ADVERTISEMENT

ಚಾಮರಾಜನಗರ: ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆ

​ಪ್ರಜಾವಾಣಿ ವಾರ್ತೆ
Published 13 ಮೇ 2022, 5:46 IST
Last Updated 13 ಮೇ 2022, 5:46 IST
ದೊಡ್ಡರಸನಕೊಳ
ದೊಡ್ಡರಸನಕೊಳ   

ಚಾಮರಾಜನಗರ: ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಇಡೀ ಜಿಟಿಮಳೆಯಾಗಿದ್ದು, ಶುಕ್ರವಾರ ಬೆಳಿಗ್ಗೆಯೂ ಮುಂದುವರಿದಿದೆ.

ಮಳೆ ಹಾಗೂ ಶೀತವಾತಾವರಣದಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಜಿಟಿ ಜಿಟಿ ಮಳೆಯಿಂದ ಜನರ ಓಡಾಟಕ್ಕೂ ತೊಂದರೆಯಾಗಿದೆ. ನಿರಂತರವಾಗಿ ಸುಳಿಯುತ್ತಿರುವ ಮಳೆಯಿಂದಾಗಿ ಕೃಷಿ ಚಟುವಟಿಕೆಗಳಿಗೂ ಹಿನ್ನಡೆಯಾಗಿದೆ.

ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕುಗಳಲ್ಲಿ ಉತ್ತಮ ಮಳೆ ಬಿದ್ದಿದೆ.

ADVERTISEMENT

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಂಕಿ ಅಂಶಗಳ ಪ್ರಕಾರ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ಬೆಳಿಗ್ಗೆ 7.30ರವರೆಗೆ 6.5 ಸೆಂ.ಮೀ ಮಳೆಯಾಗಿದೆ. ಚಾಮರಾಜನಗರ ತಾಲ್ಲೂಕಿನ ಹೊಂಗನೂರು, ಇರಸವಾಡಿ, ದೊಡ್ಡಮೋಳೆ ಸೇರಿದಂತೆ ಹಲವು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 6 ಸೆಂ.ಮೀಗೂ ಹೆಚ್ಚು ಮಳೆಯಾಗಿದೆ.

ದೊಡ್ಡರಸನಕೊಳ ಬಹುತೇಕ ಭರ್ತಿ: ಚಾಮರಾಜನಗರದ ಐತಿಹಾಸಿಕ ದೊಡ್ಡರಸನ ಕೊಳಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಬಹುತೇಕ ಭರ್ತಿಯಾಗಿದೆ.

ಚಾಮರಾಜೇಶ್ವರ ದೇವಾಲಯದ ನೂತನ ರಥ ನಿರ್ಮಾಣಗೊಂಡು ನಗರಕ್ಕೆ ಶುಕ್ರವಾರ ತಲುಪಿದ್ದು, ಅದ್ದೂರಿ ಸ್ವಾಗತಕ್ಕೆ ಮಳೆ ಅಡ್ಡಿಪಡಿಸಿದೆ.

ಒಡೆದ ಕಾಲುವೆ ಮನೆಗಳಿಗೆ ನುಗ್ಗಿದ ನೀರು: ಚಾಮರಾಜನಗರ ತಾಲ್ಲೂಕಿನ ಚಂದಕವಾಡಿ ಹೋಬಳಿಯ ಬಸಪ್ಪನ ಪಾಳ್ಯ ಗ್ರಾಮದಲ್ಲಿ ನಿರಂತರ ಮಳೆಗೆ ಕಾಲುವೆಯೊಂದು ಒಡೆದು 25ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.

'ಗ್ರಾಮದ ವ್ಯಾಪ್ತಿಯಲ್ಲಿ ನಾಲ್ಕು ಕೆರೆಗಳಿದ್ದು, ಹೆಂಗಳಿಕಟ್ಟೆಕೆರೆ ಕಾಲುವೆ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಒಡೆದಿದೆ. ಗ್ರಾಮದಲ್ಲಿನ 25ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಪಡಿತರ ಸೇರಿದಂತೆ ಅಗತ್ಯ ವಸ್ತುಗಳು ಹಾನಿಗೀಡಾಗಿವೆ' ಎಂದು ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ರೇವಣ್ಣ 'ಪ್ರಜಾವಾಣಿ'ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.