ADVERTISEMENT

ಬಿಜೆಪಿ ಹಸ್ತಕ್ಷೇಪ ಇಲ್ಲ, ಕಾನೂನಿನ ಅಡಿಯಲ್ಲಿ ಕ್ರಮ: ಶ್ರೀನಿವಾಸ ಪ್ರಸಾದ್‌

ಶಿವಕುಮಾರ್‌ ಬಂಧನ: ಗಲಾಟೆ, ಪ್ರತಿಭಟನೆಯಿಂದ ಪ್ರಯೋಜನವಿಲ್ಲ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2019, 15:02 IST
Last Updated 4 ಸೆಪ್ಟೆಂಬರ್ 2019, 15:02 IST
ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಅವರು ಬುಧವಾರ ನಗರಕ್ಕೆ ಭೇಟಿ ನೀಡಿದರು 
ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಅವರು ಬುಧವಾರ ನಗರಕ್ಕೆ ಭೇಟಿ ನೀಡಿದರು    

ಚಾಮರಾಜನಗರ: ‘ಕಾಂಗ್ರೆಸ್‌ ಶಾಸಕ ಡಿ.ಕೆ.ಶಿವಕುಮಾರ್‌ ಅವರ ಬಂಧನ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಹಸ್ತಕ್ಷೇಪ ಮಾಡಿಲ್ಲ. ತನಿಖಾ ಸಂಸ್ಥೆಗಳು ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಂಡಿವೆ’ ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಿವಕುಮಾರ್‌ ಅವರ ಮೇಲೆ ನಮಗೆ ಯಾವ ವೈರತ್ವವೂ ಇಲ್ಲ. ದ್ವೇಷವೂ ಇಲ್ಲ. ಈ ವಿಚಾರದಲ್ಲಿ ರಾಜಕಾರಣ ಮಾಡಬೇಕಾಗಿಯೂ ಇಲ್ಲ’ ಎಂದರು.

‘ಕಾನೂನಿಗಿಂತ ಯಾರೂ ಮೇಲಲ್ಲ. ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಿವಕುಮಾರ್‌ ಅವರ ಆಸ್ತಿ, ಆದಾಯ, ವ್ಯವಹಾರದ ಬಗ್ಗೆ ತನಿಖೆ ನಡೆಸಿ, ಅವರನ್ನು ವಿಚಾರಣೆ ನಡೆಸಿದ್ದಾರೆ. ನಂತರವಷ್ಟೇ ಅವರ ಬಂಧನವಾಗಿದೆ. ಪ್ರಕರಣ ಈಗ ನ್ಯಾಯಾಲಯದ ಮೆಟ್ಟಿಲೇರಿದೆ. ಶಿವಕುಮಾರ್‌ ಅವರಿಗೆ ಕಾನೂನು ಹೋರಾಟ ಮಾಡುವುದಕ್ಕೆ ಅವಕಾಶ ಇದೆ. ಬಂದ್‌, ಗಲಾಟೆ ಮಾಡುವುದರಿಂದ ಏನೂ ಪ್ರಯೋಜನ ಇಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್‌ ಮುಖಂಡರು ಹೇಳುತ್ತಿದ್ದಾರಲ್ಲ ಎಂದು ಕೇಳಿದ್ದಕ್ಕೆ, ‘ಯಾರು ಏನು ಬೇಕಾದರೂ ಹೇಳಬಹುದು. ಆದರೆ, ಇದರಲ್ಲಿ ರಾಜಕೀಯ ಹಸ್ತಕ್ಷೇಪ ನಡೆದಿಲ್ಲ. ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿವೆ’ ಎಂದರು.

ಹಾಗಾದರೆ, ಕಾಂಗ್ರೆಸ್‌ ಈ ವಿಚಾರವನ್ನು ರಾಜಕೀಯಗೊಳಿಸುತ್ತಿದೆಯೇ ಎಂದು ಕೇಳಿದ್ದಕ್ಕೆ, ‘ಹೌದು. ನಿನ್ನೆ ಮೊನ್ನೆವರೆಗೂ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕಾಗಿ ಶಿವಕುಮಾರ್‌, ಗುಂಡೂರಾವ್‌ ಕಚ್ಚಾಡುತ್ತಿದ್ದರು. ಈಗ ಒಂದಾಗಿದ್ದಾರೆ. ಅದೇ ರೀತಿ ಸಿದ್ದರಾಮಯ್ಯ, ದೇವೇಗೌಡ ಅವರು ಪರಸ್ಪರ ಉರಿದು ಹಾರುತ್ತಿದ್ದರು. ಈಗೆಲ್ಲವನ್ನೂ ಮರೆದು ಒಂದಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.