ಯಳಂದೂರು: ‘ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ 4ನೇ ಸಮ್ಮೇಳನ ಇದೇ 28 ಮತ್ತು 29ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಾಗಲೂರಿನಲ್ಲಿ ನಡೆಯಲಿದ್ದು. 1 ಲಕ್ಷ ಜನರು ಸೇರುವ ನಿರೀಕ್ಷೆ ಇದೆ’ ಎಂದು ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಮಹದೇವ್ ಮುಡಿಗುಂಡ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪರಿಷತ್ ಲೋಗೊ ಬಿಡುಗಡೆ ಮಾಡಿ ಮಾತನಾಡಿದರು.
‘ಈ ಬಾರಿ ಪರಿಷತ್ ಜಿಲ್ಲೆಯ ಡಾ.ರೇಣುಕಾದೇವಿ ಹಾಗೂ ಶಿಕ್ಷಕ ಲಿಂಗರಾಜು ಅವರಿಗೆ ರಾಜ್ಯ ಮಟ್ಟದ ಚೈತನ್ಯ ಶ್ರೀ ಹಾಗೂ ಎಚ್.ಎನ್ ಪ್ರಶಸ್ತಿ ನೀಡಿದೆ. ಮಹಿಳಾಪರ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯ ಸದಸ್ಯರು ಮತ್ತು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ’ ಎಂದರು.
ತಾಲ್ಲೂಕು ಅಧ್ಯಕ್ಷ ಮಹೇಶ್ ಅಮ್ಮನಪುರ ಮಾತನಾಡಿ, ‘ಮೌಢ್ಯತೆ, ಕಂದಾಚಾರ ತಡೆಗಟ್ಟಿ ವೈಚಾರಿಕತೆ ಬೆಳೆಸುವ ನಿಟ್ಟಿನಲ್ಲಿ ಸಂಸ್ಥೆ ನೂರಾರು ಕಾರ್ಯಕ್ರಮ ಆಯೋಜಿಸಿ ಅರಿವು ಮೂಡಿಸಿದೆ. ಪವಾಡದ ಹೆಸರಿನಲ್ಲಿ ಜನರನ್ನು ವಂಚಿಸುವವರ ವಿರುದ್ದ ಜಾಗೃತಿ ಮೂಡಿಸುತ್ತಿದೆ. ಸಂಸ್ಥೆಯಲ್ಲಿ ಹೆಚ್ಚಿನ ಸದಸ್ಯರು ಇದ್ದು ವಿಜ್ಞಾನದ ನಿತ್ಯ ಸತ್ಯಗಳನ್ನು ಪರಿಚಯಿಸುತ್ತಿದ್ದಾರೆ’ ಎಂದು ತಿಳಿಸಿದರು.
ನಿರ್ದೇಶಕರಾದ ಸ್ನೇಕ್ ಮಹೇಶ್, ಚಿಂತಕ ಅಂಬಳೆ ನಾಗೇಶ್, ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸೋಮಣ್ಣ, ಶಿಕ್ಷಕ ಶ್ರೀನಿವಾಸ್, ಮಲ್ಲಿಕಾರ್ಜುನ್ ಹಾಗೂ ಮುಖ್ಯ ಶಿಕ್ಷಕ ನಂಜುಂಡಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.