ADVERTISEMENT

ಸದಾಶಿವ ಆಯೋಗದ ವರದಿ ಅಂಗೀಕರಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 13:15 IST
Last Updated 5 ಸೆಪ್ಟೆಂಬರ್ 2020, 13:15 IST
ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಗಯ ಸಚಿವ ಸಂಪುಟದಲ್ಲಿ ಅಂಗೀಕರಿಸುವಂತೆ ಒತ್ತಾಯಿಸಿ ಮಾದಿಗ ಸಮುದಾಯದ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌ ಅವರಿಗೆ ಮನವಿ ಸಲ್ಲಿಸಿದರು
ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಗಯ ಸಚಿವ ಸಂಪುಟದಲ್ಲಿ ಅಂಗೀಕರಿಸುವಂತೆ ಒತ್ತಾಯಿಸಿ ಮಾದಿಗ ಸಮುದಾಯದ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌ ಅವರಿಗೆ ಮನವಿ ಸಲ್ಲಿಸಿದರು   

ಚಾಮರಾಜನಗರ: ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎ.ಜೆ.ಸದಾಶಿವ ನೇತೃತ್ವದ ಆಯೋಗ ನೀಡಿರುವ ವರದಿಯನ್ನು ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಅಂಗೀಕರಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಜಿಲ್ಲಾ ಬಾಬು ಜಗಜೀವನರಾಂ ಒಕ್ಕೂಟ, ಮಾದಿಗ ಮೀಸಲಾತಿ ಹೋರಾಟ ಸಮಿತಿ ಒತ್ತಾಯಿಸಿದೆ.

ಈ ಸಂಬಂಧ ಮಾದಿಗ ಸಮುದಾಯದ ಮುಖಂಡರು, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್ ಅವರ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಸೇರಿದ ಸಮುದಾಯದ ಮುಖಂಡರು, ‘ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಅಧ್ಯಯನ ಮಾಡಿರುವ ಸುಪ್ರೀಂ ಕೋರ್ಟ್‌, ಪರಿಶಿಷ್ಟ ಜಾತಿಯ ಶೋಷಿತ ಸಮುದಾಯಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ವರ್ಗೀಕರಣ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವುದನ್ನು ರಾಜ್ಯದ ಮಾದಿಗ ಸಮುದಾಯ ಸ್ವಾಗತಿಸುತ್ತದೆ. ಮಾದಿಗ ಸಮುದಾಯವುರಾಜಕೀಯವಾಗಿ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ, ಸಾಮಾಜಿಕವಾಗಿ ತೀರಾ ಹಿಂದುಳಿದ್ದು, ಸಮುದಾಯದವರು ಕಷ್ಟದ ಬದುಕನ್ನು ಸಾಗಿಸುತ್ತಿದ್ದಾರೆ.25 ವರ್ಷಗಳಿಂದ ಮೀಸಲಾತಿಗಾಗಿ ಹೋರಾಟ ಮಾಡುತ್ತಾ ಬಂದಿದ್ದೇವೆ. ಮಾದಿಗರ ಮೇಲೆ ಈಗಲೂ ಕೊಲೆ ದೌರ್ಜನ್ಯ, ಶೋಷಣೆ ನಡೆಯುತ್ತಿದೆ. ಇದರಿಂದ ಇಡೀ ಸಮುದಾಯ ದುರ್ಬಲಗೊಂಡಿದೆ’ ಎಂದು ಮನವಿಯಲ್ಲಿ ಹೇಳಲಾಗಿದೆ.

ADVERTISEMENT

‘ಸಂವಿಧಾನ ಬದ್ಧವಾದಹಕ್ಕುಗಳು ತುಳಿತಕ್ಕೊಳಗಾದ ಎಲ್ಲಾ ಶೋಷಿತ ಸಮುದಾಯಗಳಿಗೆ ಸಿಗಬೇಕು, ಅವರು ಸ್ವಾಭಿಮಾನದಿಂದ ಬದುಕು ಸಾಗಿಸುವಂತಾಗಬೇಕು ಎಂದುಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದಾರೆ. ಆದರೆ, ಇಂದು ಅಸ್ಪೃಶ್ಯದಲ್ಲದವರು ಅಧಿಕಾರ, ಸವಲತ್ತುಗಳನ್ನು ನಮ್ಮಿಂದ ಕಿತ್ತುಕೊಂಡಿದ್ದಾರೆ. ನಿಜವಾದ ಅಸ್ಪೃಶ್ಯರೆಂದರೆ ಹೊಲೆ, ಮಾದಿಗರು ಹಾಗೂ ಪೌರಕಾರ್ಮಿಕರು. ಇವರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾಗಿ ವರ್ಗೀಕರಣ ಮಾಡಬೇಕು. ತಮಿಳುನಾಡು, ಪಂಜಾಬ್, ಆಂದ್ರಪ್ರದೇಶ ಮತ್ತು ಉತ್ತರಪ್ರದೇಶ ರಾಜ್ಯಗಳ ಮಾದರಿಯಲ್ಲಿ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಮೀಸಲಾತಿ ವರ್ಗೀಕರಣ ಆಗಬೇಕು’ ಎಂದು ಮುಖಂಡರು ಒತ್ತಾಯಿಸಿದರು.

ಬಾಬು ಜಗಜೀವನರಾಂ ಒಕ್ಕೂಟದ ಜಿಲ್ಲಾಧ್ಯಕ್ಷ ಎಂ.ಶಿವಮೂರ್ತಿ, ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಬಸವನಪುರ ರಾಜಶೇಖರ್, ಪುರಸಭಾ ಮಾಜಿ ಅಧ್ಯಕ್ಷ ಆರ್.ಎಂ.ಕಾಂತರಾಜ್, ಆಹಾರ ಇಲಾಖೆ ನಿವೃತ್ತ ಉಪನಿರ್ದೇಶಕ ಡಾ.ಎಸ್.ಇ.ಮಹದೇವಪ್ಪ, ನಿವೃತ್ತ ಮುಖ್ಯಶಿಕ್ಷಕ ಚಿಕ್ಕಮಾದಯ್ಯ, ಎಸ್.ಬಸವರಾಜು, ನಂದು, ಕಾರ್ ಮಹದೇವಸ್ವಾಮಿ, ಹಸಗೂಲಿ ಸಿದ್ದಯ್ಯ, ಲಿಂಗರಾಜು, ರಾಚಯ್ಯ, ಬಿ.ಲಿಂಗಯ್ಯ, ಹರವೆ ಮಹದೇವಯ್ಯ, ರಾಜು, ಸಿದ್ದಪ್ಪ, ಆರ್.ಕೆ.ಶಿವಕುಮಾರ್, ಆರ್.ಲಿಂಗಯ್ಯ, ಎಂ.ಶಿವಕುಮಾರ್, ಚಾಮರಾಜು, ಮರಪ್ಪ, ನಿಟ್ರೆಮಹದೇವು, ನಾಗಯ್ಯ, ಸಿದ್ದರಾಜು, ನರಸಿಂಹ, ನಾಗರಾಜು, ರಂಗಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.