
ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಮಹಾ ಶಿವರಾತ್ರಿ ಜಾತ್ರೋತ್ಸವಕ್ಕೆ ಪೂರ್ವಭಾವಿಯಾಗಿ ನಡೆಯುತ್ತಿರುವ ಸಿದ್ಧತಾ ಕಾರ್ಯ ಹಾಗೂ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕ ಎಂ.ಆರ್. ಮಂಜುನಾಥ್ ಭಕ್ತರಿಗೆ ತೊಂದರೆಯಾಗದಂತೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕರು, ಕ್ಷೇತ್ರಕ್ಕೆ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಭೇಟಿ ನೀಡಲಿದ್ದು ಮೂಲ ಸೌಲಭ್ಯ ಕಲ್ಪಿಸಬೇಕು. ಜೆಎಸ್ಎಸ್ ಮಠದ ಮುಖ್ಯರಸ್ತೆ ಮುಂಭಾಗ ನಡೆಯುತ್ತಿರುವ ಸಿಸಿ ರಸ್ತೆ ರಿಟರ್ನಿಂಗ್ ವಾಲ್ ನಿರ್ಮಾಣ ಕಾಮಗಾರಿ, ದಾಸೋಹ ಭವನ ಮುಂಭಾಗ ಇರುವ ರಾಜಕಾಲುವೆ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಎಇಇ ಚಿನ್ನಣ್ಣ ಅವರಿಗೆ ಸೂಚನೆ ನೀಡಿದರು.
ಬೆಟ್ಟದಲ್ಲಿ ನಡೆಯುವ ಮಹಾ ಶಿವರಾತ್ರಿಗೆ ಲಕ್ಷಾಂತರ ಭಕ್ತರು ಬರುವ ನಿರೀಕ್ಷೆ ಇರುವುದರಿಂದ ಡಾರ್ಮೆಂಟರಿ ಹಿಂಭಾಗದ ಸ್ಥಳವನ್ನು ಸಮತಟ್ಟು ಮಾಡಿ ನೆರಳಿನ ವ್ಯವಸ್ಥೆ ಮಾಡಬೇಕು, ವೇದಿಕೆ ನಿರ್ಮಾಣ ಮಾಡಬೇಕು. ಹಳೆ ದಾಸೋಹ ಭವನದ ಸುತ್ತಮುತ್ತಲಿನ ಸ್ಥಳದಲ್ಲಿ ನಡೆಯುತ್ತಿರುವ ಕಾಮಗಾರಿಗಳು ಶಿವರಾತ್ರಿ ಹಬ್ಬಕ್ಕೂ ಮುನ್ನ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಡ್ಯಾಮ್ ಸ್ಥಳಕ್ಕೆ ಭೇಟಿನೀಡಿ ಸುತ್ತಲೂ ಗಿಡಗಂಟೆಗಳನ್ನು ತೆರವುಗೊಳಿಸಬೇಕು. ಮಳೆಗಾಲದಲ್ಲಿ ಹೆಚ್ಚಿನ ನೀರು ನಿಲ್ಲಲು ಅವಕಾಶ ಇರುವುದರಿಂದ ಪೋಲಾಗದಂತೆ ಬಂಡ್ ನಿರ್ಮಾಣ ಮಾಡಬೇಕು ಎಂದರು.
ಭಕ್ತರು ಪಾದಯಾತ್ರೆಯಲ್ಲಿ ಬೆಂಗಳೂರು, ಬಿಡದಿ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಿಂದ ಬರಲಿದ್ದು ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ನೆರಳಿನ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು ಎಂದು ತಿಳಿಸಿದರು.
ಇದೇ ಸಂದರ್ಭ ಶ್ರೀಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.