
ನ್ಯಾಯಾಲಯ
(ಸಾಂದರ್ಭಿಕ ಚಿತ್ರ)
ಚಾಮರಾಜನಗರ: ಹನೂರು ತಾಲ್ಲೂಕಿನ ಸುಳ್ವಾಡಿ ಗ್ರಾಮದ ಕಿಚ್ಗುತ್ ಮಾರಮ್ಮನ ದೇಗುಲ ಕಟ್ಟಡದ ಶಂಕುಸ್ಥಾಪನೆ ವೇಳೆ ವಿತರಿಸಿದ್ದ ಪ್ರಸಾದ ಸೇವಿಸಿ 17 ಭಕ್ತರು ಮೃತಪಟ್ಟ ಪ್ರಕರಣಗಳಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಮಂಗಳವಾರ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿತು.
ಪ್ರಕರಣದಲ್ಲಿ, 7 ವರ್ಷಗಳಿಂದ ಜೈಲಿನಲ್ಲಿರುವ ಎರಡು, ಮೂರು ಹಾಗೂ ನಾಲ್ಕನೇ ಆರೋಪಿಗಳಾದ ಮಾದೇಶ, ಆಂಬಿಕಾ, ಹಾಗೂ ಡೊಡ್ಡಯ್ಯ ಜಾಮೀನು ಕೋರಿ ಈಚೆಗೆ ಅರ್ಜಿ ಸಲ್ಲಿಸಿದ್ದರು.
ವಿವರ:
ಡಿ.14, 2018ರಲ್ಲಿ ನಡೆದಿದ್ದ ಪ್ರಕರಣದಲ್ಲಿ 17 ಭಕ್ತರು ಮೃತಪಟ್ಟು 117ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರು. ದೇಗುಲದ ಆಡಳಿತ ಮಂಡಳಿಯ ಅಧಿಕಾರ ಹಿಡಿಯುವ ಸಲುವಾಗಿ ಒಂದು ಬಣದ ವಿಷಕಾರಿ ಸಂಚಿನಿಂದ ದುರ್ಘಟನೆ ನಡೆದಿತ್ತು.
ಸಾಲೂರು ಮಠದ ಅಂದಿನ ಕಿರಿಯ ಸ್ವಾಮೀಜಿ ಇಮ್ಮಡಿ ಮಹದೇವಸ್ವಾಮಿ, ಮಾದೇಶ, ಅಂಬಿಕಾ ಹಾಗೂ ದೊಡ್ಡಯ್ಯನನ್ನು ಬಂಧಿಸಿ ಐಪಿಸಿ ಕಲಂ 118, 120 ಬಿ, 326, 307, 302 ಮತ್ತು 34 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ತಡೆ ಕಾಯ್ದೆಯ ಕಲಂ 3 (1)(2) (ವಿ) (ವಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.
ಗಂಭೀರ ಅನಾರೋಗ್ಯದ ಕಾರಣದಿಂದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ 2025ರ ನ.12ರಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅದರ ಬೆನ್ನಲ್ಲೇ ಉಳಿದ ಆರೋಪಿಗಳೂ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.