ADVERTISEMENT

ಪ್ರಜಾವಾಣಿ ವರದಿ ಪರಿಣಾಮ: ಕಾವೇರಿ ವನ್ಯಧಾಮದಲ್ಲಿ ಅಕ್ರಮ ಮರಳು ಸಾಗಣೆಗೆ ತಡೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 16:40 IST
Last Updated 10 ಸೆಪ್ಟೆಂಬರ್ 2020, 16:40 IST
ಅರಣ್ಯದೊಳಗೆ ತೆರಳಲು ಮರಳುಕಳ್ಳರು ಸೋಲಾರ್ ಬೇಲಿ ಕಿತ್ತು ದಾರಿ ಮಾಡಿಕೊಂಡಿರುವುದು.
ಅರಣ್ಯದೊಳಗೆ ತೆರಳಲು ಮರಳುಕಳ್ಳರು ಸೋಲಾರ್ ಬೇಲಿ ಕಿತ್ತು ದಾರಿ ಮಾಡಿಕೊಂಡಿರುವುದು.   

ಹನೂರು: ಕಾವೇರಿ ವನ್ಯಧಾಮದ ಕೊತ್ತನೂರು ವನ್ಯಜೀವಿ ವಲಯದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಬಂಡಳ್ಳಿ ಗ್ರಾಮದ ಅಣ್ಣಾದೊರೈ ಎಂಬುವವರನ್ನು ಅರಣ್ಯಾಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ಕೊತ್ತನೂರು ವನ್ಯಜೀವಿ ವಲಯದ ಸಿಪಿಟಿ 30ರಲ್ಲಿ ಅಕ್ರಮವಾಗಿ ಮರಳು ಸಾಗಣೆಯಾಗುತ್ತಿರುವ ಬಗ್ಗೆ ‘ಪ್ರಜಾವಾಣಿ’ಯ ಸೆ.6ರ ಸಂಚಿಕೆಯಲ್ಲಿ ‘ಮರಳು ದಂಧೆ ಅವ್ಯಾಹತ’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು.

ವರದಿಗೆ ಸ್ಪಂದಿಸಿದ್ದ ಕಾವೇರಿ ವನ್ಯಧಾಮದ ಹಿರಿಯ ಅರಣ್ಯಾಧಿಕಾರಿಗಳು ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಕಾರ್ಯಾಚರಣೆ ಆರಂಭಿಸಿದ್ದರು. ಮೂರು ದಿನಗಳ ಬಳಿಕ, ಬುಧವಾರ ಮಧ್ಯರಾತ್ರಿ ವೇಳೆ ಅಕ್ರಮವಾಗಿ ಅರಣ್ಯ ಪ್ರವೇಶಿಸಿ ಮರಳು ಸಾಗಣೆ ಮಾಡುತ್ತಿದ್ದಾಗ ದಾಳಿ ನಡೆಸಿ ಟ್ರ್ಯಾಕ್ಟರ್ ಸಮೇತ ವ್ಯಕ್ತಿಯನ್ನು ಬಂಧಿಸಿದ್ದಾರೆ.

ADVERTISEMENT

‘ಪ್ರಜಾವಾಣಿ’ಯ ವರದಿಯನ್ನು ನೋಡಿದ್ದ ಹಿರಿಯ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದರು. ಅಕ್ರಮವಾಗಿ ಮರಳು ಸಾಗಣೆಯಾಗುತ್ತಿರುವ ಸ್ಥಳಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗಿತ್ತು. ಅದರಂತೆ ಬುಧವಾರ ರಾತ್ರಿ ಬಂಡಳ್ಳಿ ಗ್ರಾಮದ ಅಣ್ಣಾದೊರೈ ಅಕ್ರಮವಾಗಿ ಅರಣ್ಯ ಪ್ರವೇಶಿಸಿ ಮರಳು ಸಂಗ್ರಹಣೆ ಮಾಡುವ ವೇಳೆ ದಾಳಿ ನಡೆಸಿ ಆತನನ್ನು ಬಂಧಿಸಲಾಗಿದೆ ಎಂದು ಪ್ರಭಾರ ವಲಯ ಅರಣ್ಯಾಧಿಕಾರಿ ಹೇಳಿದ್ದಾರೆ.

‘ಬಂಧಿತ ವ್ಯಕ್ತಿ ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಗಾಗಿ ಅರಣ್ಯದ ಸುತ್ತಲೂ ಅಳವಡಿಸಿದ್ದ ಸೋಲಾರ್ ತಂತಿ ಬೇಲಿಯನ್ನು ನಾಶಪಡಿಸಿರುವುದಾಗಿ ವಿಚಾರಣೆ ಸಂದರ್ಭದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನನ್ನು ನ್ಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವ ಕಾವೇರಿ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಎಸ್‌.ರಮೇಶ್‌ ಅವರು, ‘ಈಗ ಬಂಧಿತನಾಗಿರುವ ಆರೋಪಿಯಲ್ಲದೇ ಇನ್ನು ಕೆಲವು ಸ್ಥಳೀಯರು ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ. ಶೀಘ್ರದಲ್ಲೇ ಅವರನ್ನೂ ಬಂಧಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.