
ಚಾಮರಾಜನಗರ: ರಾಸಾಯನಿಕ ಮುಕ್ತ ಕೃಷಿ ಇಂದಿನ ತುರ್ತು ಅಗತ್ಯವಾಗಿದ್ದು ರೈತರು ಸಾವಯವ ಕೃಷಿಯತ್ತ ಚಿತ್ತ ಹರಿಸಬೇಕು ಎಂದು ಸುತ್ತೂರು ಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಲಹೆ ನೀಡಿದರು.
ನಗರದ ಡಾ.ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಶನಿವಾರ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ರೈತಸಂಘ ಹಾಗೂ ಹಸಿರುಸೇನೆ, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ರೈತ ದಿನಾಚರಣೆ, ರಾಜ್ಯಮಟ್ಟದ ರೈತ ಚಿಂತನಾ ಸಮಾವೇಶದ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು ರೈತ ಉಳಿದರೆ ಮಾತ್ರ ದೇಶ ಉಳಿಯುತ್ತದೆ ಎಂಬ ಸತ್ಯ ಅರಿಯಬೇಕು ಎಂದರು.
ಆಧುನಿಕ ಕೃಷಿ ಪದ್ಧತಿ ಹೆಸರಿನಲ್ಲಿ ಅತಿಯಾದ ರಾಸಾಯನಿಕಗಳ ಬಳಕೆಯಿಂದ ಆಹಾರ ವಿಷವಾಗಿ ಮನುಷ್ಯನ ದೇಹ ಸೇರುತ್ತಿದೆ. ರೋಗ ಬಾಧೆ ನಿಯಂತ್ರಣ ಹಾಗೂ ಹೆಚ್ಚು ಇಳುವರಿ ಪಡೆಯುವ ಉದ್ದೇಶದಿಂದ ನಿಗದಿಗಿಂತಲೂ ಹೆಚ್ಚು ಕೀಟನಾಶಕ, ರಾಸಾಯನಿಕ ಬಳಕೆ ಮಾಡುತ್ತಿರುವುದು ಆತಂಕಕಾರಿ. ರೈತರು ರಾಸಾಯನಿಕ ಮುಕ್ತ ಕೃಷಿಯತ್ತ ಹೊರಳುವ ಬಗ್ಗೆ ಗಂಭೀರ ಚಿಂತನೆ ಮಾಡಬೇಕು ಎಂದರು.
ರೈತರ ದುಡಿಮೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆದರೂ ರೈತ ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ ಈ ನಿಟ್ಟಿನಲ್ಲಿ ಸರ್ಕಾರ ವೈಜ್ಞಾನಿಕ ಬೆಲೆ ನಿಗದಿ ಮಾಡಿದರೆ ರೈತರು ಬದುಕು ಹಸನಾಗಲಿದೆ, ರೈತರ ಬೆಳೆಗಳಿಗೆ ಹಾನಿಯಾದರೆ ಸೂಕ್ತ ಪರಿಹಾರ ನೀಡಬೇಕು ಎಂದು ಸುತ್ತೂರು ಸ್ವಾಮೀಜಿ ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮಾತನಾಡಿ, ರಾಜ್ಯ ಸರ್ಕಾರಕ್ಕೆ ರೈತರ ಸಮಸ್ಯೆಗಳ ಬಗ್ಗೆ ಅರಿವಿದ್ದು ಅನ್ನದಾತರ ಬೇಡಿಕೆಗಳಿಗೆ ಸ್ಪಂದಿಸಲಿದ್ದಾರೆ. ಎಲ್ಲ ಸಮಸ್ಯೆಗಳಿಗೂ ಪ್ರತಿಭಟನೆಗಳೇ ಪರಿಹಾರವಲ್ಲ; ರೈತರು ಬೀದಿಗಿಳಿಯುವ ಮುನ್ನ ಸರ್ಕಾರ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದು ಚರ್ಚಿಸಬೇಕು ಎಂದು ಸಲಹೆ ನೀಡಿದರು.
ಕೃಷಿಯಲ್ಲಿ ಅತಿಯಾದ ರಾಸಾಯನಿಕ ಬಳಕೆಯಿಂದ ಆಹಾರ ವಿಷವಾಗುತ್ತಿದ್ದು ಸಾರ್ವಜನಿಕರ ದೇಹ ಸೇರಿ ಅನಾರೋಗ್ಯ ಸಮಸ್ಯೆಗಳು ಕಾಣಿಸುತ್ತಿವೆ. ಈ ನಿಟ್ಟಿನಲ್ಲಿ ರೈತರು ಚಿಂತನೆ ಮಾಡಬೇಕಿದ್ದು ರಾಸಾಯನಿಕ ಮುಕ್ತ ಕೃಷಿಗೆ ಮುಂದಾಗಬೇಕು. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುವ ಹಾಗೂ ರೈತಪರ ನೀತಿಗಳನ್ನು ಜಾರಿಗೊಳಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು ಎಂದರು.
