ADVERTISEMENT

ಕ್ವಾರಿ ಕುಸಿತ: ಗುತ್ತಿಗೆದಾರ ಬಂಧನ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2022, 16:25 IST
Last Updated 11 ಮಾರ್ಚ್ 2022, 16:25 IST
ಮಹೇಂದ್ರಪ್ಪ
ಮಹೇಂದ್ರಪ್ಪ   

ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಬಿಳಿ ಕಲ್ಲು ಕ್ವಾರಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ವಾರಿ ‌ಗುತ್ತಿಗೆ ಪಡೆದಿದ್ದ ಮಹೇಂದ್ರಪ್ಪ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಘಟನೆ ನಡೆದು ಒಂದು ವಾರದ ನಂತರ ಈ ಬೆಳವಣಿಗೆ ನಡೆದಿದೆ. ಮಹೇಂದ್ರಪ್ಪ ಅವರು ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದರು. ಜಿಲ್ಲಾ ಕೇಂದ್ರ ಚಾಮರಾಜನಗರದ ಹೊರ ವಲಯದಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಮಾರ್ಚ್‌ 4ರಂದು ಸಂಭವಿಸಿದ್ದ ದುರಂತಕ್ಕೆ ಸಂಬಂಧಿಸಿದಂತೆ ಗುಂಡ್ಲುಪೇಟೆ ಠಾಣೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಕ್ವಾರಿಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ನವೀದ್‌ ಎಂಬುವವರನ್ನು ಪೊಲೀಸರು ಘಟನೆ ನಡೆದ ದಿನವೇ ಬಂಧಿಸಿದ್ದರು. ಮೊದಲ ಆರೋಪಿ ಮಹೇಂದ್ರಪ್ಪ ಹಾಗೂ ಎರಡನೇ ಆರೋಪಿ, ಕ್ವಾರಿಯನ್ನು ಉಪಗುತ್ತಿಗೆ ಪಡೆದಿದ್ದ ಹಕೀಂ ಅವರು ತಲೆಮರೆಸಿಕೊಂಡಿದ್ದರು.

ADVERTISEMENT

ಚಾಮರಾಜನಗರ ಗ್ರಾಮಾಂತರ ಠಾಣೆಯ ಸಬ್‌ಇನ್‌ಸ್ಪೆಕ್ಟರ್‌ ರಾಜೇಂದ್ರ ನೇತೃತ್ವದ ತನಿಖಾ ತಂಡವು ಕಾರ್ಯಾಚರಣೆ ನಡೆಸಿ ಮಹೇಂದ್ರಪ್ಪ ಅವರನ್ನು ಬಂಧಿಸಿದೆ.

‘ಘಟನೆಗೆ ಸಂಬಂಧಿಸಿದಂತೆ ಪ್ರಮುಖಆರೋಪಿಯನ್ನು ಬಂಧಿಸಿದ್ದೇವೆ. ಇನ್ನೊಬ್ಬರ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ‘ ಎಂದುಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್‌ ಅವರು ‘ಪ್ರಜಾವಾಣಿ‘ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.