ಚಾಮರಾಜನಗರ: ಆಯುರ್ವೇದ ವೈದ್ಯರಿಗೆ ಕೆಲವು ಶಸ್ತ್ರಕ್ರಿಯೆಗಳನ್ನು ನಡೆಸಲು ಕೇಂದ್ರ ಸರದಕಾರ ಅವಕಾಶ ನೀಡಿರುವುದನ್ನು ಖಂಡಿಸಿ ಭಾರತೀಯವೈದ್ಯಕೀಯ ಸಂಘ (ಐಎಂಎ)ಶುಕ್ರವಾರ (ಡಿ.11) ಕರೆ ನೀಡಿರುವ ಮುಷ್ಕರ ಜಿಲ್ಲೆಯಲ್ಲಿ ಸಾಂಕೇತಿಕವಾಗಿ ನಡೆಯುವ ಸಾಧ್ಯತೆ ಹೆಚ್ಚಿದೆ.
ಇದರ ಅಂಗವಾಗಿ, ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಅಲೋಪಥಿ ವೈದ್ಯರು ಖಾಸಗಿ ಆಸ್ಪತ್ರೆಗಳ ಹೊರ ರೋಗಿ ವಿಭಾಗವನ್ನು ಬಂದ್ ಮಾಡಬೇಕು ಎಂದು ಸಂಘ ಸೂಚಿಸಿದೆ. ಕ್ಲಿನಿಕ್ಗಳನ್ನು ಬಂದ್ ಮಾಡಬೇಕು ಎಂದು ಅದು ಹೇಳಿದೆ.
ಆದರೆ, ಜಿಲ್ಲೆಯಲ್ಲಿ ದೊಡ್ಡ ಖಾಸಗಿ ಆಸ್ಪತ್ರೆಗಳು ಇಲ್ಲದಿರುವುದರಿಂದ ಮುಷ್ಕರ ಆಗುವ ಸಾಧ್ಯತೆ ಕಡಿಮೆ ಇದೆ. ಕೆಲವು ಕ್ಲಿನಿಕ್ಗಳು ಬಂದ್ ಆಗುವ ಸಾಧ್ಯತೆ ಇದೆ.
‘ಮುಷ್ಕರ ನಡೆಸುವಂತೆ ನಮಗೂ ಸೂಚನೆ ಬಂದಿದೆ. ಸಿದ್ಧತೆಯನ್ನು ಮಾಡಿಕೊಂಡಿದ್ದೇವೆ. ಆದರೆ, ನಮ್ಮಲ್ಲಿ ದೊಡ್ಡ ಆಸ್ಪತ್ರೆಗಳು ಇಲ್ಲದಿರುವುದರಿಂದ ಹೊರ ರೋಗಿ ವಿಭಾಗ ಹಾಗೂ ತುರ್ತು ವಿಭಾಗ ಎಂಬ ಪ್ರತ್ಯೇಕ ವಿಭಾಗಗಳಿಲ್ಲ. ಹಾಗಾಗಿ ರೋಗಿಗಳು ಬಂದರೆ ಚಿಕಿತ್ಸೆ ನೀಡಲೇಬೇಕಾಗುತ್ತದೆ. ಸಾಂಕೇತಿಕವಾಗಿ ಮುಷ್ಕರ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಿದ್ದೇವೆ’ ಎಂದು ಐಎಂಎ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಸವರಾಜೇಂದ್ರ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
‘ಜಿಲ್ಲಾಸ್ಪತ್ರೆ ಸೇರಿದಂತೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಎಂದಿನಂತೆ ಎಲ್ಲ ಸೇವೆಗಳು ಲಭ್ಯವಿರಲಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.