಗಳಿಗೆ 2 ರಿಂದ 3 ತಿಂಗಳು ಹಣ ಪಾವತಿಯಾಗದಿರುವುದು, ಮನೆಯ ಯಜಮಾನಿ ಮರಣ ಹೊಂದಿದರೆ,  ಮನೆಯ ಹಿರಿಯ ಸದಸ್ಯರನ್ನು ಯೋಜನೆ ವ್ಯಾಪ್ತಿಗೆ ಒಳಪಡಿಸಲು ಕುಟುಂಬದ ಐ.ಡಿ ಮತ್ತು ಇ.ಡಿ.ಸಿ.ಎಸ್‌ನಲ್ಲಿ ತಾಂತ್ರಿಕ ಸಮಸ್ಯೆಯಾಗಿರುವುದು ಕಂಡುಬಂದಿದ್ದು ಸರಿಪಡಿಸಬೇಕು.

ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ ಚಾಲಕರು ಅಜಾಗರೂಕತೆ ವಹಿಸುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು ಬಸ್‌ಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆ ಮಾಡಬೇಕು, ನಿಗದಿತ ಸ್ಥಳಗಳಲ್ಲಿ ಬಸ್‌ಗಳ ನಿಲುಗಡೆಯಾಗದಿರುವ ಬಗ್ಗೆ ದೂರುಗಳಿದ್ದು ಸ್ಪಂದಿಸಬೇಕು ಎಂದರು.

ಅನ್ನಭಾಗ್ಯ ಯೋಜನೆಯಡಿ ಪಡಿತರ ಎತ್ತುವಳಿ ಸಂದರ್ಭ ಬಿಲ್ಲಿಂಗ್ ಪ್ರಕ್ರಿಯೆ ತಡವಾಗುತ್ತಿದ್ದು ಸರಿಪಡಿಸಬೇಕು, ನ್ಯಾಯಬೆಲೆ ಮಾಲೀಕರ ಸಭೆಗೆ ಗ್ಯಾರಂಟಿ ಸಮಿತಿ ಸದಸ್ಯರನ್ನು ಆಹ್ವಾನಿಸಬೇಕು, ಯುವನಿಧಿ ಯೋಜನೆಯಡಿ ಜಿಲ್ಲೆಯ ಯಾವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಲಾಗಿದೆ ಎಂಬ ಮಾಹಿತಿ ಒದಗಿಸದಿರುವುದು.

ಗೃಹಜ್ಯೋತಿ ಯೋಜನೆಗೆ ನೋಂದಣಿಯಾಗಿರುವ ಫಲಾನುಭವಿಗಳಿಂದ ಭದ್ರತಾ ಠೇವಣಿ ಸಂಗ್ರಹಿಸುತ್ತಿರುವುದು ಸೇರಿದಂತೆ ಹಲವು ಸಮಸ್ಯೆಗಳು ಸಭೆಯಲ್ಲಿ ವ್ಯಕ್ತವಾಯಿತು. ಸದಸ್ಯರು ಪ್ರಸ್ತಾಪಿಸಿದ ಸಮಸ್ಯೆಗಳನ್ನು ಪರಿಶೀಲಿಸಿ ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಮಾತನಾಡಿ ಮುಂದಿನ ತಿಂಗಳು ಜಿಲ್ಲೆಯಲ್ಲಿ ಉದ್ಯೋಗ ಮೇಳ ನಡೆಯುತ್ತಿದ್ದು ಕೈಗಾರಿಕೊದ್ಯಮಿಗಳು ಭಾಗವಹಿಸಲಿದ್ದಾರೆ. ಮೇಳದಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಲು ಆದ್ಯತೆ ನೀಡಲಾಗುವುದು. ಗೃಹಲಕ್ಷ್ಮೀ ಯೋಜನೆಯ ತಾಂತ್ರಿಕ ಸಮಸ್ಯೆ ಬಗೆಹರಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಚಾಮರಾಜನಗರ ತಾಲ್ಲೂಕು ಅಧ್ಯಕ್ಷ ಸೋಮೇಶ್ವರ್, ಕೊಳ್ಳೇಗಾಲ ಅಧ್ಯಕ್ಷ ರಾಜೇಂದ್ರ, ಗುಂಡ್ಲುಪೇಟೆ ಅಧ್ಯಕ್ಷ ಎಚ್.ಜಿ. ಉಮಾಪತಿ, ಸದಸ್ಯರಾದ ಕೆ.ಬಿ.ಚಿನ್ನಸ್ವಾಮಿ, ಪ್ರದೀಪ್, ಪ್ರಭು, ನಾಗೇಂದ್ರ ಮೂರ್ತಿ, ರವಿ, ಸಿದ್ದರಾಜು, ಭಾಗ್ಯ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ತಾಲ್ಲೂಕು ಮಟ್ಟದ ಸಭೆ

ಚಾಮರಾಜನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷ ಎಸ್.ಸೋಮೇಶ್ವರ್ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಆರ್ಥಿಕವಾಗಿ ತೀರಾ ಹಿಂದುಳಿದವರ ಆರ್ಥಿಕ ಸ್ವಾವಲಂಬನೆಗೆ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಬೇಕು ಗೃಹಲಕ್ಷ್ಮೀ ಶಕ್ತಿ ಗೃಹ ಜ್ಯೋತಿ ಯುವನಿಧಿ ಅನ್ನಭಾಗ್ಯ ಯೋಜನೆ ಕುರಿತು  ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಿ ವಿಡಿಯೋ ತುಣುಕುಗಳನ್ನು ಫೆ.5ರೊಳಗೆ ಜಿಲ್ಲಾ ಅನುಷ್ಠಾನ ಸಮಿತಿಗೆ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ  ಸೂಚಿಸಿದರು. ಸಭೆಯಲ್ಲಿ ಸದಸ್ಯರಾದ ಮಂಜುಳಾ ಮರಿಯಾಲದಹುಂಡಿ ಕುಮಾರ್ ಮಾದಾಪುರ ಕುಮಾರ್ ಮೂಡಳ್ಳಿ ರಾಜೇಶ್ ರಾಜು ಚಿನ್ನಸ್ವಾಮಿ ಮಲ್ಲಿಕಾರ್ಜುನ್‌ ರಂಗಸ್ವಾಮಿಚಂದುಕಟ್ಟೆಮೋಳೆ ಗಣೇಶ ರಮೇಶ್ ತಾಲ್ಲೂಕು ಪಂಚಾಯಿತಿ ಇಒಗಿರಿಧರ್ ಯೋಜನಾಧಿಕಾರಿ ಕಿರಣ್ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.