ADVERTISEMENT

ಮಹಾರಾಷ್ಟ್ರ ಸಿ.ಎಂ ಹೇಳಿಕೆ ಖಂಡಿಸಿ ಪ್ರತಿಭಟನೆ

ರಾಜ್ಯ ಹಲವು ಪ್ರದೇಶ್ ಮಹಾರಾಷ್ಟ್ರಕ್ಕೆ ಸೇರ್ಪಡೆ; ಶಿಂಧೆ ಭಾವಚಿತ್ರ ಸುಟ್ಟು ಆಕ್ರೋಶ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 12:30 IST
Last Updated 25 ನವೆಂಬರ್ 2022, 12:30 IST
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಹೇಳಿಕೆ ಖಂಡಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಚಾಮರಾಜನಗರದಲ್ಲಿ ಶಿಂಧೆ ಅವರ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಹೇಳಿಕೆ ಖಂಡಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಚಾಮರಾಜನಗರದಲ್ಲಿ ಶಿಂಧೆ ಅವರ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು   

ಚಾಮರಾಜನಗರ: ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂ‌ತೆ ಗಡಿಭಾಗದ ಹಲವು ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಹೇಳಿಕೆ ನೀಡಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಹೇಳಿಕೆ ಖಂಡಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಚಾಮರಾಜೇಶ್ವರ ದೇವಾಲಯದ ಆವರಣದಿಂದ ಭುವನೇಶ್ವರಿ ವೃತ್ತದವರೆಗೂ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಮಹಾರಾಷ್ಟ್ರ, ಶಿಂಧೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಭುವನೇಶ್ವರಿ ವೃತ್ತದಲ್ಲಿ ಏಕನಾಥ ಶಿಂಧೆ ಅವರ ಭಾವಚಿತ್ರಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ‘ಮಹಾರಾಷ್ಟ್ರ ಸರ್ಕಾರ ಪದೇ ಪದೇ ಗಡಿ ಕ್ಯಾತೆ ತೆಗೆಯುತ್ತಿರುವುದು ವಿಪರ್ಯಾಸದ ಸಂಗತಿ. ಎರಡು ಮೂರು ದಿನಗಳಿಂದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಯೇ ತೀರುತ್ತೇವೆ ಎಂದು ಉದ್ಧಟತನದ ಹೇಳಿಕೆ ನೀಡುವ ಮೂಲಕ ರಾಜ್ಯ ರಾಜ್ಯಗಳ ನಡುವೆ ಸಂಘರ್ಷವನ್ನು ಹುಟ್ಟುಹಾಕುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

ಮಹಾಜನ್ ವರದಿ ಪ್ರಕಾರ, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಗಡಿ ವಿವಾದ ಎಂದೋ ಮುಗಿದ ಅಧ್ಯಾಯ. ಕರ್ನಾಟಕದ ಸೊಲ್ಹಾಪುರ, ಸಾಂಗ್ಲಿ ಸೇರಿದಂತೆ ಇತರೆ ಅಚ್ಚ ಕನ್ನಡ ಮಾತಾಡುವ ಪ್ರದೇಶಗಳು ಮಹಾರಾಷ್ಟ್ರದಲ್ಲಿವೆ. ಅವರ ರೀತಿಯಲ್ಲಿಯೇ ನಾವೂ ನಮ್ಮ ಪ್ರದೇಶಗಳನ್ನು ಬಿಟ್ಟುಕೊಡಿ ಎಂಬ ಹೇಳಿಕೆ ನೀಡಬಹುದಿತ್ತಲ್ಲ’ ಎಂದು ಪ್ರಶ್ನಿಸಿದರು.

‘ಮಹಾರಾಷ್ಟ್ರ ಸರ್ಕಾರ ಗಡಿ ಕ್ಯಾತೆ ತೆಗೆಯುತ್ತಿದ್ದರೂ, ರಾಜ್ಯದ 28 ಸಂಸದರು ಮೌನವಹಿಸಿದ್ದಾರೆ. ಪ್ರಧಾನಿ ಕೂಡ ಇದರ ಬಗ್ಗೆ ಚಕಾರವೆತ್ತುತ್ತಿಲ್ಲ. ಮಹಾರಾಷ್ಟ್ರ ಸರ್ಕಾರ ಕರ್ನಾಟಕದ ಪ್ರದೇಶಗಳನ್ನು ಸೇರ್ಪಡೆ ಮಾಡಿಕೊಳ್ಳುವ ವಿಚಾರದಿಂದ ಹಿಂದೆ ಸರಿಯಬೇಕು, ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಲಿವೆ’ ಎಂದು ಎಚ್ಚರಿಸಿದರು.

ಸೇನಾಪಡೆ ಪ್ರಧಾನಕಾರ್ಯದರ್ಶಿ ಚಾ.ವೆಂ.ರಾಜಗೋಪಾಲ್, ಗೌರವಾಧ್ಯಕ್ಷ ಶಾ.ಮುರಳಿ, ನಿಜಧ್ವನಿ ಗೋವಿಂದರಾಜು, ಕರ್ನಾಟಕ ಗಡಿನಾಡು ವೇದಿಕೆ ಅಧ್ಯಕ್ಷ ಚಾ.ರಾ.ಕುಮಾರ್, ಪಣ್ಯದಹುಂಡಿ ರಾಜು, ಮರಿಯಾಲದಹುಂಡಿ ಕುಮಾರ್, ಸಾಗರ್ ರಾವತ್, ಚಾ.ಸಿ.ಸಿದ್ದರಾಜು, ದೊರೆ, ವರದನಾಯಕ, ನಂಜುಂಡಸ್ವಾಮಿ, ಆಟೊಮಹದೇವಸ್ವಾಮಿ, ಹೆಗ್ಗೋಠಾರ ಮಹದೇವಸ್ವಾಮಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.