ADVERTISEMENT

ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿದ್ದು ಕಾಂಗ್ರೆಸ್ ಸರ್ಕಾರವಷ್ಟೇ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2025, 5:36 IST
Last Updated 24 ಏಪ್ರಿಲ್ 2025, 5:36 IST
<div class="paragraphs"><p>ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧ್ಯಕ್ಷ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.</p></div>

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧ್ಯಕ್ಷ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

   

ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ): 'ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಪಡಿಸಿದ್ದು ಕಾಂಗ್ರೆಸ್ ಸರ್ಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ಬಿಜೆಪಿ, ಜೆಡಿಎಸ್ ಸರ್ಕಾರಗಳು ಏಕೆ ಮಾಡಲಿಲ್ಲ? ನಾವು ಸರ್ವ ಜನಾಂಗಕ್ಕೂ ಒಳಿತು ಬೇಡಿಕೊಳ್ಳುತ್ತೇವೆ' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಮಹದೇಶ್ವರ ಬೆಟ್ಟದಲ್ಲಿ ದೇವರ ದರ್ಶನದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ADVERTISEMENT

'ಹೊಸದಾಗಿ ಸವದತ್ತಿ ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದೇವೆ. ಈ ಹಿಂದೆ ಮಲೆ‌ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಆಗಿದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನೂ ಮಾಡಿದ್ದೇವೆ. ಮಹದೇಶ್ವರ ಸನ್ನಿಧಾನದ ಇತಿಹಾಸ ತೆಗೆದುಕೊಂಡರೆ ಈ ಹಿಂದೆ ಹೇಗಿತ್ತು ಈಗ ಹೇಗಿದೆ ಎನ್ನುವುದಕ್ಕೆ ಸಾಕ್ಷಿ ಕಣ್ಣ ಮುಂದಿದೆ. ಜನರು ದೇವಸ್ಥಾನಕ್ಕೆ ಬಂದಾಗ ಪ್ರಾರ್ಥನೆ ಮಾಡಲು ಪ್ರಶಾಂತವಾದ, ಉತ್ತಮವಾದ ವಾತಾವರಣ ನಿರ್ಮಾಣ ಮಾಡಿಕೊಡಬೇಕು ಎಂಬುದು ನಮ್ಮ ಆಶಯ' ಎಂದರು.

'ಮಹದೇಶ್ವರನ ದರ್ಶನ ಮಾಡಿ ಪೂಜೆ ಸಲ್ಲಿಸಬೇಕು ಎಂದೇ ಬುಧವಾರ ರಾತ್ರಿಯೇ ಬಂದು ಇಲ್ಲಿ ವಾಸ್ತವ್ಯ ಹೂಡಿದ್ದೆ. ಮಲೆ ಮಹದೇಶ್ವರ ಸ್ವಾಮಿ ವಿಶೇಷವಾದ ದೇವರು. ಬಡವರು, ಮಧ್ಯಮ ವರ್ಗ ಹಾಗೂ ಎಲ್ಲಾ ವರ್ಗಗಳ ಜನರು ಆರಾಧಿಸುವ ದೇವರು. ಬುಡಕಟ್ಟು ಜನರು ಸಹ ಆರಾಧಿಸುವ ಪದ್ಧತಿಯಿದೆ'‌ ಎಂದರು.

ಜನರ ನಿರೀಕ್ಷೆಗಳನ್ನು ಈಡೇರಿಸಲೆಂದೇ ಇಡೀ ಸರ್ಕಾರ ಜಿಲ್ಲೆಗೆ ಬಂದಿದೆ. ನಮ್ಮ ಊರಿನಿಂದ ಈ ಹಿಂದೆ ಬೆಟ್ಟಕ್ಕೆ ಬರಬೇಕು ಎಂದರೆ 4–5 ಗಂಟೆ ಪ್ರಯಾಣವಾಗುತ್ತಿತ್ತು. ಈಗ ರಸ್ತೆ ಅಭಿವೃದ್ಧಿಯಾಗಿದೆ. ಪ್ರತಿವರ್ಷ ಲಕ್ಷಾಂತರ ಜನ ಕಾವೇರಿ ನದಿ ದಾಟಿಕೊಂಡು ಕ್ಷೇತ್ರಕ್ಕೆ ಬರುತ್ತಾರೆ. ಇದಕ್ಕೆ ಅನುಕೂಲವಾಗುವಂತೆ ಮೇಕೆದಾಟು ಆದ ನಂತರ ಮೇಲ್ಸೇತುವೆ ರಸ್ತೆ ನಿರ್ಮಾಣದ ಬಗ್ಗೆ ಯೋಚನೆ ಮಾಡಲಾಗುವುದು. ಕಾವೇರಿ ಜಲಾನಯನ ಪ್ರದೇಶದಲ್ಲಿ ಏನೇನು ಕೆಲಸ ಮಾಡಬೇಕು ಎಂದು ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

'ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸುವ ಮೂಲಕ ಆಚಾರ ವಿಚಾರಗಳನ್ನು ಜನರಿಗೆ ತಿಳಿಸಬೇಕು ಎನ್ನುವುದು ನಮ್ಮ ಆಲೋಚನೆಯಾಗಿದೆ' ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.