ADVERTISEMENT

ಚಾಮರಾಜನಗರ: ಜಿಲ್ಲಾ ದಸರಾ ಮಹೋತ್ಸವಕ್ಕೆ ಭಾನುವಾರ ತೆರೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2021, 7:59 IST
Last Updated 10 ಅಕ್ಟೋಬರ್ 2021, 7:59 IST
ಜಿಲ್ಲಾ ದಸರಾ ಅಂಗವಾಗಿ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿನ ಪ್ರಧಾನ ವೇದಿಕೆಯಲ್ಲಿ ಶನಿವಾರದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ಸೇರಿದ್ದ ಜನಸ್ತೋಮ
ಜಿಲ್ಲಾ ದಸರಾ ಅಂಗವಾಗಿ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿನ ಪ್ರಧಾನ ವೇದಿಕೆಯಲ್ಲಿ ಶನಿವಾರದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ಸೇರಿದ್ದ ಜನಸ್ತೋಮ   

ಚಾಮರಾಜನಗರ: ಮೈಸೂರು ದಸರಾ ಅಂಗವಾಗಿ ಜಿಲ್ಲೆಯಲ್ಲೂ ಹಮ್ಮಿಕೊಳ್ಳಲಾಗಿರುವ ನಾಲ್ಕು ದಿನಗಳ ಜಿಲ್ಲಾ ದಸರಾ ಮಹೋತ್ಸವಕ್ಕೆ ಭಾನುವಾರ ತೆರೆ ಬೀಳಲಿದೆ.

ಕೋವಿಡ್‌ ಕಾರಣದಿಂದ ಈ ಬಾರಿ ದಸರಾ ಕಾರ್ಯಕ್ರಮ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗಿದೆ. ಕೊನೆಯ ದಿನವಾದ ಭಾನುವಾರವೂ ಜೆ.ಎಚ್‌.ಪಟೇಲ್‌ ಸಭಾಂಗಣ ಮತ್ತು ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ನಿರ್ಮಿಸಲಾಗಿರುವ ಪ್ರಧಾನ ವೇದಿಕೆಯಲ್ಲೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೇ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, ರಾತ್ರಿ 9.50ರವರೆಗೂ ನಡೆಯಲಿದೆ. ಪ್ರಧಾನ ವೇದಿಕೆಯಲ್ಲಿ ಸಂಜೆ. 4 ಗಂಟೆಗೆ ಆರಂಭವಾಗಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ ರಾತ್ರಿ 9.45ರವರೆಗೆ ಮುಂದುವರೆಯಲಿದೆ.

ADVERTISEMENT

ಕಾಡದ ಪ್ರೇಕ್ಷಕರ ಕೊರತೆ: ಕೋವಿಡ್‌ ಕಾರಣಕ್ಕೆ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಪ್ರಧಾನ ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಭಾಂಗಣ ಪೂರ್ತಿ ಜನರಿದ್ದರು. ಶುಕ್ರವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಜನರು ಕಿಕ್ಕಿರಿದು ತುಂಬಿದ್ದರು. ಸಭಾಂಗಣ ಮಾತ್ರವಲ್ಲದೇ, ಹೊರಗಡೆಯೂ ನೂರಾರು ಮಂದಿ ನಿಂತುಕೊಂಡೇ ಕಾರ್ಯಕ್ರಮಗಳನ್ನು ವೀಕ್ಷಿಸಿದ್ದರು.

ಪ್ರತಿ ದಿನ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಸ್ಥಳೀಯ ಕಲಾವಿದರ ಪ್ರದರ್ಶನಗಳನ್ನು ಚಪ್ಪಾಳೆ, ಶಿಳ್ಳೆ, ಕೂಗಾಟ, ಚೀರಾಟಗಳೊಂದಿಗೆ ಸಂಭ್ರಮಿಸುತ್ತಿದ್ದಾರೆ.

ದಸರಾ ಕವಿಗೋಷ್ಠಿ
ಜಿಲ್ಲಾ ದಸರಾ ಮಹೋತ್ಸವ ಅಂಗವಾಗಿ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲಿ ಭಾನುವಾರ (ಅ.10) ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪ್ರಶಸ್ತಿ ಪುರಸ್ಕೃತ ಸಾಹಿತಿ ಸ್ವಾಮಿ ಪೊನ್ನಾಚಿ ಅವರು ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟಿಸುವರು. ಸಾಹಿತಿ ಮಹದೇವ ಶಂಕನಪುರ ಅವರು ಅಧ್ಯಕ್ಷತೆ ವಹಿಸುವರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಪ್ರೊ.ಎಚ್.ಎಸ್.ಪ್ರೇಮಲತಾ ಅವರು ಆಶಯ ನುಡಿಗಳನ್ನಾಡುವರು. ಚಾಮರಾಜನಗರದ ಕವಿಗಳು ಕವನಗಳ ವಾಚನ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.