ADVERTISEMENT

ಪಿಯು ಕಾಲೇಜು: ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2021, 12:36 IST
Last Updated 21 ಮಾರ್ಚ್ 2021, 12:36 IST

ಚಾಮರಾಜನಗರ: ದ್ವಿತೀಯ‍ಪಿಯುಸಿ ವಿದ್ಯಾರ್ಥಿಗಳಿಗೆ ಎದುರಾಗಿದ್ದ ಆತಂಕವನ್ನು ಕೊನೆಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ದೂರ ಮಾಡಿದೆ.

ಬೋಧಕರ ಕೊರತೆ ಇರುವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಅದರಂತೆ ಜಿಲ್ಲೆಯಲ್ಲಿ 30 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.

ಶೈಕ್ಷಣಿಕ ವರ್ಷ ಮುಗಿಯಲು ಇನ್ನು ಎರಡು ತಿಂಗಳಷ್ಟೇ ಬಾಕಿ ಇದ್ದು, ಬೋಧಕರ ಕೊರತೆಯಿಂದ ಪಠ್ಯ ಪೂರ್ಣಗೊಳ್ಳದೆ ಫಲಿತಾಂಶ ಕುಸಿಯುವ ಆತಂಕ ವ್ಯಕ್ತವಾಗಿತ್ತು.

ADVERTISEMENT

‘ಜಿಲ್ಲೆಯ ಮಟ್ಟಿಗೆ 30 ಉಪನ್ಯಾಸರನ್ನು ಮೆರಿಟ್‌ ಆಧಾರದಲ್ಲಿ ನೇಮಿಸಿಕೊಳ್ಳಲು ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಆಯಾ ಕಾಲೇಜುಗಳ ಪ್ರಾಂಶುಪಾಲರು ನೇಮಕ ಮಾಡಿಕೊಳ್ಳಲಿದ್ದಾರೆ. ಜುಲೈ 15ರವರೆಗಿನ ಅವಧಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇದರಿಂದಾಗಿ ಬೋಧಕರ ಕೊರತೆಯ ಸಮಸ್ಯೆ ನೀಗಲಿದೆ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಿ.ಎಸ್‌.ಕೃಷ್ಣಮೂರ್ತಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.