ADVERTISEMENT

ಗೋಮಾಂಸ ಸೇವನೆ: ಸಿದ್ದರಾಮಯ್ಯಗೆ ಸವಾಲು ಹಾಕಿಲ್ಲ ಎಂದ ಸಚಿವ ಪ್ರಭು ಚವಾಣ್‌

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2021, 11:49 IST
Last Updated 17 ಫೆಬ್ರುವರಿ 2021, 11:49 IST
ಪಶುಸಂಗೋಪನಾ ಸಚಿವ ಪ್ರಭು ಚವಾಣ್‌
ಪಶುಸಂಗೋಪನಾ ಸಚಿವ ಪ್ರಭು ಚವಾಣ್‌    

ಚಾಮರಾಜನಗರ: ‘ಗೋ ಮಾಂಸ ತಿನ್ನುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ನಾನು ಸವಾಲು ಹಾಕಿಲ್ಲ’ ಎಂದು ಪಶುಸಂಗೋಪನಾ ಸಚಿವ ಪ್ರಭು ಚವಾಣ್‌ ಅವರು ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ಗೋಮಾಂಸ ತಿ‌ನ್ನುತ್ತೇನೆ, ತಿನ್ನುತ್ತೇನೆ ಎಂದು ಪದೇ ಪದೇ ಹೇಳುತ್ತಿದ್ದರು. ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಈಗ ವಿರೋಧಪಕ್ಷ ನಾಯಕರಾಗಿದ್ದಾರೆ.ಅವರ ಹೇಳಿಕೆ ಸರಿಯಿಲ್ಲ ಎಂದಷ್ಟೇ ಹೇಳಿದ್ದೇನೆ’ ಎಂದು ಪಶ್ನೆಯೊಂದಕ್ಕೆ ಉತ್ತರಿಸಿದರು.

ವಿರೋಧ ಮಾಡಲೇ ಬೇಕು: ರಾಮಮಂದಿರಕ್ಕೆ ನಿರ್ಮಾಣಕ್ಕೆ ಕೊಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಹೀಗೆ ಹೇಳುತ್ತಿದ್ದಾರೆ. ಅವರ ಮಗ ದೇಣಿಗೆ ಕೊಟ್ಟಿದ್ದಾರೆ. ಅವರ ತಮ್ಮನ ಮಗ ಕೊಟ್ಟಿದ್ದಾರೆ’ ಎಂದರು.

ADVERTISEMENT

ರಾಮಮಂದಿರಕ್ಕೆ ದೇಣಿಗೆ ಕೊಡದವರ ಮನೆ ಗುರುತು ಮಾಡಲಾಗುತ್ತಿದೆ ಎಂಬ ಕುಮಾರಸ್ವಾಮಿ ಅವರು ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದಾರೆ’ ಎಂದರು.

‘ರಾಮಮಂದಿರಕ್ಕೆ ಹಣ ಸಂಗ್ರಹ ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದೆ. ದೇಣಿಗೆ ನೀಡಿದವರಿಗೆ ರಸೀದಿ ನೀಡುತ್ತಿದ್ದೇವೆ. ವಿರೋಧ ಪಕ್ಷಗಳ ಮುಖಂಡರು ವಿರೋಧ ಮಾಡುತ್ತಿದ್ದಾರೆ. ಅವರು ವಿರೋಧಿಸಲೇ ಬೇಕು’ ಎಂದರು.

ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಲು ಕ್ರಮ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಭು ಚವಾಣ್‌ ಅವರು, ‘ಉತ್ತರ ಪ್ರದೇಶದ ಮಾದರಿಯಿಂತೆ ರಾಜ್ಯದಲ್ಲೂ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಗುವುದು‌’ ಎಂದು ಹೇಳಿದರು.

ಕಾಯ್ದೆ ಹಾಗೂ ಅದರ ನಿಯಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗುವುದು. ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಗ್ರಾಮಗಳಿಗೆ ತೆರಳಿ ಗ್ರಾಮ ಸಭೆಗಳನ್ನು ನಡೆಸಲು ಸೂಚನೆ ನೀಡಿದ್ದೇನೆ. ಮಠಗಳು, ಸಂಘ ಸಂಸ್ಥೆಗಳು ಗೋಶಾಲೆಗಳನ್ನು ತೆರೆಯಲು ಮುಂದೆ ಬಂದರೆ ಅವುಗಳಿಗೆ ಸರ್ಕಾರದಿಂದ ಅನುದಾನ ನೀಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.