ADVERTISEMENT

ಚಾಮರಾಜನಗರ: ಸರ್ಕಾರಿ ನೌಕರರ ಕ್ಯಾಂಟೀನ್ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 15:20 IST
Last Updated 6 ನವೆಂಬರ್ 2020, 15:20 IST
ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಇತರ ಗಣ್ಯರು ಕ್ಯಾಂಟೀನ್‌ ಅನ್ನು ಪರಿಶೀಲಿಸಿದರು
ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಇತರ ಗಣ್ಯರು ಕ್ಯಾಂಟೀನ್‌ ಅನ್ನು ಪರಿಶೀಲಿಸಿದರು   

ಚಾಮರಾಜನಗರ: ಜಿಲ್ಲಾ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಆರಂಭಿಸಿರುವ ಸರ್ಕಾರಿ ನೌಕರರ ಕ್ಯಾಂಟಿನ್‌ಗೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಶುಕ್ರವಾರ ಚಾಲನೆ ನೀಡಿದರು.

ನಗರದ ನ್ಯಾಯಾಲಯದ ರಸ್ತೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಕಟ್ಟಡದಲ್ಲಿ ಕ್ಯಾಂಟೀನ್‌ ಆರಂಭಿಸಲಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ‘ಜಿಲ್ಲೆಯಲ್ಲಿ ಸರ್ಕಾರಿ ನೌಕರರಿಗೆ ಕ್ಯಾಂಟಿನ್ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಕ್ಯಾಂಟಿನ್‌ನನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿಗೊಳಿಸಿ ನಿರ್ವಹಿಸಿಕೊಂಡು ಹೋಗಬೇಕು’ ಎಂದು ಸಲಹೆ ಮಾಡಿದರು.

ADVERTISEMENT

ಸರ್ಕಾರಿ ನೌಕರರ ಸಂಘದ ಕಟ್ಟಡದ ಆವರಣದಲ್ಲಿ ಶಾಸಕರ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲು ಸಹಕಾರ ನೀಡಲಾಗುವುದು ಎಂದು ಅವರು ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಅವರು ಮಾತನಾಡಿ, ‘ಸರ್ಕಾರಿ ನೌಕರರ ಕ್ಯಾಂಟಿನ್ ‌ಅನ್ನು ಎಲ್ಲ ಜಿಲ್ಲೆಯಲ್ಲಿಯೂ ಮಾದರಿ ಕ್ಯಾಂಟಿನ್ ಆಗಿ ಮಾಡಲು ಈ ಕಾರ್ಯಕ್ರಮವು ಪ್ರೇರಣೆಯಾಗಿದೆ. ಇಲ್ಲಿ ದಿನಸಿ ಮತ್ತು ಗೃಹಬಳಕೆಯ ವಸ್ತುಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದ್ದು, ನೌಕರರು ಇದರ ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ ಗೌಡಪ್ಪ ಪಾಟೀಲ್ ಅವರು ಮಾತನಾಡಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್ ಅವರು ಮಾತನಾಡಿ, ‘ಸಂಘವು ರಕ್ತದಾನ ಶಿಬಿರ, ಶ್ರಮದಾನದ ಮೂಲಕ ಸ್ವಚ್ಚತಾ ಕಾರ್ಯ, ಕ್ರೀಡಾಕೂಟ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನೌಕರರ ಹಿತ ಕಾಪಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯ ಸಾರಾ ಥಾಮಸ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಟಿ.ಜವರೇಗೌಡ, ನಗರಸಭೆ ಆಯುಕ್ತ ರಾಜಣ್ಣ, ಖಜಾಂಚಿ ಆರ್. ಶ್ರೀನಿವಾಸ್, ಗೌರವ ಅಧ್ಯಕ್ಷ ವಿ.ವಿ. ಶಿವರುದ್ರಯ್ಯ, ಬೆಂಗಳೂರು ಸಾಯಿ ಇಂಟರ್ ನ್ಯಾಷನಲ್ ಸಂಸ್ಥಾಪಕ ಎಸ್. ಪ್ರಸಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.