ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ಬುಧವಾರ ನಡೆದಿದ್ದ ವೃದ್ಧೆ ಕೆಂಪಮ್ಮ ಕೊಲೆ ಪ್ರಕರಣದ ಆರೋಪಿ ಟಿ.ನರಸೀಪುರ ತಾಲ್ಲೂಕಿನ ಈಶ್ವರಗೌಡನಹಳ್ಳಿ ಗ್ರಾಮದ ನಿವಾಸಿ ಮಹೇಶ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮದ್ಯವ್ಯಸನಿಯಾಗಿದ್ದ ಆರೋಪಿ ಕೆಸ್ತೂರು ಗ್ರಾಮದ ಪತ್ನಿ ಮನೆಯಲ್ಲಿ ವಾಸವಾಗಿದ್ದ. ಈತನ ಮೇಲೆ ಮೃತ ವೃದ್ಧೆ ಮಗ ನಂಜಯ್ಯ ದೂರು ನೀಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ. ಶನಿವಾರ ಸಂಜೆ ಸ್ವಂತ ಗ್ರಾಮಕ್ಕೆ ತೆರಳಲು ನರಸೀಪುರ ಬಸ್ ನಿಲ್ದಾಣಕ್ಕೆ ಬಂದಾಗ ಪೊಲೀಸರು ಬಂಧಿಸಿದ್ದಾರೆ. ನಂತರ ಪಟ್ಟಣ ಠಾಣೆಯಲ್ಲಿ ಸಿಪಿಐ ಶ್ರೀಕಾಂತ್ ಅವರ ಮುಂದೆ ಹಾಜಪಡಿಸಿ, ವಿಚಾರಣೆ ನಡೆಸಿ, ಕೃತ್ಯ ನಡೆದ ಬಗ್ಗೆ ಮಾಹಿತಿ ಪಡೆದರು. ಶನಿವಾರ ಆರೋಪಿ ಬಂಧನಕ್ಕೆ ವೃತ್ತ ನಿರೀಕ್ಷಕ ಶ್ರೀಕಾಂತ್, ಪಿಎಸ್ಐ ಆಕಾಶ್ ಹಾಗೂ ಪೊಲೀಸ್ ಸಿಬ್ಬಂದಿ ನೇತೃತ್ವದಲ್ಲಿ ತಂಡ ರಚಿಸಿದ್ದರು.
ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಸಂಜೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.