ಚಾಮರಾಜನಗರ: ಕೋವಿಡ್–19 ಕಾರಣದಿಂದ ಸಂಕಷ್ಟಕ್ಕೆ ಸಿಲುಕಿರುವಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಒತ್ತಾಯಿಸಿಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
‘ಎಲ್ಲ ರೀತಿಯ ಕೆಲಸ ಮಾಡುವ ಅತಿಥಿ ಉಪನ್ಯಾಸಕರಿಗೆ 10 ತಿಂಗಳ ವೇತನ ಮಾತ್ರ ನೀಡಲಾಗುತ್ತಿದೆ. ಕೋವಿಡ್–19 ಲಾಕ್ಡೌನ್ ಅವಧಿಯ ವೇತನವನ್ನು ನೀಡುತ್ತಿಲ್ಲ. ಲಾಕ್ಡೌನ್ ಅವಧಿಯ ಸಂಕಷ್ಟವನ್ನು ಎದುರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.ಉದ್ಯೋಗ ಭದ್ರತೆ, ಭವಿಷ್ಯ ನಿಧಿ, ವೈದ್ಯಕೀಯ ಸೌಲಭ್ಯವಿಲ್ಲದೆ ಪರದಾಡುತ್ತಿದ್ದಾರೆ’ ಎಂದು ಪ್ರತಿಭಟನನಿರತರು ಆರೋಪಿಸಿದರು.
‘ಮುಖ್ಯಮಂತ್ರಿ ಅವರು ಅತಿಥಿ ಉಪನ್ಯಾಸಕರ ನೆರವಿಗೆ ಧಾವಿಸಿ ಲಾಕ್ಡೌನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಘೋಷಿಸಿ ವೇತನ ನೀಡಬೇಕು’ ಎಂದು ಒತ್ತಾಯಿಸಿದರು.
ಇದರ ಜೊತೆಗೆ, ಹರಿಯಾಣ ಅಥವಾ ಪಶ್ಚಿಮ ಬಂಗಾಳ ಮಾದರಿಯಲ್ಲಿ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಘೋಷಿಸಬೇಕು.2020ನೇ ಸಾಲಿನ ಅನಗತ್ಯ ನಿಯೋಜನೆಯನ್ನು ರದ್ದುಪಡಿಸಬೇಕು. ವೈದ್ಯಕೀಯ ಚಿಕಿತ್ಸೆಗೆ ಹಣವಿಲ್ಲದೆ ಆಸ್ಪತ್ರೆಯಲ್ಲಿ ನರಳುತ್ತಿರುವ ಅತಿಥಿ ಉಪನ್ಯಾಸಕರ ನೆರವಿಗೆ ಧಾವಿಸಬೇಕು.ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ ಕನಿಷ್ಠ ₹10 ಲಕ್ಷ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.
‘ಜುಲೈ 7ರಿಂದ ಪ್ರತಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದೇವೆ. ನಮ್ಮ ಬೇಡಿಕೆ ಈಡೇರುವವರೆಗೂ ಪ್ರತಿ ಮಂಗಳವಾರ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದು ಸಂಘದ ಕಾರ್ಯದರ್ಶಿ ಯರಗನಹಳ್ಳಿ ಗುರುರಾಜು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
ಸಂಘದ ಉಪಾಧ್ಯಕ್ಷ ಗಂಗಾಧರ,ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮುರುಗೇಶ್, ಸಲಹೆಗಾರ ಎಚ್.ಎಂ.ನಾಗೇಂದ್ರ, ಜಿಲ್ಲಾ ಸಂಯೋಜಕರಾದ ಎ. ಪ್ರದೀಪ್ ಕುಮಾರ್, ಚಿಕ್ಕ ಸಿದ್ದಯ್ಯ, ಸಿದ್ದರಾಜೇಗೌಡ, ರೋಹಿತ್, ದೊಡ್ಡಮ್ಮ, ಮಾಗೇಶ್ ಸೇರಿದಂತೆ ಜಿಲ್ಲೆಯ ಒಂಬತ್ತು ಸರ್ಕಾರಿ ಪದವಿ ಕಾಲೇಜುಗಳ 40 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.