ಚಾಮರಾಜನಗರ: ಸ್ವಚ್ಛತೆಯೇ ಸೇವೆ ಜನಾಂದೋಲನ ಅಂಗವಾಗಿ ಭಾನುವಾರ ತಾಲ್ಲೂಕಿನ ಬದನಗುಪ್ಪೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಭಾನುವಾರ ಚಾಲನೆ ನೀಡಿದರು.
ಬದನಗುಪ್ಪೆ ಪಂಚಾಯಿತಿ ವ್ಯಾಪ್ತಿಯ ಪಣ್ಯದಹುಂಡಿ ರೈಲ್ವೆ ನಿಲ್ದಾಣದ ಆವರಣದಲ್ಲಿ ಪ್ಲಾಸ್ಟಿಕ್ ಮತ್ತು ಗಿಡಗಂಟೆಗಳನ್ನು ತೆರವುಗೊಳಿಸಲಾಯಿತು.
ಜಿಲ್ಲೆಯಲ್ಲಿ ಮಹಾತ್ಮ ಗಾಂಧೀಜಿ ಜನ್ಮದಿನದ ಸ್ಮರಣಾರ್ಥವಾಗಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಗೆ ಸಂಬಂಧಿತ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, 15 ದಿನಗಳಿಂದ ಪ್ರತಿದಿನ ಒಂದೊಂದು ಚಟುವಟಿಕೆಯಂತೆ ಶಾಲಾ, ಕಾಲೇಜು ವಿಧ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂ ಸೇವಕರು ಸ್ವಯಂ ಸೇವಾ ಸಂಸ್ಧೆಗಳು, ಆಶಾ, ಅಂಗವಾಡಿ ಕಾರ್ಯಕರ್ತೆಯರು ಈ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.
ಆನಂದ್ ಪ್ರಕಾಶ್ ಮೀನಾ ಮಾತನಾಡಿ, ‘ಕೇಂದ್ರ ಜಲಶಕ್ತಿ ಮಂತ್ರಾಲಯ ಹಾಗೂ ರಾಜ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಾರ್ಗಸೂಚಿಗಳನ್ವಯ ಜಿಲ್ಲೆಯಾದ್ಯಂತ ಬೃಹತ್ ಮಟ್ಟದ ಶ್ರಮದಾನ ಕಾರ್ಯಕ್ರಮವನ್ನು ಸಾರ್ವಜನಿಕ ಸ್ಧಳ, ರಸ್ತೆಬದಿ, ಶಾಲಾ ಆವರಣ, ಆಸ್ಪತ್ರೆ ಆವರಣ, ಸಾರ್ವಜನಿಕ ಕಟ್ಟಡಗಳು ಧಾರ್ಮಿಕ ಕ್ಷೇತ್ರಗಳು ಹಾಗೂ ಪ್ರವಾಸಿತಾಣಗಳಲ್ಲಿ ವಿನೂತನ ರೀತಿಯಲ್ಲಿ ಹಮ್ಮಿಕೊಂಡು ತ್ಯಾಜ್ಯ ಮುಕ್ತ ಭಾರತವನ್ನು ರೂಪಿಸುವಲ್ಲಿ ಯಶಸ್ವಿಯಾಗಬೇಕಿದೆ’ ಎಂದರು.
ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕಿರಣ್ ಪಡ್ನೇಕರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಸಹಾಯಕ ನಿರ್ದೇಶಕರಾದ ಪ್ರಕಾಶ್, ಸ್ವಚ್ಚ ಭಾರತ್ ಮಿಷನ್ (ಗ್ರಾ) ಜಿಲ್ಲಾ ಸಮಾಲೋಚಕ ಎಂ.ಮಹದೇವು, ಪ್ರಭುಸ್ವಾಮಿ, ಜೋಸೆಫ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ.ಕುಮಾರ್, ಮತ್ತು ಆರ್.ಅಂಬಿಕಾ, ಗ್ರಾಮ ಪಂಚಾಯಿತಿ ಸದಸ್ಯರು, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮಾದಪ್ಪ, ಮಹದೇವಸ್ವಾಮಿ, ಕಾರ್ಯದರ್ಶಿ ನಾಗನಾಯಕ, ಲೋಕೇಶ್, ಆಶಾ, ಅಂಗನವಾಡಿ ಕಾರ್ಯಕರ್ತೆಯರು ರೈಲ್ವೆ ಇಲಾಖೆಯ ಕಾರ್ಮಿಕರು ಹಾಗೂ ಸಾರ್ವಜನಿಕರು ಶ್ರಮದಾನದಲ್ಲಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.