ADVERTISEMENT

ಚಾಮರಾಜನಗರ | ಶೈಕ್ಷಣಿಕ ಸೌಲಭ್ಯ ಸದ್ಬಳಕೆ ಮಾಡಿ: ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 16:19 IST
Last Updated 25 ಜೂನ್ 2022, 16:19 IST
ಬೇಡರಪುರದ ಬಳಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣ ಮಾಡಲಾಗಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶನಿವಾರ ಉದ್ಘಾಟಿಸಿದರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಅಧಿಕಾರಿಗಳು ಇದ್ದರು
ಬೇಡರಪುರದ ಬಳಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣ ಮಾಡಲಾಗಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶನಿವಾರ ಉದ್ಘಾಟಿಸಿದರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಅಧಿಕಾರಿಗಳು ಇದ್ದರು   

ಚಾಮರಾಜನಗರ: ಶಿಕ್ಷಣಕ್ಕಾಗಿ ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಿ ಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳ ಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಶನಿವಾರ ಹೇಳಿದರು.

ನಗರದ ಬೇಡರಪುರದ ಬಳಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣ ಮಾಡಲಾಗಿರುವ ಡಿ. ದೇವರಾಜ ಅರಸು ಮೆಟ್ರಿಕ್ನಂತರದ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದರು.

‘ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಎಲ್ಲ ನೆರವು ನೀಡುತ್ತಿದೆ. ವಿದ್ಯಾರ್ಥಿ ನಿಲಯಗಳು ಸೇರಿದಂತೆ ವ್ಯಾಸಂಗಕ್ಕೆ ಪೂರಕವಾದ ಎಲ್ಲಾ ಅವಕಾಶಗಳು ಹಾಗೂ ಸೌಕರ್ಯಗಳನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳು ಇದರ ಸದ್ಭಳಕೆ ಮಾಡಿಕೊಳ್ಳಬೇಕು. ವಿದ್ಯೆ ಯಾರ ಸೊತ್ತು ಅಲ್ಲ. ಓದಿನ ಕಡೆಗೆ ಶ್ರದ್ಧೆಯಿಂದ ಗಮನ ಹರಿಸಿ ಉನ್ನತ ಭವಿಷ್ಯ ಕಂಡುಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

‘ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅವರ ಉನ್ನತ ಶಿಕ್ಷಣಕ್ಕೆ ನಿಲಯ ಪಾಲಕರು ನೆರವಾಗಬೇಕು. ಅವರ ತಂದೆ- ತಾಯಿ ಸ್ಥಾನವನ್ನು ತುಂಬುವವರು ನೀವೇ ಆಗಿದ್ದೀರಿ. ನಿಲಯಕ್ಕೆ ರಾತ್ರಿಯ ಸಮಯ ಮಕ್ಕಳು ಓಡಾಡಲು ತುಂಬಾ ತೊಂದರೆ ಆಗಬಹುದು. ಕೂಡಲೇ ರಸ್ತೆ ನಿರ್ಮಾಣಕ್ಕೆ ಸೂಕ್ತ ಕ್ರಮವಹಿಸಲಾಗುವುದು’ ಎಂದರು.

ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ‘ಕೋವಿಡ್ ಕಾರಣದಿಂದ ವಿದ್ಯಾರ್ಥಿ ನಿಲಯ ತಡವಾಗಿ ಉದ್ಘಾಟನೆ ಆಗಿದೆ. ಇನ್ನಷ್ಟು ವಸತಿ ನಿಲಯಗಳು ಉದ್ಘಾಟನೆ ಆಗಬೇಕಿದೆ. ಹಿಂದುಳಿದ ವರ್ಗಗಳ ಮಕ್ಕಳಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿದ ರಾಜ್ಯ ಕಂಡ ಅತ್ಯಂತ ಅಪರೂಪದ ರಾಜಕಾರಣಿ ಡಿ. ದೇವರಾಜ ಅರಸು ಅವರ ಹಾದಿಯಲ್ಲಿ ವಿದ್ಯಾರ್ಥಿಗಳು ಸಾಗಿ ಸರ್ಕಾರಿ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ಗ್ರಾ.ಪಂ ಅಧ್ಯಕ್ಷೆ ಸುಗುಣಮ್ಮ, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ಮಹದೇವಯ್ಯ, ಜಿ.ಪಂ ಸಿಇಒ ಕೆ.ಎಂ. ಗಾಯತ್ರಿ, ಎಡಿಸಿ ಕಾತ್ಯಾಯಿನಿ ದೇವಿ, ಎಎಸ್ಪಿ ಕೆ.ಎಸ್. ಸುಂದರರಾಜ್‌, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣಿಕೊಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ರೇವಣ್ಣ ಇದ್ದರು.

‘ಚತುಷ್ಪಥ ರಸ್ತೆಯಾಗಿಸಲು ಕ್ರಮ’
ಗುಂಡ್ಲುಪೇಟೆ ಮುಖ್ಯ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಚತುಷ್ಪಥ ರಸ್ತೆಯಾಗಿಸಲು ಕ್ರಮಕೈಕೊಳ್ಳಲಾಗುವುದು’ ಎಂದು ಸೋಮಣ್ಣ ಹೇಳಿದರು.

ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಿರುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ನೂತನ ಕಟ್ಟಡ ಉದ್ಘಾಟನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಗುಂಡ್ಲುಪೇಟೆಯ ಮುಖ್ಯ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದೆ. ಪ್ರಸ್ತುತ ಇರುವ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಪರಿವರ್ತಿಸುವುದರಿಂದ ಸಂಭವಿಸಬಹುದಾದ ಅಪಘಾತಗಳನ್ನು ತಡೆಯಬಹುದು. ಶಾಸಕ ಸಿ.ಎಸ್.ನಿರಂಜನಕುಮಾರ್ ಅವರು ರಸ್ತೆ ಅಭಿವೃದ್ಧಿ ಸಂಬಂಧ ನನ್ನೊಂದಿಗೆ ಮಾತನಾಡಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.