
ಚಾಮರಾಜನಗರ: ಕರ್ನಾಟಕದಿಂದ ತೆರಳಿದ್ದ ಶಬರಿಮಲೆ ಯಾತ್ರಿಗಳ ವಾಹನ ತಡೆದು ಕನ್ನಡಿಗರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಭಾನುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ್ದ ಪ್ರತಿಭಟನಾನಿಕರು ತಮಿಳುನಾಡು, ಕೇರಳ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡು, ಕೇರಳ ಸರ್ಕಾರಗಳು ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದು ಕನ್ನಡ ವಿರೋಧಿ ನೀತಿಯನ್ನು ಅನುಸರಿಸುತ್ತಿವೆ ಎಂದರು.
ತಮಿಳುನಾಡಿನಲ್ಲಿ ಕರ್ನಾಟಕದ ಬಾವುಟ ಹಾಕಿಕೊಂಡು ರಾಜ್ಯದ ವಾಹನಗಳು ಹೋದರೆ ಕಿತ್ತುಹಾಕಿ ದೌರ್ಜನ್ಯ, ದಬ್ಬಾಳಿಕೆ ಮಾಡಲಾಗುತ್ತಿದೆ. ಇಂತಹ ಘಟನೆಗಳನ್ನು ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಕೇರಳ, ತಮಿಳುನಾಡು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಹೇಳಿದರು.
ಕನ್ನಡಿಗರ ಮೇಲೆ ಹಲ್ಲೆ ಅತ್ಯಂತ ಖಂಡನೀಯವಾಗಿದ್ದು ಮುಂದೆ ಇಂತಹ ಘಟನೆಗಳು ಮರುಕಳಿಸಿದರೆ ಎರಡು ರಾಜ್ಯಗಳ ಗಡಿ ಬಂದ್ ಮಾಡಬೇಕಾಗುತ್ತದೆ. ಕರ್ನಾಟಕ ಸರ್ಕಾರ ಕೂಡಲೇ ತಮಿಳುನಾಡು ಹಾಗೂ ಕೇರಳ ಸರ್ಕಾರ ಜೊತೆ ಮಾತನಾಡಿ ಕನ್ನಡಿಗರಿಗೆ ಸೂಕ್ತ ರಕ್ಷಣೆ ಕೊಡಿಸಬೇಕು ಎಂದು ಶೀನಿವಾಸಗೌಡ ಒತಾಯಿಸಿದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಸುವರ್ಣ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಸುರೇಶ್ ವಾಜಪೇಯಿ, ರಾಚಪ್ಪ, ರಾ.ಜಗದೀಶ್, ಕೆಂಪರಾಜು, ಜಗದೀಶ್, ಲೋಕೇಶ್, ಜಿ.ಮಹೇಶ್, ಚಾ.ಸಿ.ಸಿದ್ದರಾಜು ಹಾಗೂ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.