ಸಂತೇಮರಹಳ್ಳಿ: ಸಮರ್ಪಕವಾಗಿ ವಿದ್ಯುತ್ ನೀಡದ ಪರಿಣಾಮ ಕುಡಿಯುವ ನೀರಿಗೆ ತೊಂದರೆಯಾಗಿದೆ ಎಂದು ಆರೋಪಿಸಿ ಸೋಮವಾರ ರೈತ ಸಂಘಟನೆಯ ಕಾರ್ಯಕರ್ತರು ಇಲ್ಲಿನ ಚಾಮುಂಡೇಶ್ವರಿ ವಿದ್ಯುತ್ ಕಚೇರಿ ಮುಂಭಾಗ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಹೆದ್ದಾರಿಯಲ್ಲಿ ಜಮಾಯಿಸಿದ ಕಾರ್ಯಕರ್ತರು ಅಧಿಕಾರಿಗಳ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯುತ್ ಸರಬರಾಜು ಕಚೇರಿಯಿಂದ ಹೊನ್ನೂರು, ಮೆಲ್ಲಹಳ್ಳಿ, ದುಗ್ಗಹಟ್ಟಿ ಹಾಗೂ ಅಂಬಳೆ ಗ್ರಾಮಗಳಿಗೆ ನಾಲ್ಕು ದಿನಗಳಿಂದ ಸಮರ್ಪಕವಾಗಿ ಸರಬರಾಜಾಗುತ್ತಿಲ್ಲ. ಗ್ರಾಮಗಳಿಗೆ ವಿದ್ಯುತ್ ಪೂರೈಕೆ ಇಲ್ಲದೆ ಕುಡಿಯುವ ನೀರಿಗೆ ತೊಂದರೆಯಾಗಿದೆ. ನಿವಾಸಿಗಳು ಕುಡಿಯುವ ನೀರಿಗಾಗಿ ಅಲೆದಾಡಬೇಕಾಗಿದೆ ಎಂದು ಮುಖಂಡರು ಅಸಮಾಧಾನ ಹೊರಹಾಕಿದರು.
ಸಮರ್ಪಕ ವಿದ್ಯುತ್ ಪೂರೈಸುವಂತೆ ಸೆಸ್ಕ್ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಕೂಡಲೇ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.
ಸಾಮೂಹಿಕ ರೈತ ಸಂಘಟನೆಯ ಮುಖಂಡರಾದ ಹೊನ್ನೂರು ಪ್ರಕಾಶ್, ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಬಸವಣ್ಣ, ತಾಲ್ಲೂಕು ಅಧ್ಯಕ್ಷ ಸಿದ್ದಲಿಂಗಸ್ವಾಮಿ, ಅಂಬಳೆ ಶಿವಕುಮಾರ್, ಸತೀಶ್, ಪ್ರಸನ್ನ, ಯೋಗೇಂದ್ರ, ನಾಗಾರ್ಜುನ್, ರವೀಶ್, ಕೂಸಪ್ಪ, ಅಂಬರೀಶ್ ನಟೇಶ್ ಪ್ರತಿಭಟನೆಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.