ADVERTISEMENT

ಮಹದೇಶ್ವರ ಬೆಟ್ಟ: ದೀಪಾವಳಿ ಜಾತ್ರೆಯೂ ಸರಳ, ಭಕ್ತರಿಗಿಲ್ಲ ಪ್ರವೇಶ

ನ.13ರಿಂದ 16ರವರೆಗೆ ನಡೆಯಲಿದೆ ಜಾತ್ರೆ, ರಥೋತ್ಸವ ಇಲ್ಲ, ಪೂಜೆಗಷ್ಟೇ ಸೀಮಿತ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2020, 16:52 IST
Last Updated 9 ನವೆಂಬರ್ 2020, 16:52 IST
ಮಲೆ ಮಹದೇಶ್ವರಸ್ವಾಮಿ ದೇವಾಲಯದ ನೋಟ
ಮಲೆ ಮಹದೇಶ್ವರಸ್ವಾಮಿ ದೇವಾಲಯದ ನೋಟ   

ಚಾಮರಾಜನಗರ: ಕೋವಿಡ್‌–19 ಕಾರಣದಿಂದಾಗಿ ಪ್ರಸಿದ್ಧ ಯಾತ್ರಾಸ್ಥಳ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಈ ಬಾರಿ ದೀಪಾವಳಿ ಜಾತ್ರೆಯೂ ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ನಡೆಯಲಿದೆ.

ಇದೇ 13ರಿಂದ 16ರವರೆಗೆ ದೀಪಾವಳಿ ಜಾತ್ರಾ ಮಹೋತ್ಸವ ನಡೆಯಬೇಕಾಗಿದ್ದು, ನಾಲ್ಕೂ ದಿನಗಳ ಕಾಲ ಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶ ಹೊರಡಿಸಿದ್ದಾರೆ.

ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಎಣ್ಣೆಮಜ್ಜನ ಸೇವೆ, ಅಮಾವಾಸ್ಯೆ ಪೂಜೆ, ರಥೋತ್ಸವ ಸೇರಿದಂತೆ ವಿವಿಧ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತವೆ. ನಾಲ್ಕು ದಿನಗಳ ಅವಧಿಯಲ್ಲಿ ಅಂದಾಜು ಮೂರು ಲಕ್ಷದಿಂದ ಐದು ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ.

ADVERTISEMENT

ಭಾರಿ ಸಂಖ್ಯೆಯಲ್ಲಿ ಭಕ್ತರು ಬಂದರೆ ಕೋವಿಡ್‌–19 ತಡೆ ನಿಯಮ ಪಾಲನೆ ಕಷ್ಟವಾಗಬಹುದು ಎಂಬ ಕಾರಣದಿಂದ ಜಿಲ್ಲಾಡಳಿತ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ದಸರಾ ಜಾತ್ರಾ ಮಹೋತ್ಸವದ ಸಂದರ್ಭದಲ್ಲೂ ಭಕ್ತರಿಗೆ ಅವಕಾಶ ನೀಡಿರಲಿಲ್ಲ.

ಜಾತ್ರೆಗೆ ನಿರ್ಬಂಧ ವಿಧಿಸುವ ಸಾಧ್ಯತೆ ಇದ್ದುದರಿಂದ ದೀಪಾವಳಿ ಸಮಯದಲ್ಲಿ ವಸತಿಗೃಹಗಳನ್ನು ಆನ್‌ಲೈನ್‌ ಮೂಲಕ ಕಾಯ್ದಿರಿಸುವ ವ್ಯವಸ್ಥೆಯನ್ನು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸ್ಥಗಿತಗೊಳಿಸಿತ್ತು.

ರಥೋತ್ಸವ ಇಲ್ಲ: ನಾಲ್ಕು ದಿನಗಳಲ್ಲೂ ದೇವಾಲಯದ ಆವರಣದಲ್ಲಿ ಅರ್ಚಕರು, ಸಿಬ್ಬಂದಿ ಹಾಗೂ ಸ್ಥಳೀಯರ ಉಪಸ್ಥಿತಿಯಲ್ಲಿ ಸರಳವಾಗಿ ಜಾತ್ರೆಯ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.

‘ರಥೋತ್ಸವ ಇರುವುದಿಲ್ಲ. ಜಾತ್ರೆಯ ಅಂಗವಾಗಿ ಹಾಲರವೆ ಮತ್ತು ತೆಪ್ಪೋತ್ಸವ ಮಾತ್ರ ಸ್ಥಳೀಯವಾಗಿ ನಡೆಯಲಿದೆ’ ಎಂದು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

12ರಂದು ಗೋಲಕ ಹಣ ಎಣಿಕೆ:ಈ ಮಧ್ಯೆ, ದೇವಾಲಯದಗೋಲಕಗಳ ಹಣ ಎಣಿಕೆ ಕಾರ್ಯ ಇದೇ 12ರಂದು ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯಲ್ಲಿ ನಡೆಯಲಿದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.