
ಚಾಮರಾಜನಗರ: ದಕ್ಷ ಆಡಳಿತಗಾರ ಹಾಗೂ ಭವ್ಯ ವಿಧಾನಸೌಧದ ನಿರ್ಮಾತೃ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಕೊಡುಗೆ ಅಪಾರ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ.ಎಂ.ಬಿ.ಮಂಜೇಗೌಡ ಹೇಳಿದರು.
ನಗರದ ಕೊಳದ ಬೀದಿಯಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಚಾಮರಾಜನಗರ ಟೌನ್ ಒಕ್ಕಲಿಗ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ದಕ್ಷಿಣ ಭಾರತದ ವಾಸ್ತುಶಿಲ್ಪ ಶೈಲಿಯಲ್ಲಿ ಬೆಂಗಳೂರಿನಲ್ಲಿ ವಿಧಾನಸೌಧ ನಿರ್ಮಿಸಿದ ಕೆಂಗಲ್ ಹನುಮಂತಯ್ಯ ಕರ್ನಾಟಕ ಏಕೀಕರಣದ ಹೋರಾಟದಲ್ಲಿ ಮಂಚೂಣಿಯಲ್ಲಿದ್ದರು.
ಸ್ವಾತಂತ್ರ್ಯ ಹೋರಾಟಗಾರ, ದಕ್ಷ ಆಡಳಿತಗಾರ, ಗ್ರಾಮೀಣಾಭಿವೃದ್ಧಿಯ ಹರಿಕಾರರಾಗಿ ಸೇವೆ ಸಲ್ಲಿರುವ ಕೆಂಗಲ್ ಹನುಮಂತಯ್ಯ ದಕ್ಷ ಆಡಳಿತಕ್ಕೆ ಹೆಸರುವಾಸಿಯಾಗಿದ್ದರು. ಅವರ ಸ್ಮರಣೆ ಸಮಾಜದ ಕರ್ತವ್ಯ ಎಂದರು.
ತಾಲ್ಲೂಕು ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಕೆ.ಪುಟ್ಟಸ್ವಾಮಿ ಗೌಡ ಮಾತನಾಡಿ, ಕೆಂಗಲ್ ಹನುಮಂತಯ್ಯ ನಿರ್ಮಿಸಿರುವ ವಿಧಾನಸೌಧ ದೇಶಕ್ಕೆ ಮಾದರಿಯಾಗಿದೆ. ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದು ತಲಕಾಡಿನ ಗಂಗರು ಕಾಲದ ರಾಜರಿಂದ ಪ್ರಸ್ತುತ ಕಾಲಘಟ್ಟದವರೆಗೂ ಹಲವು ನಾಯಕರು ಅಭಿವೃದ್ಧಿಗೆ ಶ್ರಮಿಸಿದ್ದಾರೆ. ನಾಡುಪ್ರಭ ಕೆಂಪೇಗೌಡರು ಜಗತ್ತೇ ನಿಬ್ಬೆರಗಾಗುವಂತೆ ಬೆಂಗಳೂರು ನಗರ ನಿರ್ಮಿಸಿದ್ದಾರೆ. ಒಕ್ಕಲಿಗ ಸಮುದಾಯ ಇತರ ಸಮುದಾಯಗಳ ಜೊತೆ ಹೊಂದಾಣಿಕೆ ಹಾಗೂ ಸಹಬಾಳ್ವೆಯಿಂದ ಬದುಕುತ್ತಿದೆ ಎಂದರು.
ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಸರಳತೆ, ಪ್ರಾಮಾಣಿಕತೆಗೆ ಹೆಸರರಾಗಿದ್ದ ಕೆಂಗಲ್ ಹನುಮಂತಯ್ಯ ಆದರ್ಶ ರಾಜಕಾರಣಿಯಾಗಿದ್ದರು. ಕರ್ನಾಟಕದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡಿದ್ದರು ಎಂದರು.
ಕಾರ್ಯಕ್ರಮದಲ್ಲಿ ಮೈಸೂರು ಮತ್ತು ಚಾಮರಾಜನಗರ ಒಕ್ಕಲಿಗರ ಸಂಘದ ನಿರ್ದೇಶಕ ಪಣ್ಯದಹುಂಡಿ ರಾಜು, ತಾಲ್ಲೂಕು ಒಕ್ಕಲಿಗರ ಸಂಘದ ಉಪಾಧ್ಯಕ್ಷ ಚಿನ್ನುಮುತ್ತು, ಮಣಿ ಮಾಸ್ಟರ್, ಮಹೇಶ್ ಗೌಡ, ಟೌನ್ ಅಧ್ಯಕ್ಷ ಸಿ.ಎನ್.ಮಹೇಶ್, ಪ್ರಧಾನ ಕಾರ್ಯದರ್ಶಿ ಅರುಣ ಕುಮಾರ್ ಗೌಡ, ಖಜಾಂಚಿ ನಾಗೇಂದ್ರ ಗೌಡ, ರಘು, ಹೊಮ್ಮ ಶೇಖರ್, ಲೋಕೇಶ್, ಚಿನ್ನಸ್ವಾಮಿ, ನಾಗೇಂದ್ರ, ಎಲ್ಐಸಿ ರಾಜು, ರಮೇಶ್, ಸುರೇಶ್ ಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.