ಚಾಮರಾಜನಗರ: ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವುದರಿಂದ ಅಂತರರಾಜ್ಯ ಗಡಿ ಬಂದ್ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.
ಚಾಮರಾಜೇಶ್ವರ ಉದ್ಯಾನದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರು ಮಾತನಾಡಿ, ‘ಇಡೀ ದೇಶ ಕೋವಿಡ್ನಿಂದ ತತ್ತರಿಸಿ ಹೋಗಿದೆ. ಮೂರನೇ ಅಲೆ ಬರಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಪಕ್ಕದ ರಾಜ್ಯ ಕೇರಳದಲ್ಲಿ ಝಿಂಕಾ ವೈರಸ್ ಪತ್ತೆಯಾಗಿದೆ. ಅದಲ್ಲದೇ, ಪ್ರತಿನಿತ್ಯ 15 ಸಾವಿರ ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ. ರಾಜ್ಯ ಹಾಗೂ ಜಿಲ್ಲೆಯಲ್ಲಿ ಈಗ ಕೋವಿಡ್ ಪ್ರಕರಣಗಳು ಕಡಿಮೆಯಾಗಿವೆ. ಇಂತಹ ಸಂದರ್ಭದಲ್ಲಿ ಕೇರಳದಿಂದ ಯಾವುದೇ ವಾಹನಗಳು, ಜನರನ್ನು ಜಿಲ್ಲೆ ಪ್ರವೇಶಿಸಲು ಬಿಡಬಾರದು’ ಎಂದು ಆಗ್ರಹಿಸಿದರು.
ಕೇರಳದಿಂದ ವಾಹನ, ಜನರು ಬರಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈಗಿನ ಪರಿಸ್ಥಿತಿಯಲ್ಲಿ ಕೇರಳದಿಂದ ಜನರು ಬಂದರೆ ರಾಜ್ಯಕ್ಕೆ ತೊಂದರೆಯಾಗಲಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಅಂತರ ರಾಜ್ಯ ಗಡಿಗಳಾದ ಕೇರಳ ಗಡಿ, ತಮಿಳುನಾಡು ಗಡಿ ಹಾಗೂ ಮಹಾರಾಷ್ಟ ಗಡಿಗಳನ್ನು ಬಂದ್ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಸಹ ಕಾರ್ಯದರ್ಶಿ ಪಿ.ಎಚ್.ರಾಜು, ನಿಜಧ್ವನಿ ಗೋವಿಂದರಾಜು, ಸುರೇಶ್, ಚಂದ್ರು, ಶಿವಶಂಕರನಾಯಕ, ತಾಂಡವಮೂರ್ತಿ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.