ADVERTISEMENT

22 ಹಳ್ಳಿಗಿಲ್ಲ ಸರ್ಕಾರಿ ಪ್ರೌಢಶಾಲೆ

ಮಾರ್ಟಳ್ಳಿ: ಘೋಷಣೆಯಾಗಿ ಉಳಿದ ಎಚ್‌ಡಿಕೆ ಭರವಸೆ, ಹೊಸ ಶಾಲೆ ಆರಂಭಿಸಲು ಸ್ಥಳೀಯರ ಆಗ್ರಹ

ಸೂರ್ಯನಾರಾಯಣ ವಿ
Published 7 ಆಗಸ್ಟ್ 2019, 19:45 IST
Last Updated 7 ಆಗಸ್ಟ್ 2019, 19:45 IST
ಆರ್‌.ನರೇಂದ್ರ
ಆರ್‌.ನರೇಂದ್ರ   

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಮಾರ್ಟಳ್ಳಿ ಭಾಗದಲ್ಲಿ2019–20ನೇ ಶೈಕ್ಷಣಿಕ ಸಾಲಿನಿಂದ ಸರ್ಕಾರಿ ಪ್ರೌಢ ಶಾಲೆಯನ್ನು ಆರಂಭಿಸಲಾಗುವುದು ಎಂದು ಹಿಂದಿನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನೀಡಿದ್ದ ಭರವಸೆ ಘೋಷಣೆಗಷ್ಟೇ ಸೀಮಿತವಾಗಿದೆ.

ಶೈಕ್ಷಣಿಕ ವರ್ಷ ಆರಂಭಗೊಂಡು ಎರಡು ತಿಂಗಳು ಕಳೆದಿದೆ. ಇನ್ನು ಈ ವರ್ಷ ಆರಂಭವಾಗುವ ಸಾಧ್ಯತೆ ಕ್ಷೀಣವಾಗಿದೆ. ‘ನಮ್ಮ ಊರಿಗೂ ಸರ್ಕಾರಿ ಪ್ರೌಢ ಶಾಲೆಯ ಭಾಗ್ಯ ಬಂತು’ ಎಂದು ಸಂತಸ ಪಟ್ಟಿದ್ದ ಸುತ್ತಮುತ್ತಲಿನ ಜನರ ನಿರೀಕ್ಷೆ ಹುಸಿಯಾಗಿದೆ.

ಸುಳ್ವಾಡಿ ಮಾರಮ್ಮ ದೇವಾಲಯದಲ್ಲಿ ಸಂಭವಿಸಿದ್ದ ವಿಷ ಪ್ರಸಾದ ದುರಂತ್ರದ ಸಂತ್ರಸ್ತರು ಹಾಗೂ ಕುಟುಂಬಗಳಿಗೆ ಸಾಂತ್ವನ ಹೇಳುವುದಕ್ಕಾಗಿ ಕಳೆದ ವರ್ಷದ ಡಿಸೆಂಬರ್‌ 25ರಂದು ಸುಳ್ವಾಡಿಗೆ ಬಂದಿದ್ದ ಅಂದಿನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು, ‘ಮಾರ್ಟಳ್ಳಿ ಭಾಗದಲ್ಲಿ ಮುಂದಿನ ವರ್ಷದಿಂದಲೇ ಸರ್ಕಾರಿ ಪ್ರೌಢಶಾಲೆ ಆರಂಭಿಸಲಾಗುವುದು’ ಎಂದು ಘೋಷಿಸಿದ್ದರು.

