ಚಾಮರಾಜನಗರ: ಮೈಸೂರು ಜಿಲ್ಲೆಯಲ್ಲಿ ಜಿಲ್ಲಾಡಳಿತವು ದೇವಾಲಯಗಳನ್ನು ತೆರವುಗೊಳಿಸಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಶ್ರೀಚಾಮರಾಜೇಶ್ವರ ಉದ್ಯಾನವನದ ಅವರಣದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ವೃತ್ತದಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿ ಮೈಸೂರು ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸೇನಾ ಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರು ಮಾತನಾಡಿ, ‘ರಾಜ್ಯ ಸರ್ಕಾರ, ಮೈಸೂರು ಜಿಲ್ಲಾಡಳಿತ ಯಾವುದೇ ಮುನ್ಸೂಚನೆ ಇಲ್ಲದೆ ದೇವಸ್ಥಾನಗಳನ್ನು ಏಕಾಏಕಿ ತೆರವುಗೊಳಿಸುತ್ತಿರುವುದು ಖಂಡನೀಯ. ಸುಪ್ರೀಂ ಕೋರ್ಟ್ ತೀರ್ಪಿನ ಕಾರಣದಿಂದ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಕಾರಣ ನೀಡಿ ದೇವಸ್ಥಾನಗಳನ್ನು ತೆರವು ಗೊಳಿಸುತ್ತಿರುವುದು ಸರಿಯಲ್ಲ. ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿ ದೇವಸ್ಥಾನಗಳ ಸಂರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ’ ಎಂದು ಹೇಳಿದರು.
‘ಮೈಸೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ರಾಜ್ಯ ಸರ್ಕಾರ, ಜಿಲ್ಲಾಡಳಿತ ನೇರಹೊಣೆ. ದೇವಸ್ಥಾನಗಳ ಧ್ವಂಸ ಮಾಡುವ ಸಂಸ್ಕೃತಿ ನಮ್ಮ ದೇಶದ್ದಲ್ಲ. ದೇಶದ ಸಂಸ್ಕೃತಿ ಶಾಂತಿ, ಸೌಹರ್ದತೆಯಿಂದ ಕೂಡಿದೆ. ಮುಂದೆ ಯಾವುದೇ ವಕಾರಣಕ್ಕೂ ದೇವಸ್ಥಾನಗಳು, ಮಸೀದಿ, ಚರ್ಚ್ಗಳನ್ನು ತೆರವುಗೊಳಿಸಬಾರದು, ಮತ್ತೆ ದೇವಸ್ಥಾನಗಳನ್ನು ತೆರವುಗೊಳಿಸಿದರೆ ಸರ್ಕಾರದ ವಿರುದ್ಧ ಜನಾಂದೋಲನ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.
ಶಾ.ಮುರಳಿ, ನಿಜಧ್ವನಿಗೋವಿಂದರಾಜು, ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಚಾ.ರಾ.ಕುಮಾರ್, ಚಾ.ವೆಂ.ರಾಜ್ ಗೋಪಾಲ್, ಚಾ.ಹ.ಶಿವರಾಜ್, ಶಿವಶಂಕರನಾಯಕ, ಮಹೇಶ್ ಗೌಡ, ಅರುಣಕುಮಾರ್ ಗೌಡ, ಗು.ಪುರುಷೋತ್ತಮ, ತಾಂಡವಮೂರ್ತಿ, ವೀರಭದ್ರ, ಶಿವು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.