ಚಾಮರಾಜನಗರ: 'ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇನ್ನೂ ಸಮಯ ಇದೆ. ಮಕ್ಕಳ ಯೋಗಕ್ಷೇಮಕ್ಕೆ ತೊಂದರೆಯಾಗದಂತೆ ನಿರ್ಧಾರ ಕೈಗೊಳ್ಳಲಾಗುವುದು' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಮಂಗಳವಾರ ಸ್ಪಷ್ಟಪಡಿಸಿದರು.
ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪರೀಕ್ಷೆ ನಡೆಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಕ್ಕಳು ಕೂಡ ಪರೀಕ್ಷೆ ನಡೆಸಲೇಬೇಕು ಎಂಬ ಅಭಿಯಾನ ನಡೆಸುತ್ತಿದ್ದಾರೆ. ಅವರು ಕೂಡ ಸಿದ್ಧತೆಯಲ್ಲಿ ತೊಡಗಿದ್ದಾರೆ' ಎಂದು ಹೇಳಿದರು.
'ಪದೇ ಪದೇ ಇದರ ಬಗ್ಗೆ ಚರ್ಚೆ ಮಾಡುವುದರಿಂದ ಮಕ್ಕಳಲ್ಲಿ ಗೊಂದಲ ಉಂಟಾಗುತ್ತದೆ. ಜೂನ್ 21ರವರೆಗೆ ಸಮಯ ಇದೆ. ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಕೈಗೊಳ್ಳಲಾಗುತ್ತದೆ' ಎಂದರು.
ಕೋವಿಡ್ ನಿಯಂತ್ರಣಕ್ಕಾಗಿ ಶಾಲೆಗಳನ್ನೆಲ್ಲ ಬಂದ್ ಮಾಡಲಾಗಿದೆ, ಶಿಕ್ಷಕರಿಗೆ ರಜೆ ನೀಡಲಾಗಿದೆಯೇ ಅಥವಾ ಅವರು ಕರ್ತವ್ಯಕ್ಕೆ ಹಾಜರಾಗಬೇಕೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, 'ಮಾರ್ಗದರ್ಶಿ ಸೂತ್ರದಲ್ಲಿ ಎಲ್ಲವನ್ನೂ ಸ್ಪಷ್ಟವಾಗಿ ಹೇಳಲಾಗಿದೆ. ಶಿಕ್ಷಕರ ವಿಚಾರದಲ್ಲಿ ಆಯಾ ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ನಿರ್ಧಾರ ಕೈಗೊಳ್ಳಲಿದ್ದಾರೆ' ಎಂದಷ್ಟೇ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.