ADVERTISEMENT

ಸರ್ಕಾರಿ ಪ್ರೌಢಶಾಲೆ ಇಲ್ಲ: ಹನೂರು ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 22 ಹಳ್ಳಿಗಳು ಬರುತ್ತವೆ. ಈ ಭಾಗದಲ್ಲಿ ಮಾರ್ಟಳ್ಳಿಯೇ ದೊಡ್ಡ ಊರು. ಅಂದಾಜು 24,600 ಮಂದಿ ಜನರು ಈ ಭಾಗದಲ್ಲಿ ವಾಸಿಸುತ್ತಿದ್ದಾರೆ.ಇಷ್ಟು ವಿಸ್ತಾರವಾದ ಪ್ರದೇಶದಲ್ಲಿ ಒಂದೇ ಒಂದು ಸರ್ಕಾರಿ ಪ್ರೌಢ ಶಾಲೆ ಇಲ್ಲ! ಮಾರ್ಟಳ್ಳಿ, ವಡ್ಡರದೊಡ್ಡಿ, ಸುಳ್ವಾಡಿ ಮತ್ತು ಸಂದನಪಾಳ್ಯದಲ್ಲಿ ಖಾಸಗಿ ಪ್ರೌಢಶಾಲೆಗಳಿವೆ. ಈ ಭಾಗದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಮಕ್ಕಳು ಪ್ರೌಢಶಿಕ್ಷಣಕ್ಕಾಗಿ ಈ ಶಾಲೆಗಳನ್ನೇ ಅವಲಂಬಿಸಿದ್ದಾರೆ.

ಲಿಂಗಾಯತರು, ಬೇಡಕಂಪಣರು, ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡ, ಪಡೆಯಾಚ್ಚಿ ಗೌಂಡರ್‌, ಲಂಬಾಣಿಗಳು ಹಾಗೂ ಕ್ರಿಶ್ಚಿಯನ್‌ ಸಮುದಾಯಕ್ಕೆ ಸೇರಿದವರು ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

‘ಕುಮಾರಸ್ವಾಮಿ ಅವರ ಮಾತಿನಲ್ಲಿ ನಮಗೆ ಭರವಸೆ ಇತ್ತು. ನಮ್ಮ ಬಹುದಿನಗಳ ಬೇಡಿಕೆ ಈಡೇರಲಿದೆ ಎಂಬ ನಿರೀಕ್ಷೆ ಇತ್ತು. ಆದರೆ, ಸರ್ಕಾರ ಹೇಳಿದಂತೆ ನಡೆದುಕೊಂಡಿಲ್ಲ. ಖಾಸಗಿ ಪ್ರೌಢಶಾಲೆಗಳು ಇರುವುದರಿಂದ ಇಲ್ಲಿನ ಮಕ್ಕಳು ಹೇಗೋ ಶಿಕ್ಷಣ ಪಡೆಯುತ್ತಿದ್ದಾರೆ. ಬಡ ಕುಟುಂಬಗಳಿಗೆ ಖಾಸಗಿ ಶಾಲೆಯ ಶುಲ್ಕ ಭರಿಸುವುದು ಕಷ್ಟವಾಗುತ್ತದೆ’ ಎಂದು ಮಾರ್ಟಳ್ಳಿಯ ಸಾಮಾಜಿಕ ಕಾರ್ಯಕರ್ತ ಜಾನ್‌ ಡಾನ್‌ ಬಾಸ್ಕೊ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಈ ಭಾಗದಲ್ಲಿ ಬಡವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಖಾಸಗಿ ಶಾಲೆಯ ಶುಲ್ಕವನ್ನು ಭರಿಸಲು ಅವರಿಗೆ ಸಾಧ್ಯವಾಗುವುದಿಲ್ಲ.ಸರ್ಕಾರಿ ಪ್ರೌಢ ಶಾಲೆ ಇದ್ದರೆ ಮಕ್ಕಳಿಗೆ ಬಿಸಿಯೂಟ ಸೇರಿದಂತೆ ಎಲ್ಲ ಸೌಲಭ್ಯಗಳೂ ಸಿಗುತ್ತವೆ. ಕುಟುಂಬದವರಿಗೆ ಹೆಚ್ಚು ಹೊರೆಯಾಗುವುದಿಲ್ಲ’ ಎಂದು ಹೆಸರು ಹೇಳಲು ಇಚ್ಛಿಸದ ಸರ್ಕಾರಿ ಶಿಕ್ಷಕರೊಬ್ಬರು ಹೇಳಿದರು.

