ADVERTISEMENT

ಚಾಮರಾಜನಗರದಲ್ಲಿ ಧ್ರುವಗೆ ಬೆಂಬಲ

ಬಿಜೆಪಿ ವಿರುದ್ದ ಯುವ ಕಾಂಗ್ರೆಸ್ ಪ್ರತಿಭಟನೆ: ಎಚ್ಚರಿಕೆಯ ಸಂದೇಶ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2021, 13:10 IST
Last Updated 25 ಆಗಸ್ಟ್ 2021, 13:10 IST
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ವಿರುದ್ಧ ಬಿಜೆಪಿಯವರು ಪ್ರತಿಭಟನೆ ನಡೆಸಿರುವುದನ್ನು ಖಂಡಿಸಿ, ಜಿಲ್ಲಾ ಕಾಂಗ್ರೆಸ್‌ ಯುವ ಸಮಿತಿ ಹಾಗೂ ವಿವಿಧ ಘಟಕಗಳ ಮುಖಂಡರು, ಕಾರ್ಯಕರ್ತರು ಪ್ರತಿಭಟಿಸಿದರು
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ವಿರುದ್ಧ ಬಿಜೆಪಿಯವರು ಪ್ರತಿಭಟನೆ ನಡೆಸಿರುವುದನ್ನು ಖಂಡಿಸಿ, ಜಿಲ್ಲಾ ಕಾಂಗ್ರೆಸ್‌ ಯುವ ಸಮಿತಿ ಹಾಗೂ ವಿವಿಧ ಘಟಕಗಳ ಮುಖಂಡರು, ಕಾರ್ಯಕರ್ತರು ಪ್ರತಿಭಟಿಸಿದರು   

ಚಾಮರಾಜನಗರ: ಭಾರತದಲ್ಲಿ ಆರ್‌ಎಸ್‌ಎಸ್‌ನವರು ನಿಜವಾದ ತಾಲಿಬಾನಿಗಳು ಎಂದು ಹೇಳಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ಅವರನ್ನು ಬೆಂಬಲಿಸಿ ಹಾಗೂ ಅವರ ವಿರುದ್ಧ ಪ್ರತಿಭಟನೆ ನಡೆಸಿರುವ ಬಿಜೆಪಿ ಧೋರಣೆ ಖಂಡಿಸಿ, ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಹಾಗೂ ವಿವಿಧ ಘಟಕಗಳ ಆಶ್ರಯದಲ್ಲಿ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಾವು ಭಾರತೀಯರು-ಕೋಮುವಾದದ ದಲ್ಲಾಳಿಗಳನ್ನು ಸಹಿಸುವುದಿಲ್ಲ ಎಂಬ ಘೋಷಣೆಯೊಂದಿಗೆ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.

ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಸೇರಿದ ಪ್ರತಿಭಟನನಿರತರು ಅಲ್ಲಿಂದ ಮೆರವಣಿಗೆ ಹೊರಟು ಸತ್ತಿ ರಸ್ತೆ, ಡಿವಿಯೇಷನ್ ರಸ್ತೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ, ಕೆಲಕಾಲ ರಸ್ತೆ ತಡೆ ನಡೆಸಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಸರ್ಕಾರದ ವಿರುದ್ದ ಧಿಕ್ಕಾರದ ಘೋಷಣೆ ಕೂಗಿದರು. ಸಿ.ಟಿ.ರವಿ, ಯತ್ನಾಳ ಭಾವಚಿತ್ರ ಹರಿದು ಅಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ಮಾತನಾಡಿ, ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಿದ ಸಂದರ್ಭದಲ್ಲಿ ಇಂದಿರಾಗಾಂಧಿ ಹೆಸರಿನ ಕ್ಯಾಂಟೀನ್ ತೆರೆದಿತ್ತು. ಇಂದಿರಾ ಗಾಂಧಿ ಒಳ್ಳೆಯ ಕೆಲಸ ಮಾಡಿ ರಾಷ್ಟ್ರದ ಆರ್ಥಿಕ ಶಕ್ತಿ ವೃದ್ಧಿಸಿದರು. ಜನಪರ ಯೋಜನೆಗಳ ಕಾಂಗ್ರೆಸ್ ನಾಯಕರ ಹೆಸರನ್ನು ಬದಲಾವಣೆ ಮಾಡಿ ಬಿಜೆಪಿಯವರು ತಮಗೆ ಬೇಕಾದವರ ಹೆಸರನ್ನು ಇಟ್ಟುಕೊಳ್ಳಲು ಹೊರಟಿದ್ದಾರೆ. ಇದನ್ನು ಖಂಡಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿಕೆ ನೀಡಿದ್ದಾರೆ’ ಎಂದು ಸಮರ್ಥಿಸಿಕೊಂಡರು.

‘ತಾಲಿಬಾನಿಗಳು ಧರ್ಮಾಧಾರಿತ ಉಗ್ರವಾದ ಮನೋಭಾವ ಮಾಡಿದ್ದಾರೆ. ಅದೇ ರೀತಿಯಲ್ಲಿ ಬಿಜೆಪಿಯವರು ಉಗ್ರವಾದ ಮನೋಭಾವ ಹೊಂದಿದ್ದಾರೆ ಎಂಬರ್ಥದಲ್ಲಿ ಆರ್‌ಎಸ್‌ಎಸ್‌ ಅನ್ನು ಟೀಕೆ ಮಾಡಿದ್ದಾರೆ ವಿನಾಃ ಬೇರೆ ಯಾವ ದೃಷ್ಟಿಯಿಂದಲ್ಲೂ ಟೀಕೆ ಮಾಡಿಲ್ಲ. ಇದನ್ನು ಅರ್ಥಮಾಡಿಕೊಳ್ಳದ ಬಿಜೆಪಿಯವರು ಕೇವಲ ಪ್ರಚಾರಕ್ಕಾಗಿ ಧ್ರುವನಾರಾಯಣ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ’ ಎಂದು ಆರೋಪಿಸಿದರು.

‘‌ಬಿಜೆಪಿಯವರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿಸೋತು ಮನೆಯಲ್ಲಿ ಕೂತಿರುವ ಧ್ರುವನಾರಾಯಣ ಎಂದು ಹೇಳಿದ್ದಾರೆ. ಅವರು ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪುಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸುವುದಾಗಿ ಬಿಜೆಪಿಯವರು ಹೇಳಿದ್ದಾರೆ. ಒಂದು ವೇಳೆ ಹಾಗೆ ಮಾಡಿದರೆ ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ ವತಿಯಿಂದ ಬಿಜೆಪಿ ಸಚಿವರು, ಶಾಸಕರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಕಪ್ಪುಬಾವುಟ ಪ್ರದರ್ಶಿಸಲಾಗುವುದು’‌ ಎಂದು ರವಿಕುಮಾರ್ ಎಚ್ಚರಿಸಿದರು.

ಕೆಪಿಸಿಸಿ ಸದಸ್ಯ ಸೈಯದ್ ರಫೀ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವು, ಆರ್.ಮಹದೇವು, ಜಿಲ್ಲಾ ವಕ್ತಾರ ವಡಗೆರೆ ದಾಸ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಅಜೀಜ್, ಕಾಗಲವಾಡಿ ಚಂದ್ರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್, ಉಪಾಧ್ಯಕ್ಷರಾದ ಮಧುಸೂದನ್, ಸೋಫಿಯಾ, ಸಾಹುಲ್ ಹಮೀದ್, ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.