ADVERTISEMENT

ಚಾಮರಾಜನಗರ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಅಂಕಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2021, 12:07 IST
Last Updated 3 ಆಗಸ್ಟ್ 2021, 12:07 IST
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಡಿಮೆ ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ ಕೋವಿಡ್‌ ಅವಧಿಯ ವಿಶೇಷ ಪ್ರೋತ್ಸಾಹ ಅಂಕ ನೀಡಬೇಕು ಎಂದು ಆಗ್ರಹಿಸಿ ಚಾಮರಾಜನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಡಿಮೆ ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ ಕೋವಿಡ್‌ ಅವಧಿಯ ವಿಶೇಷ ಪ್ರೋತ್ಸಾಹ ಅಂಕ ನೀಡಬೇಕು ಎಂದು ಆಗ್ರಹಿಸಿ ಚಾಮರಾಜನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು   

ಚಾಮರಾಜನಗರ: ಗ್ರಾಮೀಣ ರೈತ ಮಕ್ಕಳ, ದಲಿತ, ಹಿಂದುಳಿದ, ಗುಡ್ಡುಗಾಡು ಪ್ರದೇಶಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕೋವಿಡ್ ರೋಗಾವಧಿಯ ವಿಶೇಷ ಪೋತ್ಸಾಹ ಅಂಕ ನೀಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ವೇದಿಕೆ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಸಮಿತಿಗಳ ಆಶ್ರಯದಲ್ಲಿ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ಜಿಲ್ಲಾಡಳಿತ ಮುಂಭಾಗದಲ್ಲಿ ಸೇರಿದ ಪ್ರತಿಭಟನಕಾರರು ಮಕ್ಕಳಿಗೆ ಪ್ರೋತ್ಸಾಹ ಅಂಕಗಳನ್ನು ನೀಡುವಂತೆ ಆಗ್ರಹಿಸಿದರು.

ಈ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ, ಅವರ ಎಂಟನೇ ಅಥವಾ ಒಂಬತ್ತನೇ ತರಗತಿಯ ಶೈಕ್ಷಣಿಕ ಸಾಧನೆ ಆಧರಿಸಿ ವಿಶೇಷ ಅಂಕಗಳನ್ನು ನೀಡುವ ವ್ಯವಸ್ಥೆ ಆಗಬೇಕು. ಕಲಿಕೆಯೇ ಸಾಧ್ಯವಾಗದ ಗ್ರಾಮೀಣ ವಿದ್ಯಾರ್ಥಿಗಳಿಗೆ ಈ ಸಲದ ಪರೀಕ್ಷೆಯಿಂದಾಗಿ ಆಗಲಿರುವ ಅನ್ಯಾಯಗಳನ್ನು ಸರಿಪಡಿಸಲು ಈ ವ್ಯವಸ್ಥೆ ಮಾಡಬೇಕು’ ಎಂದು ಅವರು ಆಗ್ರಹಿಸಿದರು.

ADVERTISEMENT

‘ಗ್ರಾಮೀಣ ಪ್ರದೇಶದ ಹಾಗೂ ನಗರಗಳಲ್ಲಿರುವ ಎಲ್ಲ ಬಡ ವಿದ್ಯಾರ್ಥಿಗಳಿಗೆ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಮುಂದಿನ ಹಂತದ ವಿದ್ಯಾಭ್ಯಾಸದಲ್ಲಿ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳೆರಡರಲ್ಲೂ ಆದ್ಯತಾ ಪ್ರವೇಶ ವ್ಯವಸ್ಥೆ ಜಾರಿಗೊಳಿಸಬೇಕು’ ಎಂದು ಅವರು ಒತ್ತಾಯಿಸಿದರು.

‘ಎಸ್ಸೆಸ್ಸೆಲ್ಸಿ ನಂತರದ ಶೈಕ್ಷಣಿಕ ಆಯ್ಕೆಗಳು, ಶಿಷ್ಯವೇತನ, ಪ್ರೋತ್ಸಾಹ ಧನ, ಎಲ್ಲದರಲ್ಲೂ ಕೋವಿಡ್‌ ಅವಧಿಯ ವಿಶೇಷ ಪ್ರೋತ್ಸಾಹ ಅಂಕಗಳನ್ನು ಖಾಸಗಿ ಹಾಗೂ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಜಾರಿಗೆ ತರಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸಿ.ರಾಜಣ್ಣ,ಮುಖಂಡ ಜಿ.ಎಂ.ಗಾಡ್ಕರ್, ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಸಿ.ಎಂ.ಕೃಷ್ಣಮೂರ್ತಿ, ಡಿಎಸ್ಎಸ್ ಅಂಬೇಡ್ಕರ್ ವಾದ ವಿಭಾಗೀಯ ಸಂಚಾಲಕ ಸಿದ್ದರಾಜು ದೊಡ್ಡಿಂದುವಾಡಿ, ಕೆಡಿಎಸ್ಎಸ್ ಜಿಲ್ಲಾ ಸಂಚಾಲಕ ಕೆ.ಎಂ.ನಾಗರಾಜು, ಕೆಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಕಂದಹಳ್ಳಿ ನಾರಾಯಣ್, ಜಿಲ್ಲಾ ಸಂಚಾಲಕ ಸಿ.ಎಂ.ಶಿವಣ್ಣ, ಜನಹಿತಾ ಶಕ್ತಿ ಹೋರಾಟ ಸಮಿತಿ ಅಧ್ಯಕ್ಷ ಸುರೇಶ್ ರಾಮಸಮುದ್ರ, ಎಸ್ಎಸ್‌ಡಿ ಅಧ್ಯಕ್ಷ ಸಂಘಸೇನಾ, ಜಿಲ್ಲಾಧ್ಯಕ್ಷ ಸುಭಾಷ್ ಮಾಂಡ್ರಳ್ಳಿ, ತಾಲ್ಲೂಕು ಅಧ್ಯಕ್ಷ ಸೋಮಣ್ಣ, ತಾಲ್ಲೂಕು ಸಂಚಾಲಕರಾದ ನಂಜುಂಡಸ್ವಾಮಿ, ಚಂದ್ರ, ಜಿಲ್ಲಾ ಸಂಚಾಲಕ ದೊರೆಸ್ವಾಮಿ, ಮಹೇಶ್ ಗೌಡ, ಡಿ.ನಿರ್ಮಲ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.