ಆರಂಭವಾಗದ ಪ್ರಕ್ರಿಯೆ: ಕುಮಾರಸ್ವಾಮಿ ಅವರು ಭರವಸೆ ನೀಡಿದ ನಂತರ ಆರು ತಿಂಗಳು ಸಮಯ ಇತ್ತು. ಆದರೆ, ಜಿಲ್ಲಾಡಳಿತವಾಗಲಿ, ಜನಪ್ರತಿನಿಧಿಗಳಾಗಲಿ ಪ್ರೌಢಶಾಲೆ ಸ್ಥಾಪಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಮುಂದಾಗಿಲ್ಲ.

‘ಪ್ರೌಢಶಾಲೆ ಆರಂಭಿಸುವ ವಿಚಾರದಲ್ಲಿ ಯಾವುದೇ ಪ್ರಗತಿಯಾಗಿಲ್ಲ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿಯಲ್ಲಿ ಹಿರಿಯ ಪ್ರಾಥಮಿಕ ಶಾಲೆಯನ್ನು 10ನೇ ತರಗತಿವರೆಗೆ ಮೇಲ್ದರ್ಜೆಗೇರಿಸಲು ಅವಕಾಶ ಇದೆ. ಈ ವರ್ಷ ಜಿಲ್ಲೆಯಲ್ಲಿ ಹನೂರು ತಾಲ್ಲೂಕಿನ ಬೈಲೂರು ಮತ್ತು ಗುಂಡ್ಲುಪೇಟೆಯ ಅಣ್ಣೂರು ಕೇರಿಯ ಶಾಲೆಗಳು ಮೇಲ್ದರ್ಜೆಗೆ ಏರಿಸಲಾಗಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕ ಮಂಜುನಾಥ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಮಾರ್ಟಳ್ಳಿ ಹಾಗೂ ಅದರ ಸುತ್ತಮುತ್ತಲಿರುವ ಶಿಕ್ಷಣದ ಸ್ಥಿತಿಗತಿ ಹಾಗೂ ಮಕ್ಕಳ ವಿವರಗಳು ನಮ್ಮ ಬಳಿ ಲಭ್ಯವಿದೆ. ಇಲಾಖೆ ಅನುಮತಿ ನೀಡಿದ ತಕ್ಷಣ ಶಾಲೆ ಆರಂಭಕ್ಕೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಅವರು ಹೇಳಿದರು.

ಶಾಸಕರು, ಸಂಸದರು ಒತ್ತಡ ಹಾಕಬೇಕು

ಜನಪ್ರತಿನಿಧಿಗಳ ಮೂಲಕ ಪ್ರಸ್ತಾವ ಸರ್ಕಾರಕ್ಕೆ ತಲುಪಿದರೆ ಶಾಲೆಗೆ ಮಂಜೂರಾತಿ ದೊರಕುತ್ತದೆ ಎಂದು ಹೇಳುತ್ತಾರೆ ಅಧಿಕಾರಿಗಳು.

‘ಇಲಾಖೆ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಬಹುದು. ಆದರೆ, ಅದು ಪರಿಣಾಮಕಾರಿಯಾಗಿರುವುದಿಲ್ಲ’ ಎಂಬುದು ಅವರ ವಾದ.

‘ಶಾಸಕರು ಹಾಗೂ ಸಂಸದರು ಪ್ರಸ್ತಾವವನ್ನು ಸಿದ್ಧಪಡಿಸಿ ಶಿಕ್ಷಣ ಸಚಿವರು, ಮುಖ್ಯಮಂತ್ರಿಗಳ ಮೂಲಕ ಒತ್ತಡ ಹಾಕಿದರೆ, ಬೇಗ ಮಂಜೂರಾತಿ ಸಿಗುತ್ತದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.