ಚಾಮರಾಜನಗರ:ನಗರದ ನ್ಯಾಯಾಲಯದ ಎದುರಿನ ರಸ್ತೆಯ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಜಿಲ್ಲಾ ವಕೀಲರ ಸಂಘದ ಅಶ್ರಯದಲ್ಲಿ ನಗರದ ವಕೀಲರು ರಾಚಯ್ಯ ಜೋಡಿ ರಸ್ತೆಯ ಡಿವೈಎಸ್ಪಿ ಕಚೇರಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ರಾಚಯ್ಯ ಜೋಡಿ ರಸ್ತೆಯಲ್ಲಿ ಮಾನವ ಸರಪಣಿ ನಿರ್ಮಿಸಿ ರಸ್ತೆ ತಡೆದ ವಕೀಲರು, ನಗರಸಭೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ರಸ್ತೆ ತಡೆಯಿಂದಾಗಿ ವಾಹನಗಳ ಸಂಚಾರಕ್ಕೆ ಅಡಚಣೆಯಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಅವರು, ‘ನ್ಯಾಯಾಲಯ ರಸ್ತೆ ಇನ್ನೂ ಅಭಿವೃದ್ಧಿಯಾಗಿಲ್ಲ. ಜಲ್ಲಿ ಹಾಕಿ ಬಿಡಲಾಗಿದೆ. ಹಳ್ಳಕೊಳ್ಳಗಳಿಂದ ಕೂಡಿರುವ ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಹಲವರು ಸ್ಕೂಟರ್, ಬೈಕ್ನಿಂದ ಬಿದ್ದು ಗಾಯಗೊಂಡಿದ್ದಾರೆ’ ಎಂದು ದೂರಿದರು.
‘ರಸ್ತೆ ನಿರ್ಮಾಣದ ಹೊಣೆ ಹೊತ್ತವರು ಕಾಮಗಾರಿ ವಿಳಂಬ ಮಾಡುತ್ತಿದ್ದಾರೆ. ತಕ್ಷಣವೇ ಕಾಮಗಾರಿ ಆರಂಭಿಸಿ, ಶೀಘ್ರವಾಗಿ ಕೊನೆಗೊಳಿಸಬೇಕು. ಇಲ್ಲದಿದ್ದರೆ ಖಾಸಗಿ ದೂರು ಸಲ್ಲಿಸುವುದರ ಜೊತೆಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ. ಜೊತೆಗೆ ತೀವ್ರ ಹೋರಾಟವನ್ನೂ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.
ಅಧಿಕಾರಿಗಳ ಭರವಸೆ: ಪ್ರತಿಭಟನಾ ಸ್ಥಳಕ್ಕೆ ಬಂದ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರವಿಕುಮಾರ್ ಅವರು, ‘ಕೆಲಸ ವಿಳಂಬ ಮಾಡುತ್ತಿರುವುದಕ್ಕೆ ಈಗಾಗಲೇ ಗುತ್ತಿಗೆದಾರರಿಗೆ ನೋಟಿಸ್ ನೀಎಲಾಗಿದೆ. ಸೋಮವಾರದ ಒಳಗೆ ಕಾಮಗಾರಿ ಆರಂಭಿಸದಿದ್ದರೆ ಟೆಂಡರ್ ರದ್ದು ಪಡಿಸಿ, ಸ್ಥಳೀಯ ಗುತ್ತಿಗೆದಾರರಿ ಕೊಟ್ಟು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು.25 ದಿನದೊಳಗೆ ಪೂರ್ಣಗೊಳಿಸಲಾಗುವುದು’ ಎಂದು ಭರವಸೆ ನೀಡಿದರು. ಬಳಿಕ ವಕೀಲರು ಪ್ರತಿಭಟನೆ ಅಂತ್ಯಗೊಳಿಸಿದರು.
ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜು ಎಸ್.ಹರವೆ, ಉಪಾಧ್ಯಕ್ಷ ಶಿವರಾಮು, ಜಂಟಿ ಕಾರ್ಯದರ್ಶಿ ಮಂಜು, ವಕೀಲರಾದ ಪುಟ್ಟರಾಜು, ಚಿನ್ನಸ್ವಾಮಿ, ನಾಗರಾಜೇಂದ್ರ, ಶಿವಸ್ವಾಮಿ, ಪುಟ್ಟಸ್ವಾಮಿ, ನಂಜುಂಡಸ್ವಾಮಿ, ಪುಟ್ಟರಾಚಯ್ಯ, ವಿದ್ಯಾಲತಾ, ಸವಿತಾ, ಸಂತೋಷ್, ಪ್ರಸನ್ನಕುಮಾರ್, ಮಹೇಶ್, ರವಿಕುಮಾರ್, ಪುಟ್ಟರಾಜು, ರೂಪಶ್ರೀ ಮತ್ತಿತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.