ADVERTISEMENT

ಮಂಡ್ಯ ಕುರುಬರ ಸಂಘದ ಹಾಸ್ಟೆಲ್‌ಗೆ ಹಾನಿ:ಆಕ್ರೋಶ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2024, 13:53 IST
Last Updated 3 ಫೆಬ್ರುವರಿ 2024, 13:53 IST
ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಕುರುವರ ಸಂಘದ ಆಶ್ರಯದಲ್ಲಿ ಸಮುದಾಯದವರು ಶನಿವಾರ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು
ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಕುರುವರ ಸಂಘದ ಆಶ್ರಯದಲ್ಲಿ ಸಮುದಾಯದವರು ಶನಿವಾರ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು   

ಚಾಮರಾಜನಗರ: ಮಂಡ್ಯ ಜಿಲ್ಲಾ ಕುರುಬರ ಸಂಘದ ವಿದ್ಯಾರ್ಥಿನಿಲಯದ ಮೇಲೆ ದಾಳಿ,  ಸಂಗೊಳ್ಳಿರಾಯಣ್ಣ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾವಚಿತ್ರಯುಳ್ಳ ಪ್ಲೆಕ್ಸ್‌ಗೆ ಹಾನಿ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಕುರುಬರ ಸಂಘದ ಆಶ್ರಯದಲ್ಲಿ ಸಮುದಾಯದವರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.  

ವಿವಿಧ ಕುರುಬರ ಸಂಘಗಳು, ಸಂಗೊಳ್ಳಿರಾಯಣ್ಣ ಯವ ವೇದಿಕೆ, ಸಿದ್ದರಾಮಯ್ಯ ಅಭಿಮಾನಿ ಬಳಗ, ಜಿಲ್ಲಾ ಅಹಿಂದ ಸಂಘಟನೆಗಳ ಪ್ರತಿನಿಧಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸೇರಿದ ಪ್ರತಿಭಟನಕಾರರು, ಭುವನೇಶ್ವರಿ ವೃತ್ತದವರೆಗೂ ಮೆರವಣಿಗೆ ನಡೆಸಿ ಅಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿದರು. ನಂತರ ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನದವರೆಗೂ ತೆರಳಿ, ಧರಣಿ ಕುಳಿತರು.

ADVERTISEMENT

ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ನಂಜೇಗೌಡ ಮಾತನಾಡಿ, ‘ಜ.29ರಂದು ಮಂಡ್ಯ ಜಿಲ್ಲಾ ಕುರುಬರ ಸಂಘದ ವಿದ್ಯಾರ್ಥಿನಿಲಯಕ್ಕೆ ಕಿಡಿಗೇಡಿಗಳು ಅತಿಕ್ರಮವಾಗಿ ಪ್ರವೇಶಿಸಿ ಕಿಟಕಿ ಬಾಗಿಲುಗಳ ಗಾಜನ್ನು ಪುಡಿ ಮಾಡಿದ್ದಾರೆ. ಸಂಗೊಳ್ಳಿರಾಯಣ್ಣ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾವಚಿತ್ರಯುಳ್ಳ ಪ್ಲೆಕ್ಸ್‌ಗಳನ್ನು ಹರಿದು ಹಾಕಿದ್ದಾರೆ’ ಎಂದು ದೂರಿದರು. 

‘ಕೆರಗೋಡು ಗ್ರಾಮದಲ್ಲಿ ಧ್ವಜ ಸ್ತಂಭದ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕೆಲವು ಕಿಡಿಗೇಡಿ ಪ್ರತಿಭಟನಕಾರರು ಈ ಕೃತ್ಯ ಎಸಗಿ ವಿಕೃತಿ ಮೆರೆದಿದ್ದಾರೆ. ಯಾರದೋ ಕುಮ್ಮಕ್ಕಿನಿಂದ ಅವರು ಈ ರೀತಿ ಮಾಡಿದ್ದಾರೆ’ ಎಂದು ಆರೋಪಿಸಿದರು. 

‘ಸಹೋದರರಂತೆ ಜೀವನ ಸಾಗಿಸುತ್ತಿದ್ದ ಮಂಡ್ಯ ನಾಗರಿಕರ ಬದುಕಿನಲ್ಲಿ ಕೋಮುದಳ್ಳುರಿಯ ವಿಷಬೀಜ ಬಿತ್ತಿ ಜಾತಿ ಸಂಘರ್ಷಕ್ಕೆ ದಾರಿ ಮಾಡುವ ರೀತಿಯಲ್ಲಿ ವರ್ತಿಸಿದ್ದಾರೆ. ಈ ಘಟನೆಯು ರಾಜ್ಯದಾದ್ಯಂತ ಹಿಂದುಳಿದ ವರ್ಗದ ಕುರುಬ ಸಮುದಾಯಕ್ಕೆ ಅತ್ಯಂತ ನೋವು ಉಂಟಾಗಿದೆ. ಪೊಲೀಸರು ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು’ ಎಂದು ನಂಜೇಗೌಡ ಆಗ್ರಹಿಸಿದರು. 

ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿದರು. 

ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಶಿವಲಿಂಗೇಗೌಡ, ಉಪಾಧ್ಯಕ್ಷರಾದ ನಟರಾಜು ಬಸಪ್ಪಪಾಳ್ಯ, ಪಾಪಣ್ಣೇಗೌಡ, ಚಾಮರಾಜನಗರ ತಾಲ್ಲೂಕು ಸಂಘದ ಅಧ್ಯಕ್ಷ ಆರ್.ಉಮೇಶ್ ಎಸ್‌ಪಿಕೆ, ಮಾಜಿ ಅಧ್ಯಕ್ಷ ಜನ್ನೂರು ಮಹದೇವು, ಗೌರವ ಅಧ್ಯಕ್ಷ ರಾಜಶೇಖರ್, ಉಪಾಧ್ಯಕ್ಷ ಮಹದೇವಸ್ವಾಮಿ, ಕಾರ್ಯದರ್ಶಿ ಕೆ.ಪಿ.ನಾಗರಾಜು, ಮಾಜಿ ಉಪಾಧ್ಯಕ್ಷ ಮಾದಾಪುರ ರವಿಕುಮಾರ್, ಎಪಿಎಂಸಿ ನಿರ್ದೇಶಕ ಗುರುಸ್ವಾಮಿ, ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಜಿಲ್ಲಾಧ್ಯಕ್ಷ ಬೆಳ್ಳೇಗೌಡ, ಗುಂಡ್ಲುಪೇಟೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಕುರುಬರ ಸೊತ್ತನಹುಂಡಿ ಸೋಮಣ್ಣ, ಕುದೇರುಲಿಂಗಣ್ಣ, ಕೊಳ್ಳೇಗಾಲ ತಾಲ್ಲೂಕು ಸಂಘದ ಅಧ್ಯಕ್ಷ ರಾಚೇಗೌಡ, ಯಳಂದೂರು ತಾಲ್ಲೂಕು ಕೊಂಡೇಗೌಡ, ಪ್ರದೇಶ ಕುರುಬರ ಸಂಘದ ನಿರ್ದೇಶಕ ಹನೂರು ಪುಟ್ಟಸ್ವಾಮಿ ಇತರರು ಇದ್ದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.