ADVERTISEMENT

ಮಹದೇಶ್ವರ ಬೆಟ್ಟದಲ್ಲಿ ವಿಜೃಂಭಣೆಯ ಮಹಾರಥೋತ್ಸವ: ಸಾವಿರಾರು ಭಕ್ತರು ಭಾಗಿ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2022, 4:43 IST
Last Updated 3 ಮಾರ್ಚ್ 2022, 4:43 IST
ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ
ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ   

ಮಹದೇಶ್ವರ ಬೆಟ್ಟ: ಇಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾರಥೋತ್ಸವ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕೋವಿಡ್‌ ಕಾರಣಕ್ಕೆ ಸ್ಥಳೀಯರಿಗೆ ಮಾತ್ರ ಅವಕಾಶ ಎಂದು ಹೇರಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಿ, ಎಲ್ಲರಿಗೂ ಭಾಗವಹಿಸಲು ಅವಕಾಶ ನೀಡಿದ್ದರಿಂದ ಭಾರಿ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. 8.10ರಿಂದ 8.45ರ ನಡುವೆ ರಥೋತ್ಸವ ನಡೆಯಿತು.

ತೇರು ಎಳೆಯವುದಕ್ಕೂ ಮುನ್ನ ಬೇಡಗಂಪಣ ಸಮುದಾಯದ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜಾ ಕೈಂಕರ್ಯಗಳು ಆರಂಭವಾಯಿತು. ನಂತರ ಮಹದೇಶ್ವರಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟು ಪೂಜೆ ಸಲ್ಲಿಸಿ ದೇವಾಲಯದ ಸುತ್ತಲೂ ಪ್ರದಕ್ಷಿಣೆ ಹಾಕಲಾಯಿತು.

ADVERTISEMENT

ನಂತರ ಬೇಡಗಂಪಣ ಸಮುದಾಯದ ನೂರೊಂದು ಹೆಣ್ಣು ಮಕ್ಕಳು ಅಲಂಕೃತ ಬ್ರಹ್ಮರಥಕ್ಕೆ ಬೆಲ್ಲದ ಆರತಿಬೆಳಗಿದರು. ಬಳಿಕ ಮಹದೇಶ್ವರ ಸ್ವಾಮಿಯ ಉತ್ಸವಮೂರ್ತಿಯನ್ನು ಮಹಾರಥದಲ್ಲಿ ಪ್ರತಿಷ್ಠಾಪಿಸಲಾಯಿತು.

ತೇರು ಎಳೆಯಲು ಪ್ರಾರಂಭಿಸುತ್ತಿದ್ದಂತೆ ‘ಮಹಾದೇಶ್ವರಗೇ ಉಘೇ, ಮುದ್ದು ಮಾದಪ್ಪನಿಗೆ ಉಘೇ, ಉಘೇ ಉಘೇ ಮಾದಪ್ಪ’ ಎಂಬ ಘೋಷಣೆಗಳು ಮಾರ್ದನಿಸಿತು.

ಸಾವಿರಾರು ಭಕ್ತರು ಹಣ್ಣು, ಜವನ, ನಾಣ್ಯಗಳನ್ನು ರಥಕ್ಕೆ ಎಸೆದು ಹರಕೆ ತೀರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.