ಯಳಂದೂರು: ರೈತರಿಗೆ ಹೆಚ್ಚಿನ ಆದಾಯ ತಂದುಕೊಡುವ ತಾಳೆ ಬೆಳೆಯನ್ನು ರೈತರು ಹೆಚ್ಚಾಗಿ ಬೆಳೆಯಲು ಮುಂದಾಗಬೇಕು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ನಿರ್ದೇಶಕ ಜಿ.ಎಸ್. ರಾಜು ಸಲಹೆ ನೀಡಿದರು.
ತಾಲ್ಲೂಕಿನ ಹೊನ್ನೂರು ಗ್ರಾಮದಲ್ಲಿ ಈಚೆಗೆ ತಾಳೆ ಬೆಳೆ ಅಭಿವೃದ್ಧಿ ಯೋಜನೆಯಡಿ ರೈತ ಪ್ರತಾಪ್ ವಿ.ಅರಸ್ ಜಮೀನಿನಲ್ಲಿ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಹಾಗೂ ಪತಂಜಲಿ ಫುಡ್ಸ್ ಲಿಮಿಟೆಡ್ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮೆಗಾ ತಾಳೆ ಕೃಷಿ ಪ್ರೋತ್ಸಾಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಭಾರತದಲ್ಲಿ ಖಾದ್ಯ ತೈಲದ ವಾರ್ಷಿಕ ಬೇಡಿಕೆಯನ್ನು ಸ್ಥಳೀಯ ಉತ್ಪಾದನೆಯಿಂದ ಪೂರೈಸಲು ಸಾಧ್ಯವಾಗುತ್ತಿಲ್ಲ. ಸುಮಾರು 1 ಲಕ್ಷ ಕೋಟಿ ಮೌಲ್ಯದ ಖಾದ್ಯ ತೈಲವನ್ನು ಹೊರ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಖಾದ್ಯ ತೈಲದ ಆಮದು ವೆಚ್ಚ ತಗ್ಗಿಸುವ ನಿಟ್ಟಿನಲ್ಲಿ ತೈಲ ಬೆಳೆಗಳ ಉತ್ಪಾದನೆಗೆ ಹೆಚ್ಚು ಆದ್ಯತೆ ನೀಡಲು ಕೇಂದ್ರ ಸರ್ಕಾರ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಪ್ರಾರಂಭಿಸಿದೆ ಎಂದು ತಿಳಿಸಿದರು.
ರೈತರಾದ ಪ್ರತಾಪ್ ವಿ.ಅರಸ್ ಮಾತನಾಡಿ, ಎರಡು ತೆಂಗು ಬೆಳೆಗೆ ಒಂದು ತಾಳೆ ಬೆಳೆ ಸಮನಾಗಿದೆ. ತಾಳೆ ಬೆಳೆ ಹೆಚ್ಚು ಲಾಭಾಂಶ ನೀಡುತ್ತಿದ್ದು, ರೈತರು ತಾಳೆ ಬೆಳೆಯಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭ ತೋಟಗಾರಿಕೆ ಇಲಾಖೆ ಅಧಿಕಾರಿ ಶಿವರಂಜಿನಿ, ಪತಂಜಲಿ ಫುಡ್ಸ್ ಲಿಮಿಟೆಡ್ನ ಪಿ.ಸಿ.ಮೂರ್ತಿ, ನಾಗರಾಜು ಹಾಗೂ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.