ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಕಾಲದಲ್ಲಿ ಜಾರಿಯಾದ ಯೋಜನೆಗಳು ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಮುನ್ನುಡಿ ಬರೆದವು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ನಿರ್ಮಿಸಿರುವ ಡಿ.ದೇವರಾಜ ಅರಸು ಸಾರ್ವಜನಿಕ ಮಾದರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಉದ್ಘಾಟಿಸಿ ಮಾತನಾಡಿದ ಅವರು, ₹ 3.70 ಕೋಟಿ ವೆಚ್ಚದಲ್ಲಿ ವಸತಿ ನಿಲಯ ನಿರ್ಮಿಸಲಾಗಿದ್ದು ಶೀಘ್ರ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದರು.
ಇಂದಿರಾಗಾಂಧಿ ದೇಶದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ 20 ಅಂಶಗಳ ಕಾರ್ಯಕ್ರಮಗಳನ್ನು ಜಾರಿಗೆ ತಂದು ದೇಶದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದರು. ಇಂದಿರಾಗಾಂಧಿ ಅವರ ಜನಪರ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ದೇವರಾಜ ಅರಸು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಿದರು ಎಂದರು.
‘ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ರಚನೆ ಮಾಡುವ ಮೂಲಕ ಹಿಂದುಳಿದ ವರ್ಗಗಳ ಅಭಿವೃದ್ಧಿಗೂ ಕಾರಣರಾದರು. ಕಪ್ಪುಹಲಗೆ ಯೋಜನೆ ಸೇರಿದಂತೆ ಜನಮಾನಸದಲ್ಲಿ ಉಳಿಯುವಂತಹ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದರು. ಹಿಂದೆ ಶಾಲಾ ಕೊಠಡಿಗಳ ಕೊರತೆ ಎದುರಾದಾಗ ಎಲ್ಲವೂ ಮುನಿಸಿಪಾಲ್ ಹೈಸ್ಕೂಲ್, ಚಾವಡಿಗಳಲ್ಲಿ ಮಕ್ಕಳಿಗೆ ಪಾಠ ಹೇಳಿಕೊಡಲಾಗುತ್ತಿತ್ತು. ಪ್ರಸ್ತುತ ಹಾಸ್ಟೆಲ್ ಸೌಲಭ್ಯಗಳಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ’ ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಅಧ್ಯಕ್ಷ ಹೆಚ್.ವಿ.ಚಂದ್ರು, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿದರು. ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲೇಶ್, ಉಪಾಧ್ಯಕ್ಷೆ ರಾಜಮ್ಮ, ಸದಸ್ಯ ರವಿ, ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಎಇಇ ಮಹೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಎನ್.ವಿಶ್ವನಾಥ್, ತಾಲ್ಲೂಕು ಹಿಂದುಳಿದ ಕಲ್ಯಾಣಾಧಿಕಾರಿ ರೇಖಾ, ಗುತ್ತಿಗೆದಾರ ನರಸಿಂಹಯ್ಯ, ವಾರ್ಡನ್ ಶಿಲ್ಪಶ್ರೀ ಇದ್ದರು.
ಶಿಕ್ಷಣದಿಂದಲ್ಲೇ ದೇಶದ ಅಭಿವೃದ್ಧಿ ಸಾಧ್ಯ ಎಂದು ಮನಗಂಡಿದ್ದ ದೇವರಾಜ ಅರಸು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದರುಸಿ.ಪುಟ್ಟರಂಗಶೆಟ್ಟಿ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.