ADVERTISEMENT

ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹರಸಾಹಸ: ವಿ.ಸೋಮಣ್ಣ ಟೀಕೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2025, 5:37 IST
Last Updated 19 ಜುಲೈ 2025, 5:37 IST
ಕೊಳ್ಳೇಗಾಲ ನಗರದ ಮಾನಸ ಶಿಕ್ಷಣ ಸಂಸ್ಥೆಗೆ ಭೇಟಿನೀಡಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ದತ್ತೇಶ್ ಕುಮಾರ್ ಸನ್ಮಾನಿಸಿದರು
ಕೊಳ್ಳೇಗಾಲ ನಗರದ ಮಾನಸ ಶಿಕ್ಷಣ ಸಂಸ್ಥೆಗೆ ಭೇಟಿನೀಡಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ದತ್ತೇಶ್ ಕುಮಾರ್ ಸನ್ಮಾನಿಸಿದರು   

ಕೊಳ್ಳೇಗಾಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಅಲುಗಾಡುತ್ತಿದ್ದು ಗಟ್ಟಿಮಾಡಿಕೊಳ್ಳಲು ಹರಸಾಹಸಪಡುತ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ನಗರದ ಮಾನಸ ಶಿಕ್ಷಣ ಸಂಸ್ಥೆಗೆ ಭೇಟಿನೀಡಿ ಮಾತನಾಡಿದ ಅವರು, ಅಧಿಕಾರ ಬದಲಾವಣೆ ಸಂಬಂಧ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಸಂದರ್ಭ ಒಪ್ಪಂದ ನಡೆದಿತ್ತು. ಈ ವಿಚಾರ ಸಿದ್ದರಾಮಯ್ಯ ಅವರಿಗೆ ಚೆನ್ನಾಗಿ ತಿಳಿದಿದೆ. ರಾಜ್ಯದಲ್ಲಿ ಆಡಳಿತಯಂತ್ರ ಸಂಪೂರ್ಣ ಕುಸಿದಿದ್ದು ಮುಚ್ಚಿಕೊಳ್ಳಲು ಮೈಸೂರಿನಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ ಆಯೋಜಿಸಿದ್ದಾರೆ ಎಂದರು.

ರಾಜ್ಯ ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲ; ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುವ ಹಣ ಸರಿಯಾಗಿ ಬಳಕೆಯಾಗುತ್ತಿಲ್ಲ. ನಿರ್ಧಿಷ್ಟ ಯೋಜನೆಗೆ ಅನುದಾನ ನೀಡಿದರೆ ಮತ್ತೊಂದು ಯೋಜನೆಗೆ ಖರ್ಚು ಮಾಡುತ್ತಾರೆ. ಕಾಂಗ್ರೆಸ್‌ನ ಎರಡು ವರ್ಷಗಳ ಆಡಳಿತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಸುಳ್ಳು ಹೇಳಿದ್ದಾರೆ ಎಂದು ವ್ಯಂಗ್ಯವಾಡಿದರು.

ADVERTISEMENT

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಮಾತನಾಡುವುದಿಲ್ಲ, ರೈಲ್ವೆ ಖಾತೆ ಸಚಿವನಾಗಿ ಕೆಲಸ ಮಾಡುತ್ತಿದ್ದು ನನ್ನ ಗುರಿ ಅಭಿವೃದ್ಧಿಯೇ ಹೊರತು ಅಧಿಕಾರವಲ್ಲ. ಪಕ್ಷದಲ್ಲಿ ಹಿರಿಯ ಮುಖಂಡರು ಸೂಚಿಸುವ ಕೆಲಸ ಮಾಡುತ್ತೇನೆ. ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಪಕ್ಷಕ್ಕಿಂತ ದೇಶ ಮುಖ್ಯ ಎಂಬ ತತ್ವದಡಿ ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇವೆ ಎಂದರು.

ಹಿಂದೆ, ಚಾಮರಾಜನಗರ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುವಂತೆ ಕೇಂದ್ರ ಸಚಿವ ಅಮಿತ್ ಶಾ ಸೂಚನೆಯಂತೆ ಎರಡೂ ಕಡೆ ಸ್ಪರ್ಧಿಸಿದೆ, ಆದರೆ ಎರಡೂಕಡೆ ಸೋಲಾಯಿತು. ಕೂಡಲೇ ಪಕ್ಷದ ಹಿರಿಯ ಮುಖಂಡರು ರಾಜ್ಯಸಭಾ ಸದಸ್ಯನಾಗಿ ಆಯ್ಕೆ ಮಾಡುವುದಾಗಿ ಹೇಳಿದರೂ  ತಿರಸ್ಕರಿಸಿ ಪಕ್ಷ ಸಂಘಟನೆ ಮಾಡಿದೆ. ಬಳಿಕ ತುಮಕೂರು ಕ್ಷೇತ್ರದ ಲೋಕಸಭಾ ಸದಸ್ಯನಾಗಿ ಆಯ್ಕೆಯಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದೇನೆ ಎಂದರು.

ರೈಲ್ವೆ ಸಚಿವನಾಗಿ ಸಾವಿರಾರು ಕೋಟಿ ಅನುದಾನ ತಂದು ಕೆಲಸ ಮಾಡುತ್ತಿದ್ದೇನೆ. ಮುಂದೆ ರಾಜ್ಯದ ರೈಲ್ವೆ ಯೋಜನೆಗಳಿಗೆ ಹೆಚ್ಚು ಅನುದಾನ ತಂದು ಅಭಿವೃದ್ಧಿ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಹನೂರು ಶಾಸಕ ಮಂಜುನಾಥ್, ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ದತ್ತೇಶ್ ಕುಮಾರ್, ಮುಖಂಡ ನಿಶಾಂತ್, ರಾಮಚಂದ್ರ ಹಾಗೂ ಮುಖಂಡರು ಇದ್ದರು.

ರೈಲ್ವೆ ಯೋಜನೆಗೆ ವಿರೋಧ

‘ಚಾಮರಾಜನಗರದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ರೈಲ್ವೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡು ಬಾರಿ ಪತ್ರ ಬರೆಯಲಾಗಿದ್ದು ಕಂದಾಯ ಸಚಿವರು ಕ್ಷೇತ್ರದ ಸಂಸದರು ಸಚಿವ ಮಹದೇವಪ್ಪ ಶಾಸಕ ಪುಟ್ಟರಂಗಶೆಟ್ಟಿ ಬಳಿಯೂ ಚರ್ಚಿಸಿದ್ದೇನೆ. ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಿ ಎಂದು ಪತ್ರ ಬರೆದಿದ್ದಾರೆ’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.