ADVERTISEMENT

ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ 3 ದಿನ ಗಡುವು

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2020, 9:52 IST
Last Updated 29 ಫೆಬ್ರುವರಿ 2020, 9:52 IST
‘ಪ್ರಜಾವಾಣಿ’ಯ ಫೆ.24ರ ಸಂಚಿಕೆಯಲ್ಲಿ ಪ್ರಕಟವಾದ ವಿಶೇಷ ವರದಿ
‘ಪ್ರಜಾವಾಣಿ’ಯ ಫೆ.24ರ ಸಂಚಿಕೆಯಲ್ಲಿ ಪ್ರಕಟವಾದ ವಿಶೇಷ ವರದಿ   

ಚಾಮರಾಜನಗರ: ನಗರಸಭೆ ವ್ಯಾಪ್ತಿಯ ಪ್ರಮುಖ ರಸ್ತೆಗಳ ಚರಂಡಿಗಳ ಸ್ಲ್ಯಾಬ್‌ಗಳು ಹಾಗೂ ಪಾದಚಾರಿ ಮಾರ್ಗಗಳ ಮೇಲೆ ವ್ಯಾಪಾರ ಮಾಡುತ್ತಿರುವವರು ವ್ಯಾಪಾರ ಸ್ಥಗಿತಗೊಳಿಸಿ, ಸಲಕರಣೆಗಳನ್ನು ತೆರವುಗೊಳಿಸುವಂತೆ ನಗರಸಭೆ ಸೂಚಿಸಿದೆ. ಇದಕ್ಕೆ ಮೂರು ದಿನಗಳ ಗಡುವು ನೀಡಿದೆ.

ನಗರದಲ್ಲಿ ಪಾದಚಾರಿ ಮಾರ್ಗಗಳು ಒತ್ತುವರಿಯಾಗಿರುವುದರಿಂದ ಜನರ ಓಡಾಟಕ್ಕೆ ತೊಂದರೆಯಾಗುತ್ತಿರುವುದರ ಬಗ್ಗೆ ಇದೇ 24ರ ‘ಪ್ರಜಾವಾಣಿ’ ಸಂಚಿಕೆಯ ‘ನಮ್ಮ ನಗರ ನಮ್ಮ ಧ್ವನಿ’ ಅಂಕಣದಲ್ಲಿ ಗಮನ ಸೆಳೆಯಲಾಗಿತ್ತು.

ಜೊತೆಗೆ ಸ್ವಚ್ಛತೆ ಬಗ್ಗೆ ಇತ್ತೀಚೆಗೆ ಸಭೆ ನಡೆಸಿದ್ದ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರು, ಪಾದಚಾರಿ ಮಾರ್ಗಗಳ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳುವಂತೆ ನಗರಸಭೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.

ADVERTISEMENT

ಶುಕ್ರವಾರ ಪ್ರಕಟಣೆ ನೀಡಿರುವ ನಗರಸಭೆ ಆಯುಕ್ತ ಎಂ.ರಾಜಣ್ಣ ಅವರು, ‘ಪಾದಚಾರಿ ಮಾರ್ಗಗಳ ಮೇಲೆವ್ಯಾಪಾರ ಮಾಡುವ ಮಾರಾಟಗಾರರು ಮೂರು ದಿನಗಳ ಒಳಗಾಗಿ ವ್ಯಾಪಾರ ತೆರವುಗೊಳಿಸಬೇಕು. ತಪ್ಪಿದಲ್ಲಿ ನಗರಸಭೆ ಮತ್ತು ಪೊಲೀಸ್ ಇಲಾಖೆ ವತಿಯಿಂದ ತೆರವುಗೊಳಿಸಿ, ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಇದಕ್ಕೆ ನಗರಸಭೆಯಿಂದ ಯಾವುದೇ ರೀತಿಯ ಪರಿಹಾರವನ್ನು ನೀಡಲಾಗುವುದಿಲ್ಲ’ ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.