
ಚಾಮರಾಜನಗರ: ಖಾಸಗಿ ಶಾಲೆಗಳಿಗೆ ಭೂ ಪರಿವರ್ತನೆ ನಿಯಮದಿಂದ ವಿನಾಯಿತಿ ನೀಡಬೇಕು, 15 ಮೀಟರ್ಗಿಂತ ಕೆಳಗಿನ ಶಾಲಾ ಕಟ್ಟಡಗಳಿಗೆ ಸರಳ ಅಗ್ನಿ ಸುರಕ್ಷತಾ ಕ್ರಮಗಳು ಅನ್ವಯವಾಗಬೇಕು, ಶಾಲೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಕನಿಷ್ಠ 10 ವರ್ಷಗಳಿಗೆ ವಿಸ್ತರಿಸಬೇಕು, ಮಾನ್ಯತೆ ಪ್ರಕ್ರಿಯೆ ಸರಳೀಕರಣಗೊಳಿಸಿ ಏಕಗವಾಕ್ಷಿ ಮೂಲಕ ವಿತರಿಸಬೇಕು, ಆರ್ಟಿಇ ಬಾಕಿ ಹಣ ಬಿಡುಗಡೆ ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ನಗರದ ಭುವನೇಶ್ವರಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆಯಲ್ಲಿ ಬಂದ ಖಾಸಗಿ ಶಾಲೆಯ ಶಿಕ್ಷಕರು ಸರ್ಕಾರದ ನಿಯಮಗಳ ವಿರುದ್ಧ ಘೋಷಣೆ ಕೂಗಿದರು. ರೂಪ್ಸಾ ಕರ್ನಾಟಕದ ರಾಜ್ಯಾಧ್ಯಕ್ಷ ಹಾಲೆನೂರು ಲೇಪಾಕ್ಷಿ ಮಾತನಾಡಿ, ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಖಾಸಗಿ ಶಾಲೆಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಕಿರುಕುಳದ ವಿರುದ್ಧ ಹಾಗೂ ಬೇಡಿಕೆಗಳ ಈಡೇರಿಕೆಗಾಗಿ ಶಿಕ್ಷಕರು ಸಂಘಟಿತವಾಗಿ ಹೋರಾಟ ಮಾಡಿದರಷ್ಟೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಶಿಕ್ಷಕರಿಗೆ ಉಳಿಗಾಲ ಎಂದು ಎಚ್ಚರಿಕೆ ನೀಡಿದರು.
ಕೈಗಾರಿಕೆಗಳ ಸ್ಥಾಪನೆಗೆ 2 ಎಕರೆವರೆಗೂ ಭೂ ಪರಿವರ್ತನೆಯ ಅಗತ್ಯವಿಲ್ಲ ಎಂಬ ನಿಯಮ ಮಾಡಿರುವ ಸರ್ಕಾರ ಮಕ್ಕಳ ಭವಿಷ್ಯ ರೂಪಿಸುವ ಖಾಸಗಿ ಶಾಲೆಗಳಿಗೆ ಭೂ ಪರಿವರ್ತನೆ ನಿಯಮ ಕಡ್ಡಾಯಗೊಳಿಸಿರುವುದು ಖಂಡನೀಯ. ರಾಜ್ಯದ ಶೇ 46ರಷ್ಟು ಖಾಸಗಿ ಶಾಲೆಗಳ ಭೂಮಿ ಇದುವರೆಗೂ ಭೂ ಪರಿವರ್ತನೆಯಾಗಿಲ್ಲ. ಈಗ ಮಾಡಿಕೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು.
ಭೂ ಪರಿವರ್ತನೆ ನಿಯಮ ಸಂಬಂಧ ಖಾಸಗಿ ಹಾಗೂ ಸರ್ಕಾರಿ ಶಾಲೆಗಳಿಗೆ ಒಂದೇ ನಿಯಮ ಅನ್ವಯವಾಗಬೇಕು ಎಂದು ಹೈಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನಿಯಮ ಸರಳೀಕರಣಗೊಳಿಸಬೇಕು. ಇಲ್ಲವಾದರೆ ರಾಜ್ಯದಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ನಾಯಿ ಕೊಡೆಗಳಂತೆ ಎದ್ದಿದ್ದು 1 ರಿಂದ 10ನೇ ತರಗತಿವರೆಗೆ ಶಿಕ್ಷಣ ನೀಡುತ್ತಿರುವ ಖಾಸಗಿ ಶಾಲೆಗಳಿಗೆ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ವಿಧಿಸಲಾಗಿರುವ ನಿಯಮಗಳು ಪೂರ್ವ ಪ್ರಾಥಮಿಕ ಶಾಲೆಗಳಿಗೂ ಅನ್ವಯವಾಗಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಲಾಗಿದ್ದು 15 ದಿನಗಳೊಳಗೆ ಸರ್ಕಾರದಿಂದ ಆದೇಶ ಹೊರಬೀಳುವ ವಿಶ್ವಾಸವಿದೆ ಎಂದರು.
ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ಗೌರವಾಧ್ಯಕ್ಷ ಬಾಲಸುಬ್ರಹ್ಮಣ್ಯ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದುವ ಪ್ರತಿ ಮಗುವಿನ ಮೇಲೂ ಲಕ್ಷಾಂತರ ರೂಪಾಯಿ ವ್ಯಯಿಸುವ ರಾಜ್ಯ ಸರ್ಕಾರ ನಿಯಮಗಳು, ಶುಲ್ಕಗಳ ಹೆಸರಿನಲ್ಲಿ ಖಾಸಗಿ ಶಾಲೆಗಳ ಮೇಲೆ ಗದಾ ಪ್ರಹಾರ ಮಾಡುತ್ತಿದೆ. ಪರಿಣಾಮ ಸಣ್ಣ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಿಕ್ಷಣ ಇಲಾಖೆಯ ಜೊತೆಗೆ ಅನಗತ್ಯವಾಗಿ ಲೋಕೋಪಯೋಗಿ, ಅಗ್ನಿಶಾಮಕ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಥಳೀಯ ಸಂಸ್ಥೆಗಳನ್ನು ಜೋಡಿಸಿರುವುದು ಭ್ರಷ್ಟಾಚಾರಕ್ಕೆ ಅನುವು ಮಾಡಿಕೊಟ್ಟಂತಾಗಿದೆ. ನಿಯಮಗಳ ಹೆಸರಿನಲ್ಲಿ ಅಧಿಕಾರಿಗಳು ದರ್ಬಾರ್ ನಡೆಸುತ್ತಿದ್ದು ಕಡಿವಾಣ ಹಾಕಬೇಕಿದೆ ಎಂದರು.
ಬಳಿಕ ಜಿಲ್ಲಾ ಪಂಚಾಯಿತಿ ಸಿಇಒ ಮೋನಾರೋತ್ ಹಾಗೂ ಡಿಡಿಪಿಐ ಚಂದ್ರಪಾಟೀಲ್ ಅವರ ಮೂಲಕ ಸರ್ಕಾರಕ್ಕೆ ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭ ಒಕ್ಕೂಟದ ಜಿಲ್ಲಾಧ್ಯಕ್ಷ ಎಂ.ಎಲ್. ಜಿ ಲಿಂಗರಾಜು, ರೂಪ್ಸಾ ವಿಭಾಗೀಯ ಅಧ್ಯಕ್ಷ ನಂಜುಂಡಸ್ವಾಮಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಮಂಜುನಾಥ್, ಗೌರವ ಅಧ್ಯಕ್ಷ ರಾಜೇಂದ್ರ, ಖಜಾಂಚಿ ಮೋಹನ ಕುಮಾರ್, ನಿಕಟಪೂರ್ವ ಅಧ್ಯಕ್ಷ ನಂಜುಂಡಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಕಾರ್ಯದರ್ಶಿ ಮಹೇಶ್ ಸೇರಿದಂತೆ ಹಲವರು ಇದ್ದರು.
‘ಸ್ಟಾಂಪ್ ಖರೀದಿಸುವ ಅಗತ್ಯವಿಲ್ಲ’
ಸ್ಟೂಡೆಂಟ್ ಹಾಗೂ ಟೀಚರ್ಸ್ ವೆಲ್ಫೇರ್ ಫಂಡ್ಗೆ ಸ್ಟಾಂಪ್ ಹೆಸರಿನಲ್ಲಿ ಖಾಸಗಿ ಶಾಲೆಗಳ ಶಿಕ್ಷಕರಿಂದ ಹಣ ಸಂಗ್ರಹಿಸುತ್ತಿರುವ ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳ ಶಿಕ್ಷಕರ ಶ್ರೇಯೋಭಿವೃದ್ಧಿಗೆ ಬಳಸುತ್ತಿರುವುದು ಖಂಡನೀಯ. ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಖಾಸಗಿ ಶಿಕ್ಷಕರಿಗೆ ಹಾಗೂ ಅವರ ಮಕ್ಕಳಿಗೆ ಕಲ್ಯಾಣ ನಿಧಿ ಬಳಕೆ ಮಾಡುವುದಾಗಿ ಸರ್ಕಾರ ಆದೇಶ ಹೊರಡಿಸುವವರೆಗೂ ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದಿಂದ ವಿತರಿಸುವ ಸ್ಟಾಂಪ್ಗಳನ್ನು ಖರೀದಿಸುವ ಅಗತ್ಯವಿಲ್ಲ ಎಂದು ರೂಪ್ಸಾ ಅಧ್ಯಕ್ಷ ಲೇಪಾಕ್ಷಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.