ADVERTISEMENT

ಟಿಕಾಯತ್‌ ವಿರುದ್ಧ ಎಫ್‌ಐಆರ್‌: ವಾಪಸ್ಸಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2021, 16:33 IST
Last Updated 31 ಮಾರ್ಚ್ 2021, 16:33 IST
ಸುದ್ದಿಗೋಷ್ಠಿಯಲ್ಲಿ ಹೊನ್ನೂರು ಬಸವಣ್ಣ ಅವರು ಮಾತನಾಡಿದರು
ಸುದ್ದಿಗೋಷ್ಠಿಯಲ್ಲಿ ಹೊನ್ನೂರು ಬಸವಣ್ಣ ಅವರು ಮಾತನಾಡಿದರು   

ಚಾಮರಾಜನಗರ: ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಹಾವೇರಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿರುವ ರೈತ ಸಂಘ, ತಕ್ಷಣವೇ ರಾಜ್ಯ ಸರ್ಕಾರ ಎಫ್‌ಐಆರ್‌ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹೊನ್ನೂರು ಬಸವಣ್ಣ ಅವರು, ‘ಗುಜರಾತ್‌ನಲ್ಲಿ ರೈತ ನಾಯಕ ಯದುವೀರ್‌ಸಿಂಗ್ ಅವರನ್ನೂ ಬಂಧಿಸಲಾಗಿದ್ದು ಕೂಡಲೇ ಅವರನ್ನು ಬಿಡುಗಡೆ ಮಾಡಿ ಅವರ ಮೇಲೆ ದಾಖಲಿಸಿರುವ ಪ್ರಕರಣವನ್ನೂ ವಾಪಸ್‌ ಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಹೋರಾಟ ಮಾಡಲಾಗುವುದು’ ಎಂದು ಹೇಳಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿವೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರು ಜೀವನ ನಡೆಸುವುದೇ ಕಷ್ಟಕರವಾಗಿದೆ. ದೆಹಲಿ ಹೋರಾಟ ಸಂಬಂಧ ಮುಂದಿನ ತಿಂಗಳ 9ರಂದು ಬೆಂಗಳೂರಿನಲ್ಲಿ ಎಲ್ಲ ಸಂಘಟನೆಗಳ ಮುಖಂಡರ ಜೊತೆ ಸಭೆ ನಡೆಯಲಿದೆ’ ಎಂದರು.

ADVERTISEMENT

‘ದೆಹಲಿಯಲ್ಲಿ ರೈತರು ಹೋರಾಟ ನಡೆಸುತ್ತಿರುವ ಸ್ಥಳದಲ್ಲಿ ಈಗಾಗಲೇ 25 ಮನೆಗಳನ್ನು ನಿರ್ಮಿಸಿದ್ದು, ಮುಂದಿನ ದಿನಗಳಲ್ಲಿ ಅದು 100ಕ್ಕೆ ಏರಿಕೆಯಾಗಲಿದೆ. ಸರ್ಕಾರಗಳು ಜಾತಿ ಬೀಜ ಬಿತ್ತುವುದನ್ನು ನಿಲ್ಲಿಸಬೇಕು. ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

ರಣಂಗೆ ಬೆಂಬಲ:ಸಂಘದ ತಾಲ್ಲೂಕು ಉಪಾಧ್ಯಕ್ಷ ಪೃಥ್ವಿ ಅವರು ಮಾತನಾಡಿ, ‘ಸಾಮಾಜಿಕ ಹೋರಾಟಗಾರ ಚೇತನ್ ಅಭಿನಯಿಸಿರುವ ರಣಂ ಚಿತ್ರ ಬಿಡುಗಡೆಯಾಗಿದ್ದು, ಈ ಚಿತ್ರದಲ್ಲಿ ರೈತ ಪರ ಧ್ವನಿ ಎತ್ತಿರುವ ವಿಚಾರಗಳಿವೆ. ಆದ್ದರಿಂದ ಪ್ರತಿಯೊಬ್ಬರು ಈ ಚಿತ್ರವನ್ನು ನೋಡುವ ಮೂಲಕ ರಣಂ ಚಿತ್ರ ಗೆಲುವಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.

ರೈತ ಮುಖಂಡರಾದ ಅಶೋಕ, ಮಾದಪ್ಪ, ಜಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.