ಚಾಮರಾಜನಗರ: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿಗಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾಗಲು ಅರ್ಹತೆ ನೀಡುವ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ರಾಜ್ಯದಾದ್ಯಂತ ಭಾನುವಾರನಡೆಯಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲೆಯಲ್ಲೂ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ.
‘ಪತ್ರಿಕೆ–1’ (ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಬೋಧಿಸುವ ಅಭ್ಯರ್ಥಿಗಳಿಗಾಗಿ) ಮತ್ತು ‘ ಪತ್ರಿಕೆ–2’ (ಹಿರಿಯ ಮತ್ತು ಪ್ರೌಢಶಾಲೆಗಳಲ್ಲಿ ಬೋಧಿಸುವ ಅಭ್ಯರ್ಥಿಗಳಿಗಾಗಿ) ಎಂಬ ಎರಡು ಪರೀಕ್ಷೆಗಳಿಗೆ ಜಿಲ್ಲೆಯಾದ್ಯಂತ 4,757 ಅಭ್ಯರ್ಥಿಗಳು ಹಾಜರಾಗಲಿದ್ದಾರೆ.
‘ಪತ್ರಿಕೆ–1’ರ ಪರೀಕ್ಷೆ ಬೆಳಿಗ್ಗೆ 9ರಿಂದ 12ರವರೆಗೆ 7 ಕೇಂದ್ರಗಳಲ್ಲಿ ನಡೆಯಲಿದ್ದು, 2022 ಅಭ್ಯರ್ಥಿಗಳು ಬರೆಯಲು ಅರ್ಹತೆ ಪಡೆದಿದ್ದಾರೆ. ‘ಪತ್ರಿಕೆ–2’ರ ಪರೀಕ್ಷೆ ಮಧ್ಯಾಹ್ನ 1.30ರಿಂದ 4.30ರವರೆಗೆ 10 ಕೇಂದ್ರಗಳಲ್ಲಿ ನಡೆಯಲಿದೆ. 2,735 ಅಭ್ಯರ್ಥಿಗಳು ಬರೆಯಲಿದ್ದಾರೆ.
ಈ ಪರೀಕ್ಷೆಯಲ್ಲಿ ಶೇ 60ಕ್ಕಿಂತ ಹೆಚ್ಚು ಅಂಕಗಳು ಗಳಿಸಿದವರು ಮಾತ್ರ ಶಿಕ್ಷಕರ ನೇಮಕಾತಿಗಾಗಿ ನಡೆಯುವ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ.
‘ಟಿಇಟಿಯನ್ನು ಯಶಸ್ವಿಯಾಗಿ ನಡೆಸುವ ಸಲುವಾಗಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದೆ. ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಮಂಜುಳಾ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.