ಮಹದೇಶ್ವರ ಬೆಟ್ಟ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಳಸಿಕರೆ ಗ್ರಾಮದಲ್ಲಿ ಸಮರ್ಪಕ ರಸ್ತೆ ಸೌಲಭ್ಯ ಇಲ್ಲದೆ ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಜೋಳಿಗೆಯಲ್ಲಿ ಕಟ್ಟಿಕೊಂಡು ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.
ತುಳಸಿಕೆರೆಯ ಪುಟ್ಟ ಎಂಬುವರು ಈಚೆಗೆ ವಾಂತಿಬೇಧಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ವಾಹನದಲ್ಲಿ ಕರೆದೊಯ್ಯಲು ಸರಿಯಾದ ರಸ್ತೆ ಇಲ್ಲದೆ ಸಂಬಂಧಿಗಳು ಸುಮಾರು ನಾಲ್ಕೈದು ಕಿ.ಮೀ ದೂರದವರೆಗೂ ಹೊತ್ತೊಯ್ದು ಮಲೆ ಮಹದೇಶ್ವರ ಬೆಟ್ಟದ ಮೂಲಕ ತಮಿಳುನಾಡಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ತುಳಸಿಪುರ ಗ್ರಾಮ ಸೇರಿದಂತೆ ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಯ ಹಲವು ಹಳ್ಳಿಗಳು ಕನಿಷ್ಠ ಮೂಲಸೌಕರ್ಯಗಳಿಲ್ಲದೆ ನರಳುತ್ತಿದ್ದರೂ ಜಿಲ್ಲಾಡಳಿತ ರಸ್ತೆ, ಸಾರಿಗೆ, ಕುಡಿಯುವ ನೀರಿನ ವ್ಯವಸ್ಥೆ ಸಹಿತ ಅಗತ್ಯ ಸೌಲಭ್ಯಗಳನ್ನು ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಈ ಭಾಗದ ಜನರು ಕಾಡುಪ್ರಾಣಿಗಳಂತೆ ಬದುಕುತ್ತಿದ್ದಾರೆ. ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ಗ್ರಾಮಸ್ಥರು, ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳು ವನ್ಯಜೀವಿಗಳ ಭಯದಲ್ಲಿ ನಡೆದುಕೊಂಡು ಸಾಗಬೇಕಿದೆ. ಆರೋಗ್ಯ ಹದಗೆಟ್ಟರೆ ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗದೆ ಜೀವ ಹಾನಿ ಸಂಭವಿಸುತ್ತಿದೆ.
ಹಿಂದೆ ಗರ್ಭಿಣಿಯನ್ನು ಹೆರಿಗೆಗಾಗಿ ಆಸ್ಪತ್ರೆಗೆ ಕರೆದೊಯ್ಯುವಾಗ ರಸ್ತೆಯ ಅವ್ಯವಸ್ಥೆಯಿಂದ ಮಗು ಮೃತಪಟ್ಟ ನೋವಿನ ಘಟನೆ ನಡೆದಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆಂಪಣ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಹಿಂದೆ ಅಂದಿನ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಏಳುಕೊಂಡಲು ಕಾಡಂಚಿನ ಗ್ರಾಮಗಳ ಮಕ್ಕಳು ಹಾಗೂ ಗ್ರಾಮಸ್ಥರ ಅನುಕೂಲಕ್ಕೆ ಜನವನ ಸೇತುವೆ ಯೋಜನೆಯಡಿ ನಾಲ್ಕು ವಾಹನಗಳನ್ನು ಒದಗಿಸಿದ್ದರು. ಅವರು ವರ್ಗಾವಣೆಗೊಂಡ ಬೆನ್ನಲ್ಲೇ ವಾಹನಗಳ ಸೇವೆ ಸ್ಥಗಿತವಾಯಿತು. ವಾಹನಗಳು ಪ್ರಾಧಿಕಾರದ ಸುಪರ್ದಿಯಲ್ಲಿದ್ದು ಅಧಿಕಾರಿಗಳು ಸುತ್ತುತ್ತಿದ್ದಾರೆ ಎಂದು ಗ್ರಾಮಸ್ಥರು ನೋವು ತೋಡಿಕೊಂಡರು.
ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಿರಣ್ ಕಾಡಂಚಿನ ಗ್ರಾಮಗಳಿಗೆ ಮೂಲಸೌಲಭ್ಯ ಕಲ್ಪಿಸಲು 20 ಕೋಟಿ ಅನುದಾನ ದೊರೆತಿದ್ದು, ಕ್ರಿಯಾಯೋಜನೆ ತಯಾರು ಮಾಡಲಾಗುತ್ತಿದೆ. ಶೀಘ್ರ ಅಭಿವೃದ್ಧಿ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.