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, 1960ರ ದಶಕದಲ್ಲಿ ತಂದೆ ಬಿ.ರಾಚಯ್ಯನವರು ಸುವರ್ಣಾವತಿ, ಚಿಕ್ಕಹೊಳೆ ಜಲಾಶಯ ನಿರ್ಮಾಣ ಮಾಡಿದ ಫಲವಾಗಿ ಅಚ್ಚುಕಟ್ಟು ವ್ಯಾಪ್ತಿಯ ರೈತರು ನೀರಾವರಿ ಬೆಳೆ ಬೆಳೆಯುತ್ತಿದ್ದಾರೆ. ಕೆರೆ ಕಟ್ಟೆಗಳಲ್ಲಿ, ಕೊಳವೆ ಬಾವಿಗಳಲ್ಲಿ ಅಂತರ್ಜಲ ಪ್ರಮಾಣ ಹೆಚ್ಚಾಗಿದೆ. ಕಾಂಗ್ರೆಸ್ ಸರ್ಕಾರ ಕೂಡ ಜಿಲ್ಲೆಯಲ್ಲಿ ಕೆರೆ ಕಟ್ಟೆಗಳನ್ನು ತುಂಬಿಸುವ ಕಾರ್ಯಕ್ರಮಗಳಿಗೆ ಹಾಗೂ ನೀರಾವರಿ ಯೋಜನೆಗಳ ಜಾರಿಗೆ ಒತ್ತು ನೀಡಿದೆ. ರೈತರ ಬದುಕು ಹಸನಾಗಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ನಂಜುಂಡಪ್ಪ ವರದಿಯ ಪ್ರಕಾರ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ನೀರಾವರಿಗಿಂತ ಮಳೆಯಾಶ್ರಿತ ಕೃಷಿಯೇ ಹೆಚ್ಚಾಗಿದೆ. ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಜಿಲ್ಲೆಯಲ್ಲಿ ಕೆರೆಗಳನ್ನು ತುಂಬಿಸುವ ಕಾರ್ಯಕ್ರಮಗಳಿಗೆ ಒತ್ತು ನೀಡಿದೆ. ಹನೂರು ಹೊರತುಪಡಿಸಿ ಉಳಿದ ತಾಲ್ಲೂಕುಗಳ ಕೆರೆಗಳು ತುಂಬುತ್ತಿವೆ ಎಂದರು.
ರೈತರು ಮಾರುಕಟ್ಟೆ ಆಧಾರಿತ ಕೃಷಿ ಮಾಡಬೇಕು, ಯಾವ ಬೆಳೆಗೆ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ, ಬೆಲೆ ಸಿಗುತ್ತದೆ ಎಂಬುದನ್ನು ಅಂದಾಜಿಸಿ ಬೆಳೆಯಬೇಕು, ಈ ನಿಟ್ಟಿನಲ್ಲಿ ತಂತ್ರಜ್ಞಾನ ಹಾಗೂ ತಜ್ಞರ ಮಾರ್ಗದರ್ಶನ ಪಡೆಯಬೇಕು ಎಂದು ಸಲಹೆ ನೀಡಿದರು.
ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶಪ್ರಸಾದ್, ವಿಧಾನ ಪರಿಷತ್ ಸದಸ್ಯ ಶಿವಕುಮಾರ್, ಕೊಡುಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ್ ಎಸ್.ಆಲೂರ್, ಹನೂರು ನಿಶಾಂತ್, ತೇಜಸ್ ಪಟೇಲ್, ನಾರಾಯಣ್ ರೆಡ್ಡಿ ಮಾತನಾಡಿದರು. ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿಶ್ವ ರೈತ ದಿನಾಚರಣೆ ಸಮಿತಿ ಗೌರವಾಧ್ಯಕ್ಷ ಪ್ರೊ ಎಸ್.ಶಿವರಾಜಪ್ಪ, ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ, ಎಸ್ಪಿ ಮುತ್ತುರಾಜು, ಸಂಘದ ಜಿಲ್ಲಾಧ್ಯಕ್ಷ ಹಾಲಿನ ನಾಗರಾಜು ಸೇರಿದಂತೆ ಹಲವರು ಇದ್ದರು.
‘ರೈತ ಉಳಿದರೆ ಮಾತ್ರ ದೇಶ ಉಳಿಯುತ್ತದೆ’ ‘ರೈತ ಬೆಳೆಗಳಿಗೆ ಉತ್ತಮ ಬೆಲೆ ನಿಗದಿಪಡಿಸಿ’ ‘ಸಾವಯವ ಕೃಷಿಯತ್ತ ರೈತರ ಚಿತ್ತ ಅಗತ್ಯ’
‘ಕೆರೆಗಳನ್ನು ತುಂಬಿಸಲು ಒತ್ತು’
ಪ್ರೊ.ನಂಜುಂಡಪ್ಪ ವರದಿಯ ಪ್ರಕಾರ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ನೀರಾವರಿಗಿಂತ ಮಳೆಯಾಶ್ರಿತ ಕೃಷಿಯೇ ಹೆಚ್ಚಾಗಿದೆ. ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಜಿಲ್ಲೆಯಲ್ಲಿ ಕೆರೆಗಳನ್ನು ತುಂಬಿಸುವ ಕಾರ್ಯಕ್ರಮಗಳಿಗೆ ಒತ್ತು ನೀಡಿದೆ. ಹನೂರು ಹೊರತುಪಡಿಸಿ ಉಳಿದ ತಾಲ್ಲೂಕುಗಳ ಕೆರೆಗಳು ತುಂಬುತ್ತಿವೆ. ರೈತರು ಮಾರುಕಟ್ಟೆ ಆಧಾರಿತ ಕೃಷಿ ಮಾಡಬೇಕು ಯಾವ ಬೆಳೆಗೆ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಬೆಲೆ ಸಿಗುತ್ತದೆ ಎಂಬುದನ್ನು ಅಂದಾಜಿಸಿ ಬೆಳೆಯಬೇಕು ಈ ನಿಟ್ಟಿನಲ್ಲಿ ತಂತ್ರಜ್ಞಾನ ಹಾಗೂ ತಜ್ಞರ ಮಾರ್ಗದರ್ಶನ ಪಡೆಯಬೇಕು ಎಂದು ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.