ADVERTISEMENT

ಚಾಮರಾಜನಗರ: ವಿವಿಧೆಡೆ ಮಳೆ, ಮುಸುಕಿದ ಮೋಡ

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 16:42 IST
Last Updated 24 ಜನವರಿ 2023, 16:42 IST
ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ ಸುರಿದ ಮಳೆಗೆ ಜನ, ಜಾನುವಾರುಗಳು ಕಲ್ಲಿನ ಮಂಟಪದಲ್ಲಿ ಆಶ್ರಯ ಪಡೆದರು
ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ ಸುರಿದ ಮಳೆಗೆ ಜನ, ಜಾನುವಾರುಗಳು ಕಲ್ಲಿನ ಮಂಟಪದಲ್ಲಿ ಆಶ್ರಯ ಪಡೆದರು   

ಚಾಮರಾಜನಗರ/ಗುಂಡ್ಲುಪೇಟೆ/ಯಳಂದೂರು: ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ ಮಧ್ಯಾಹ್ನ ಹಾಗೂ ಸಂಜೆ ಮಳೆಯಾಗಿದೆ.

ಚಾಮರಾಜನಗರ, ಯಳಂದೂರು ಮತ್ತು ಗುಂಡ್ಲುಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಿದೆ.

ಜಿಲ್ಲೆಯಾದ್ಯಂತ ಮಂಗಳವಾರ ಮೋಡ ಮುಸುಕಿದ ವಾತಾವರಣ ಇತ್ತು. ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಚದುರಿದಂತೆ ಮಳೆಯಾಗಿದೆ. ನಿರಂತರವಾಗಿ ಮಳೆ ಸುರಿದಿಲ್ಲ. ಅಲ್ಲಲ್ಲಿ ಬಿಟ್ಟು ಬಿಟ್ಟು ಹನಿ ಬಿದ್ದಿದೆ.

ADVERTISEMENT

ಸಂಜೆ 5 ಗಂಟೆಯ ನಂತರ ಕಾಲು ಗಂಟೆಗೂ ಹೆಚ್ಚು ಕಾಲ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೆ ವರ್ಷಧಾರೆಯಾಗಿದೆ.

ಯಳಂದೂರು ಪಟ್ಟಣದ ಸುತ್ತಮುತ್ತ ಮಧ್ಯಾಹ್ನದ ವೇಳೆಗೆ ಅಲ್ಪ ಪ್ರಮಾಣದ ಮಳೆಯಾಗಿದೆ. ಕೆಸ್ತೂರು, ಅಂಬಳೆ ಸುತ್ತಮುತ್ತ ಮಧ್ಯಾಹ್ನ 12ಕ್ಕೆ ತುಂತುರು ಮಳೆ ಆಯಿತು. ಪಟ್ಟಣದಾದ್ದಂತ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಹನಿಯಿತು.

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಭಾಗಗಳಲ್ಲಿ ಮಂಗಳವಾರ ಸಂಜೆ ಇದ್ದಕ್ಕಿದ್ದಂತೆ ಇಪ್ಪತ್ತು ನಿಮಿಷಗಳ ಕಾಲ ಜೋರು ಮಳೆಯಾಗಿದೆ.

ಪಟ್ಟಣದಲ್ಲಿ ಸುರಿದ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಯಿತು. ಪಟ್ಟಣದ ಬಸ್ ನಿಲ್ದಾಣ, ಮಡಹಳ್ಳಿ ವೃತ್ತದಲ್ಲಿ ನೀರು ನಿಂತು ಸಂಚಾರ ಮಾಡುವವರಿಗೆ ತೊಂದರೆಯಾಯಿತು. ಪೋಲಿಸ್ ಠಾಣೆಯ ರಸ್ತೆಯಲ್ಲಿ ಮತ್ತು ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಇರುವ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯದಿರುವುದರಿಂದ ರಸ್ತೆಯಲ್ಲಿ ನೀರು ಹರಿದು ವಾಹನ ಸವಾರರು ಮತ್ತು ಸಾರ್ವಜನಿಕರು ಕಿರಿ ಕಿರಿ ಅನುಭವಿಸಿದರು.

ಬುಧವಾರವೂ ಇದೇ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮಳೆ ಬಂದಿರುವುದರಿಂದ ಬೆಳೆಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮೋಡ ಹಾಗೂ ಮಳೆ ಮಾವಿನ ಬೆಳೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಬೆಳೆಗಾರರು ಅಭಿಪ್ರಾಯ ಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.