
ಹನೂರು: ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿಪಿಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆ ಕಾರ್ಯಕರ್ತರು ವಡಕೆಹಳ್ಳ ಗ್ರಾಮದಲ್ಲಿ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಿದರು.
ದಂಟಳ್ಳಿ ಗ್ರಾಮದ ಮೂಲಕ ಕುರಟ್ಟಿ ಹೊಸೂರು, ಶೆಟ್ಟಳ್ಳಿ, ಕೌದಳ್ಳಿ, ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಅಂತರ್ಜಲ ಮಟ್ಟ ಹೆಚ್ಚಿಸಲು, ಕುಡಿಯುವ ನೀರಿನ ಬವಣೆ ನೀಗಿಸಲು ದಂಟಳ್ಳಿ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಡಿಪಿಆರ್ ಸಿದ್ಧಪಡಿಸುವಂತೆ 96 ದಿನಗಳಿಂದ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಡೆಸಲಾಗುತ್ತಿದೆ.
ರೈತರ ಪ್ರತಿಭಟನೆಯಿಂದ ರಸ್ತೆಯ ಎರಡು ಬದಿಗಳಲ್ಲಿ ಕಿಲೋಮೀಟರ್ವರೆಗೆ ವಾಹನಗಳು ಸಾಲುಗಟ್ಟಿ ನಿಂತು ಟ್ರಾಫಿಕ್ ಜಾಮ್ ಉಂಟಾಯಿತು.
ಪ್ರತಿಭಟನ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಎಂ.ಆರ್ ಮಂಜುನಾಥ್, ಜನವರಿ 15ರೊಳಗೆ ಡಿಪಿಆರ್ ಮಾಡಿಸುತ್ತೇನೆ. ಒಂದೊಮ್ಮೆ ಸಾಧ್ಯವಾಗದಿದ್ದರೆ, ನಿಮ್ಮ ಜೊತೆ ಹೋರಾಟಕ್ಕೆ ಕೂರುತ್ತೇನೆ ಎಂದು ಭರವಸೆ ನೀಡಿದ್ದರು. ಜೊತೆಗೆ ಇಬ್ಬರು ಜಿಲ್ಲಾಧಿಕಾರಿಗಳು ಭೇಟಿ ನೀಡಿ ಡಿಪಿಆರ್ ಭರವಸೆ ನೀಡಿದ್ದರು. ಎಲ್ಲ ಭರವಸೆಗಳು ಹುಸಿಯಾಗಿರುವುದರಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಭಟನಕಾರರು ಹೇಳಿದರು.
ರೈತ ಸಂಘದ ಜಿಲ್ಲಾ ಸಂಚಾಲಕ ಶೈಲೇಂದ್ರ ಮಾತನಾಡಿ, ರಾಮಪುರ ಹೋಬಳಿ ವ್ಯಾಪ್ತಿಯಲ್ಲಿ ಕಳೆದ ಹಲವು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಅಂತರ್ಜಲ ಮಟ್ಟ ಕುಸಿದಿದೆ. ಇದರಿಂದ ರೈತರು ಬೇರೆ ರಾಜ್ಯಗಳಿಗೆ ಗುಳೆ ಹೊರಟಿದ್ದಾರೆ. ಈ ಸಮಸ್ಯೆ ಬಗೆಹರಿಸಲು 16 ಕಿ.ಮೀ ಅಂತರದಲ್ಲಿರುವ ಕಾವೇರಿ ನದಿಯಿಂದ ದಂಟಹಳ್ಳಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನ ಮಾಡುವಂತೆ 96 ದಿನಗಳಿಂದ ನಿರಂತರ ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ, ಸಂಬಂಧಪಟ್ಟ ಸಚಿವರು, ಸಂಸದರು ಪ್ರತಿಭಟನ ಸ್ಥಳಕ್ಕೆ ಬಾರದೆ ನಿರ್ಲಕ್ಷ್ಯ ವಹಿಸಿದ್ದಾರೆ. ಜ.31 ರಂದು ವಡಕೆ ಹಳ್ಳ ಗ್ರಾಮದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುವುದಾಗಿ ಪತ್ರಿಕಾಗೋಷ್ಠಿ ಮೂಲಕ ಎಚ್ಚರಿಕೆ ನೀಡಲಾಗಿತ್ತು. ಸೌಜನ್ಯಕ್ಕಾದರೂ ಯಾವುದೇ ಜನ ಪ್ರತಿನಿಧಿ, ಅಧಿಕಾರಿಗಳು ಬಂದು ನಮ್ಮ ಸಮಸ್ಯೆ ಆಲಿಸಲಿಲ್ಲ. ಈ ಭಾಗದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಮುಂದಿನ ದಿನಗಳಲ್ಲಿ ಏತ ನೀರಾವರಿ ಅನುಷ್ಠಾನ ಮಾಡದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಹಿರಿಯ ಮುಖಂಡ ಪೊನ್ನಾಚಿ ಮಹದೇವಸ್ವಾಮಿ ಮಾತನಾಡಿ, ತಮಿಳುನಾಡು ರಾಜ್ಯವು ತನ್ನ ಜನರಿಗೆ ಸಾವಿರಾರು ಅಡಿ ಎತ್ತರ ಪ್ರದೇಶದಿಂದ ಮೂರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುತ್ತಿದೆ. ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿಯೇ ಪೈಪ್ ಲೈನ್ ಅಳವಡಿಸಿದ್ದಾರೆ. ನಮ್ಮ ರಾಜ್ಯಕ್ಕೆ ಒಂದು ಕಾನೂನು, ನೆರೆಯ ರಾಜ್ಯಕ್ಕೆ ಒಂದು ಕಾನೂನು ಇದೆಯೇ? ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ಚರ್ಚೆ ನಡೆಸಿ ಸೂಕ್ತ ನಿರ್ಧಾರಕ್ಕೆ ಬಂದು ಈ ಭಾಗದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಎಲ್ಲ ಹೋರಾಟಕ್ಕೂ ಸಿದ್ಧ ಎಂದರು.
ಪ್ರತಿಭಟನ ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ, ಪ್ರತಿಭಟನಕಾರರ ಮನವಿ ಆಲಿಸಿ, ಈ ಭಾಗದಲ್ಲಿ ಅಂತರ್ಜಲ ಮಟ್ಟ ಕಡಿಮೆಯಾಗಿ, ಕುಡಿಯುವ ನೀರಿನ ಸಮಸ್ಯೆ ಇರುವುದನ್ನು ಈಗಾಗಲೇ ಸರ್ಕಾರದ ಗಮನಕ್ಕೆ ತರಲಾಗಿದೆ. ಜಿಲ್ಲಾಧಿಕಾರಿ ಸಹ ಸಮಸ್ಯೆಯ ಬಗ್ಗೆ ಸರ್ಕಾರಕ್ಕೆ ವರದಿ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚೆ ನಡೆಸಿ ದಿನಾಂಕ ನಿಗದಿ ಮಾಡಿ, ರೈತ ಮುಖಂಡರ ಜೊತೆ ಚರ್ಚೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮ ವಹಿಸಲಾಗುವುದು ಎಂದರು.
ಪ್ರತಿಭಟನಕಾರರು ದಿನಾಂಕ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು. ಆದರೆ ಹೆಚ್ಚುವರಿ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರ ಸಭೆಯ ದಿನಾಂಕವನ್ನು ನಾನು ನಿಗದಿ ಮಾಡಲು ಸಾಧ್ಯವಿಲ್ಲ. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ದಿನಾಂಕ ನಿಗದಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.