ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಹಾಸ್ಟೆಲ್ ಮತ್ತು ವಸತಿಶಾಲೆಗಳ ಹೊರಗುತ್ತಿಗೆ ಕಾರ್ಮಿಕರಿಗೆ ಲಾಕ್ಡೌನ್ ಅವಧಿಯ ವೇತನ ಮತ್ತು ಜೂನ್ ತಿಂಗಳಿನಿಂದ ವೇತನ ಪಾವತಿಸಿ ಕೆಲಸ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಡಳಿತ ಭವನದ ಎದುರು ಸಮಾವೇಶಗೊಂಡ ಪ್ರತಿಭಟನಕಾರರು, ಅಲ್ಲಿಯೇ ಧರಣಿ ಕುಳಿತು ನ್ಯಾಯಕ್ಕಾಗಿ ಆಗ್ರಹಿಸಿದರು. ನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಹಾಸ್ಟೆಲ್ ಮತ್ತು ವಸತಿಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಮಿಕರು ಹಲವು ವರ್ಷಗಳಿಂದಲೂ ಕನಿಷ್ಠ ಕೂಲಿ ಪಡೆದು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಆದರೆ, ಲಾಕ್ಡೌನ್ ಆರಂಭವಾದಾಗಿನಿಂದ ಹೊರಗುತ್ತಿಗೆ ಕಾರ್ಮಿಕರು ಕೆಲಸವಿಲ್ಲದೇ, ವೇತನವೂ ಇಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಕುಟುಂಬಗಳು ಬೀದಿಗೆ ಬರುವಂತಾಗಿದೆ. ಲಾಕ್ಡೌನ್ ಅವಧಿಯಲ್ಲಿ ಕಾರ್ಮಿಕರಿಗೆ ವೇತನ ನೀಡಬೇಕು ಎಂಬ ಆದೇಶ ಇದ್ದರೂ ಜಿಲ್ಲಾಮಟ್ಟದಲ್ಲಿ ಇಲಾಖೆಯ ಅಧಿಕಾರಿಗಳು ಇನ್ನೂ ವೇತನ ಪಾವತಿಸಿಲ್ಲ’ ಎಂದು ಪ್ರತಿಭಟನನಿರತರು ಆಕ್ರೋಶ ವ್ಯಕ್ತಪಡಿಸಿದರು.
‘ಲಾಕ್ಡೌನ್ ಅವಧಿ ವೇತನವನ್ನು ಎಲ್ಲ ಹೊರಗುತ್ತಿಗೆ ಕಾರ್ಮಿಕರಿಗೆ ಈ ಕೂಡಲೇ ಪಾವತಿಸಬೇಕು. ಜೂನ್ ತಿಂಗಳಿನಿಂದ ವೇತನ ಪಾವತಿ ಮಾಡಿ ಕಾರ್ಮಿಕರಿಗೆ ಕೆಲಸವನ್ನು ನೀಡಬೇಕು. ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಲು ಇಎಸ್ಐ ಮತ್ತು ಇಪಿಎಫ್ ಅನ್ನು ಪಾವತಿ ಮಾಡಿರುವ ದಾಖಲೆಗಳನ್ನು ಕಾರ್ಮಿಕರಿಗೆ ಒದಗಿಸಬೇಕು ಇಲ್ಲವೇ ಇಲಾಖೆಯಿಂದಲೇ ಸೌಲಭ್ಯಗಳನ್ನು ನೀಡಬೇಕು. ಮತ್ತು ನೇರ ನೇಮಕಾತಿಯಿಂದ ಕೆಲಸ ಕಳೆದುಕೊಂಡಿರುವ ಹೆಚ್ಚುವರಿ ಹೊರಗುತ್ತಿಗೆ ಕಾರ್ಮಿಕರನ್ನು ಖಾಲಿ ಇರುವ/ಖಾಲಿ ಆಗುವ ಸ್ಥಳಗಳಿಗೆ ಈ ಕಾರ್ಮಿಕರನ್ನು ಆದ್ಯತೆ ಮೇರೆಗೆ ಮರುನೇಮಕ ಮಾಡಿಕೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.
ರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿಯ ಸಂಚಾಲಕ ಮಲ್ಲಿಕಾರ್ಜುನ, ಪದಾಧಿಕಾರಿಗಳಾದ ವಿಶ್ವನಾಥ ಜೆ., ಕೃಷ್ಣಮೂರ್ತಿ, ಪ್ರಕಾಶ್ ಎಂ, ನಾಗೇಶ್, ಮಲ್ಲಾಜಮ್ಮ, ರೇಣುಕಾ, ಸವಿತಾ, ಶಿವಮೂರ್ತಿ, ಪುಟ್ಟರಾಜು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.