ಹನೂರು: ತಾಲ್ಲೂಕಿನ ಎಲ್ಲೆಮಾಳ ಹಾಗೂ ಮಲ್ಲಯ್ಯನಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳ ಜನರು ಸೋಮವಾರ ಪಟ್ಟಣದ ಅರಣ್ಯ ಇಲಾಖೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಕಾಡಂಚಿನ ಗ್ರಾಮಗಳಲ್ಲಿ ಪ್ರಾಣಿಗಳ ಸಮಸ್ಯೆ ಮಿತಿ ಮೀರಿದ್ದು ರೈತರು ಹೈರಾಣಾಗಿದ್ದಾರೆ. ಹಾಕಿದ ಫಸಲೆಲ್ಲಾ ಕಾಡು ಪ್ರಾಣಿಗಳ ಪಾಲಾಗುತ್ತಿದೆ. ಇದರಿಂದಾಗಿ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಈ ಬಗ್ಗೆ ರೈತರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಮಲೆಮಹದೇಶ್ವರ ಹಾಗೂ ಕಾವೇರಿ ವನ್ಯಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದಿಂದ ತಾಲೂಕಿನ ಕಾಡಂಚಿನ ಜಮೀನುಗಳಿಗೆ ನುಗ್ಗಿ, ನೀರಾವರಿ ಪರಿಕರ ಸೇರಿ ಮುಸುಕಿನ ಜೋಳ ಮತ್ತು ಬಾಳೆ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿ ಮಾಡಿ ನಷ್ಟ ಉಂಟುಮಾಡಿವೆ. ಈ ಬಗ್ಗೆ ರೈತರು ಪರಿಹಾರ ಕೇಳಿದರೆ ಅಲ್ಪ ಪರಿಹಾರ ಕೊಟ್ಟು ಕೈ ತೊಳೆದುಕೊಳ್ಳುತ್ತಾರೆ. ಲಕ್ಷಾಂತರ ಬೆಳೆಗೆ ₹5 ಸಾವಿರ, ₹10 ಸಾವಿರ ಪರಿಹಾರ ಕೊಟ್ಟರೆ ರೈತರು ಅಭಿವೃದ್ಧಿಯಾಗುವುದಾದರೂ ಹೇಗೆ’ ಎಂದರು.
‘ಕೂಡಲೇ ಅರಣ್ಯ ಇಲಾಖೆ ಸ್ಥಳೀಯ ಅಧಿಕಾರಿಗಳು ವನ್ಯಪ್ರಾಣಿಗಳ ಹಾವಳಿ ತಡೆಯದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಏಕೀಕರಣದ ಹಾದಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸೋಮಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ್, ಕಾರ್ಯದರ್ಶಿ ಪವನ್, ತಾಲೂಕುಅದ್ಯಕ್ಷ ಚಿಕ್ಕರಾಜು,ತಾಲೂಕು ಕಾರ್ಯದರ್ಶಿ ಪ್ರಭು, ಉಪಾದ್ಯಕ್ಷ ಮಲ್ಲಿಕಾರ್ಜುನಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.