ಹನೂರು (ಚಾಮರಾಜನಗರ ಜಿಲ್ಲೆ): ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರಿನ ಸಿದ್ದಪ್ಪಾಜಿ ಜಾತ್ರೆಯಲ್ಲಿ ಸೋಮವಾರ ಪಂಕ್ತಿಸೇವೆ ಸಾಂಗವಾಗಿ ಜರುಗಿತು.
ಐದು ದಿನದ ಜಾತ್ರೆಯಲ್ಲಿ ನಾಲ್ಕನೇ ದಿನದ ಪಂಕ್ತಿಸೇವೆ ವಿಷಯದಲ್ಲಿ ಪರ–ವಿರೋಧ ಚರ್ಚೆ ಉಂಟಾಗಿತ್ತು. ದೇವಾಲಯದ ಆವರಣದಲ್ಲಿ ಪ್ರಾಣಿ ಬಲಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದ್ದಕ್ಕೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಪಂಕ್ತಿ ಸೇವೆಗೆ ಮುಕ್ತ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದರು.
ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಜಾತ್ರೆಯ ಮೊದಲ ದಿನವೇ (ಜ.6) ಕ್ಷೇತ್ರಕ್ಕೆ ಬಂದು ವಾಸ್ತವ್ಯ ಹೂಡಿದ್ದ ಭಕ್ತರು ಸೋಮವಾರ ಸ್ಥಳದಲ್ಲೇ ಕುರಿ, ಮೇಕೆ, ಕೋಳಿ ಮಾಂಸದ ಅಡುಗೆ ಸಿದ್ಧಪಡಿಸಿ ಕಂಡಾಯಕ್ಕೆ ಎಡೆ ಹಾಕಿ ಕುಟುಂಬಸ್ಥರು ಒಟ್ಟಾಗಿ ಕುಳಿತು ಆಹಾರ ಸೇವಿಸುವ ಮೂಲಕ ಸೇವೆ ಸಲ್ಲಿಸಿದರು.
ಸಿದ್ದಪ್ಪಾಜಿ ದರ್ಶನ: ಜಿಲ್ಲೆ, ಹೊರ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ಸಿದ್ದಪ್ಪಾಜಿಯವರ ದರ್ಶನ ಪಡೆದು ವಿವಿಧ ಹರಕೆ ಸಲ್ಲಿಸಿದರು. ಪ್ರಾಣಿ ಬಲಿ ನಿಷೇಧಿಸಿದ್ದರಿಂದ ಕ್ಷೇತ್ರದ ಸುತ್ತಮುತ್ತ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ 8 ಕಡೆ ಚೆಕ್ಪೋಸ್ಟ್ ನಿರ್ಮಿಸಿ, ವಾಹನಗಳನ್ನು ತಪಾಸಣೆ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.